ಕಿರಣ್ ಬಾಟ್ನಿಯವರ ಹೊಸ ಇಂಗ್ಲೀಶ್ ಹೊತ್ತಗೆ ಮಾರುಕಟ್ಟೆಗೆ!

( ಚಿತ್ರಕೃಪೆ: http://kiranbatni.com/)

ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಬ್ಲಾಗನ್ನು ಆರಂಭಿಸಿ, ಕನ್ನಡ ಅಂತರ್ಜಾಲ ತಾಣದಲ್ಲೊಂದು ಹೊಸಅಲೆಗೆ ಕಾರಣರಾದ, ಹೊಸಪೀಳಿಗೆಯ ಯುವ ಚಿಂತಕರಾದ ಶ್ರೀ ಕಿರಣ್ ಬಾಟ್ನಿಯವರು ಇಂಗ್ಲೀಷಿನಲ್ಲಿ ಬರೆದಿರುವ ಹೊಸ ಹೊತ್ತಗೆ "ದಿ ಪಿರಮಿಡ್ ಆಫ಼್ ಕರಪ್ಶನ್" ಬಿಡುಗಡೆಗೆ ಸಿದ್ಧವಾಗಿದೆ. ಇದೇ ಫ಼ೆಬ್ರವರಿ ೧೫ರಂದು ಬೆಳಗ್ಗೆ ೯:೦೦ಗಂಟೆಗೆ ಅಂತರ್ಜಾಲದ ಮೂಲಕವೂ ಪುಸ್ತಕ ಬಿಡುಗಡೆಯನ್ನು ಹೊಸಬಗೆಯಲ್ಲಿ ಆಚರಿಸಲಾಗುತ್ತಿದೆ.

ಕಿರಣ್ ಬಾಟ್ನಿ ಮತ್ತು ನಾಡಪರ ಚಿಂತನೆ

ಮೂಲತಃ ಮೈಸೂರಿನವರಾದ ಕಿರಣ್, ದೆಹಲಿಯ ಐಐಟಿಯಲ್ಲಿ ಎಂ.ಟೆಕ್ ಪದವೀಧರರು. ಇಪ್ಪತ್ತೈದಕ್ಕೂ ಹೆಚ್ಚು ದೇಶಗಳಲ್ಲಿ ಸುತ್ತಾಟ ನಡೆಸಿರುವ ಇವರು ಸದಾ ತಮ್ಮ ಹೊಸತನದ ಚಿಂತನೆಗಳಿಂದ ಜನಮನ ಸೆಳೆದಿದ್ದು, ಅಧ್ಯಾತ್ಮ ಮತ್ತು ಲೌಕಿಕ ಬದುಕಿನ ದಿಟಗಳ ಹುಡುಕಾಟದಲ್ಲಿ ತೊಡಗಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಾಕಷ್ಟು ಅಧ್ಯಯನವನ್ನೂ ನಡೆಸುತ್ತಿರುವ ಕಿರಣ್ ಬಾಟ್ನಿಯವರು ನಾಡು, ನುಡಿ, ಏಳಿಗೆ, ಏರ್ಪಾಟುಗಳ ಬಗ್ಗೆ ಸಾಕಷ್ಟು ಮಹತ್ವದ ಬರಹಗಳನ್ನು ಬರೆದಿದ್ದಾರೆ. ಇಂಗ್ಲೀಷಿನಲ್ಲಿ "ಕರ್ನಾಟಿಕ್" ಎಂಬ ಬ್ಲಾಗನ್ನು ನಡೆಸುತ್ತಿರುವ ಕಿರಣ್, ಹೊನಲು ಹೆಸರಿನ ಕನ್ನಡದ ವಿಶಿಷ್ಟವಾದ ತಾಣವನ್ನು ನಡೆಸುತ್ತಿದ್ದು ಇಲ್ಲಿ ಕನ್ನಡದಲ್ಲಿಯೇ ಅರಿಮೆಯ ಬರಹಗಳನ್ನು ಬರೆಯುವ ಬರಹಗಾರರ ದಂಡೊಂದು ತಯಾರಾಗುತ್ತಿದೆ. ಇದೀಗ ಕಿರಣ್ ಬಾಟ್ನಿ ಬರೆದಿರುವ "ಪಿರಮಿಡ್ ಆಫ಼್ ಕರಪ್ಶನ್" ಹೊತ್ತಗೆ ಮಾರುಕಟ್ಟೆಗೆ ಬರುತ್ತಿದ್ದು ಇದು ಇವರ ಮೊದಲ ಇಂಗ್ಲೀಷ್ ಹೊತ್ತಗೆಯಾಗಿದೆ.

ಕನ್ನಡದಲ್ಲಿ "ಮಂದಿಯಾಳ್ವಿಕೆಯಲ್ಲಿ ಕನ್ನಡಿಗ" ಹೊತ್ತಗೆಯನ್ನು ಬರೆದಿರುವ ಕಿರಣ್, ಡಾ ಡಿ ಎನ್ ಶಂಕರಬಟ್ಟರ "ಕನ್ನಡ ನುಡಿಯರಿಮೆಯ ಇಣುಕುನೋಟ" ಹೊತ್ತಗೆಯ ಸಂಪಾದಕರೂ ಆಗಿದ್ದಾರೆ. ಇಂಗ್ಲೀಷಿನಲ್ಲಿ ಬರೆಯುವ ಮೂಲಕ ತಮ್ಮ ನಿಲುವುಗಳನ್ನು ಇಂಗ್ಲೀಷ್ ಓದಬಲ್ಲ ಕನ್ನಡದ ಒಂದು ವರ್ಗವನ್ನು ಮಾತ್ರವಲ್ಲದೆ, ಕನ್ನಡೇತರರನ್ನೂ ತಲುಪುವ ಉದ್ದೇಶವನ್ನು ಶ್ರೀ ಕಿರಣ್ ಬಾಟ್ನಿ ಹೊಂದಿದ್ದಾರೆ. ಈ ಹೊತ್ತಗೆಯನ್ನು "ಅಂತರ್ಜಾಲ"ದ ಮೂಲಕ ಕೊಳ್ಳಬಹುದಾಗಿದೆ. ಭ್ರಷ್ಟಾಚಾರದ ಬಗ್ಗೆ ಹೊಸನೋಟವನ್ನು ಬೀರುವ ಸದರಿ ಹೊತ್ತಗೆಯು ಭ್ರಷ್ಟಾಚಾರದ ಬಗ್ಗೆ ಓದುಗರಿಗೆ ಈಗಾಗಲೇ ಇರಬಹುದಾದ ನಂಬಿಕೆಗಳ ಬುಡವನ್ನೇ ಅಲುಗಿಸಬಲ್ಲದಾಗಿದೆ.

ಈ ಹೊತ್ತಗೆಯನ್ನು ಮುಂದಾಗಿ ಕೊಳ್ಳಲು ಈ ತಾಣಕ್ಕೆ ಭೇಟಿ ನೀಡಿ.

0 ಅನಿಸಿಕೆಗಳು:

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails