ಸಿಬಿಎಸ್‌ಇ: ಇನ್ಮುಂದೆ ಕಡಿವಾಣವಿಲ್ಲದ ಕುದುರೆ!

(ಚಿತ್ರಕೃಪೆ: ಉದಯವಾಣಿ)
ಇದುವರೆವಿಗೆ ರಾಜ್ಯಸರ್ಕಾರದ ಅನುಮತಿ (ನಿರಾಕ್ಷೇಪಣಾ ಪತ್ರ) ಇಲ್ಲದೆ ಸಿ.ಬಿ.ಎಸ್.ಇ ಶಾಲೆಗಳನ್ನು ಶುರುಮಾಡುವಂತಿಲ್ಲಾ ಎಂದಿದ್ದ ನಿಯಮವನ್ನು ಸಡಿಲ ಮಾಡಿರುವ ಕೇಂದ್ರದ ಕ್ರಮದಿಂದಾಗಿ, ರಾಜ್ಯಸರ್ಕಾರದ ಬಳಿಯಿದ್ದ ಒಂದೇ ಒಂದು ಅಂಕುಶವೂ ಇಲ್ಲದಂತಾಗಿರುವ ಕಳವಳಕಾರಿ ಸುದ್ದಿ ೨೭.೧೦.೨೦೧೩ರ ಉದಯವಾಣಿ ದಿನಪತ್ರಿಕೆಯಲ್ಲಿ ಬಂದಿದೆ.

ರಾಜ್ಯಸರ್ಕಾರದ ಬಳಿಯಿದ್ದ ಕಡಿವಾಣ

ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್‌ಇ ಶಾಲೆಗಳು ಸಿಬಿಎಸ್‌ಇ ಬೋರ್ಡ್ ಅಧೀನ ಬರುತ್ತವೆ ಮತ್ತು ಇವುಗಳನ್ನು ಆರಂಭಿಸಲು ರಾಜ್ಯಸರ್ಕಾರದ ಅನುಮತಿ ಕಡ್ಡಾಯ ಎನ್ನಲಾಗಿತ್ತು. 
ಮಾನ್ಯತೆ ನೀಡಲು ಸಿ.ಬಿ.ಎಸ್.ಇ ಬೋರ್ಡು ವಿಧಿಸಿರೋ ಕರಾರು...
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿ.ಬಿ.ಎಸ್.ಇ) ತನ್ನ ಪಠ್ಯಕ್ರಮವನ್ನು ಅನುಸರಿಸಲು ಸಿದ್ಧವಾಗಿರೋ ವಿದ್ಯಾಸಂಸ್ಥೆಗಳಿಗೆ ಆಯಾ ರಾಜ್ಯಸರ್ಕಾರದಿಂದ ನಿರಪೇಕ್ಷಣಾ ಪತ್ರ (N.O.C) ಸಲ್ಲಿಸಬೇಕು ಅನ್ನೋ ನಿಯಮಾನ ಹೊಂದಿದೆ. ಖಾಸಗಿ, ಅನುದಾನಿತ, ಸರ್ಕಾರಿ ಯಾವುದೇ ಶಾಲೆಯಿದ್ದರೂ ಸರ್ಕಾರದ ಅನುಮತಿಯಿಲ್ಲದೆಯೇ ಮಾನ್ಯತೆಯನ್ನು ನೀಡುವಂತೆ ಇಲ್ಲ.
ನಿರಾಕ್ಷೇಪಣಾ ಪತ್ರ ಕೊಡಲು ಇರೋ ನಿಯಮಾ...
ಕರ್ನಾಟಕ ಸರ್ಕಾರವೂ ಕೂಡಾ ಸಿ.ಬಿ.ಎಸ್.ಇ ಶಾಲೆಗಳಿಗೆ ನಿರಾಕ್ಷೇಪಣಾ ಪತ್ರ ಕೊಡಕ್ಕೆ ಅಂತಾನೆ ಒಂದು ನಿಯಮಾನಾ 1989ರಲ್ಲೇ ಮಾಡಿದೆ. ಅದುಕ್ಕೆ ಆಗಿಂದಾಗ್ಗೆ ತಿದ್ದುಪಡಿಗಳನ್ನೂ ಮಾಡಿಕೊಂಡು ಬಂದಿದೆ. ಈ ನಿಯಮದಲ್ಲಿರೋ ಪ್ರಮುಖವಾದ ಅಂಶಗಳು ಹೀಗಿವೆ.
- ರಾಜ್ಯದಿಂದ ರಾಜ್ಯಕ್ಕೆ ವರ್ಗಾವಣೆಗೆ ಬದ್ಧರಾದ ಅಖಿಲ ಭಾರತ ಸೇವೆ, ಕೇಂದ್ರ ಸರ್ಕಾರದ ಸೇವೆ ಮತ್ತು ಕೇಂದ್ರ ಸರ್ಕಾರದ ಉದ್ದಿಮೆಗಳಿಗೆ ಸೇರಿದ ಪೋಷಕರ ಮಕ್ಕಳಿದ್ದಲ್ಲಿ (ಇದನ್ನು ಪುಷ್ಟೀಕರಿಸಲು ಸಂಬಂಧಪಟ್ಟ ಇಲಾಖೆ/ ಸಂಸ್ಥೆಗಳಿಂದ ಧೃಡೀಕರಣ ಪತ್ರ ಸಲ್ಲಿಸುವುದು)
- ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಶಾಖೆಗಳನ್ನು ಹೊಂದಿದ ಹಾಗೂ ಅಂತರ ರಾಜ್ಯ ವರ್ಗಾವಣೆಗೆ ಒಳಪಡುವ ಬ್ಯಾಂಕ್‍ಗಳು, ಸಂಸ್ಥೆಗಳು (ಫರ್ಮುಗಳು) ಅಥವಾ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳಿದ್ದಲ್ಲಿ (ಇದನ್ನು ಪುಷ್ಟೀಕರಿಸಲು ಸಂಬಂಧಪಟ್ಟ ಬ್ಯಾಂಕ್/ ಸಂಸ್ಥೆಗಳಿಂದ ಧೃಡೀಕರಣ ಪತ್ರ ಸಲ್ಲಿಸುವುದು)
ಇದಕ್ಕೆ 2002ರಲ್ಲಿ ಒಂದು ತಿದ್ದುಪಡಿ ಮಾಡಿ, ‘ಕರ್ನಾಟಕ ರಾಜ್ಯಸರ್ಕಾರದ ಭಾಷಾನೀತಿಯನ್ನು ಕಾಲಕಾಲಕ್ಕೆ ನಿಗದಿಪಡಿಸಿದಂತೆ ಪಾಲಿಸತಕ್ಕದ್ದು’ ಎಂದು ಸೇರಿಸಿದ್ದಾರೆ. ಒಂದರಿಂದ ಐದನೇ ತರಗತಿಯವರೆಗೆ ಕಡ್ಡಾಯವಾಗಿ ಮಾತೃಭಾಷೆ ಅಥವಾ ಕನ್ನಡ ಮಾಧ್ಯಮವನ್ನು ಹೊಂದಿರತಕ್ಕದ್ದು.
ಇಂಥಾ ನಿಯಮವಿದ್ದಾಗಲೂ ರಾಜ್ಯಸರ್ಕಾರ ಇದನ್ನು ಕಟ್ಟುನಿಟ್ಟಾಗಿ ಜಾರಿಮಾಡುವಲ್ಲಿ ಪೂರ್ತಿ ಯಶಸ್ವಿಯಾಗದಿದ್ದರೂ, ಹೀಗೆ ಹೇಳಿಕೊಳ್ಳಲಿಕ್ಕಾದರೂ ಒಂದು ನಿಯಮವನ್ನು ರಾಜ್ಯಸರ್ಕಾರ ಮಾಡಿತ್ತು. ಇದೀಗ ರಾಜ್ಯಸರ್ಕಾರದ ಅನುಮತಿಯ ಅಗತ್ಯವಿಲ್ಲ ಎಂದು ಸಿಬಿಎಸ್‌ಇ ಬೋರ್ಡು ನಿಯಮ ಬದಲಾಯಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಎಗ್ಗುಸಿಗ್ಗಿಲ್ಲದೆ ಸಿಬಿಎಸ್‌ಇ ಶಾಲೆಗಳು ಇನ್ಮುಂದೆ ಆರಂಭವಾಗಲಿವೆ.

ಇದು ಒಕ್ಕೂಟದ ಮೇಲಿನ ದಾಳಿ

ಕಲಿಕೆ ಎನ್ನುವುದು ೧೯೭೬ಕ್ಕೆ ಮೊದಲು ರಾಜ್ಯಪಟ್ಟಿಯಲ್ಲಿದ್ದದ್ದು ಇದೀಗ ಜಂಟಿಪಟ್ಟಿಯಲ್ಲಿದೆ. ಅಂದರೆ ಕೇಂದ್ರ ಮಾಡುವ ಕಟ್ಟಳೆಗಳೇ ಅಂತಿಮ. ಇಂಥಾ ನಿಯಮದಿಂದಾಗಿ ರಾಜ್ಯಗಳು ತನ್ನ ನಾಡಿನ ಪ್ರಜೆಗಳಿಗೆ ಏನು ಕಲಿಸಬೇಕು ಎನ್ನುವುದನ್ನು ಕೇಂದ್ರ ನಿರ್ಧರಿಸುತ್ತಿದೆ. ಇದು ಸರಿಯಾಗಬೇಕೆಂದರೆ ಒಕ್ಕೂಟ ವ್ಯವಸ್ಥೆಯಲ್ಲಿ ಶಿಕ್ಷಣವೆನ್ನುವುದು ರಾಜ್ಯಪಟ್ಟಿಗೆ ಮರಳಿ ಬರಬೇಕು. ಅಧಿಕಾರ ವಿಕೇಂದ್ರೀಕರಣ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಎನ್ನುವುದಕ್ಕೆಲ್ಲಾ ಆಗ ಅರ್ಥ ಸಿಕ್ಕೀತು! ಒಕ್ಕೂಟ ವ್ಯವಸ್ಥೆಯ ಮೇಲಿನ ಈ ದಾಳಿಯನ್ನು ಕೊನೆಗೊಳಿಸಲು ರಾಜ್ಯಸರ್ಕಾರಗಳು ಒಟ್ಟಾಗಿ ದನಿಯೆತ್ತಬೇಕು.

0 ಅನಿಸಿಕೆಗಳು:

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails