ವಿರೋಧವೇನೋ ಸಂವಿಧಾನ ಬದ್ಧ! ಆದರೆ "ನಿಶೇಧ" ಅಲ್ವಲ್ಲಾ ಗುರುಗಳೇ!

(ಚಿತ್ರಕೃಪೆ: ಪ್ರಜಾವಾಣಿ ದಿನಪತ್ರಿಕೆ)
ಕಳೆದ ವಾರದಲ್ಲೊಂದು ದಿನ ಪ್ರಜಾವಾಣಿ ದಿನಪತ್ರಿಕೆಯಲ್ಲಿ ನಾಡಿನ ಹಿರಿಯ ಸಾಹಿತಿ ಚಿಂತಕರೆಂದು ಹೆಸರಾದ ಶ್ರೀ ಬರಗೂರು ರಾಮಚಂದ್ರಪ್ಪನವರು ಬರೆದ ಬರಹವೊಂದು ಪ್ರಕಟವಾಯಿತು. “ಡಬ್ಬಿಂಗ್ ವಿರೋಧ, ಸಂವಿಧಾನ ಬದ್ಧ” ಎಂಬ ತಲೆಬರಹದ ಬರಹದಲ್ಲಿ ಶ್ರೀಯುತರು ಡಬ್ಬಿಂಗ್ ವಿರೋಧವಾಗಿ ಮಾತನಾಡುತ್ತಾ ಡಬ್ಬಿಂಗ್ ಮೇಲಿನ ನಿಶೇಧವನ್ನು ಸಮರ್ಥಿಸುತ್ತಿರುವುದು ಕಂಡಿತು. ಇವರ ಮಾತುಗಳನ್ನು ಒಂದೊಂದಾಗಿ ಬಿಡಿಸಿ ನೋಡಿದರೆ ಇದರ ಪೊಳ್ಳುತನ ತಿಳಿಯುವುದಷ್ಟೇ ಅಲ್ಲದೆ ಡಬ್ಬಿಂಗ್ ವಿರೋಧದ ತಮ್ಮ ನಿಲುವಿನ ಬೆಂಬಲಕ್ಕಾಗಿ ಹೇಗೆ ಸಂವಿಧಾನವನ್ನು ಗುರಾಣಿಯಂತೆ ಬಳಸಲು ತಪ್ಪು ತಪ್ಪಾಗಿ ಬಳಸಿದ್ದಾರೆ ಎಂಬುದು  ತಿಳಿಯುತ್ತದೆ.

ವಿರೋಧದ ಕಾರಣಗಳು
೧. ಡಬ್ಬಿಂಗ್ ಚಿತ್ರಗಳು ಸೃಜನಶೀಲತೆಯನ್ನು ಹೊಂದಿರುವುದಿಲ್ಲ. ಆದ್ದರಿಂದ ಇದಕ್ಕೆ ನನ್ನ ವಿರೋಧವಿದೆ ಎಂದಿರುವ ಶ್ರೀಯುತರ ಅಭಿಪ್ರಾಯವನ್ನು ಗೌರವಿಸುತ್ತಾ ಅವರಿಗೇ ಆಗಲೀ ಮತ್ತೊಬ್ಬರಿಗೇ ಆಗಲಿ ಡಬ್ಬಿಂಗ್ ಚಿತ್ರ ವಿರೋಧಿಸುವ ಸ್ವತಂತ್ರ ಇದ್ದೇ ಇದೆ ಎನ್ನಬೇಕಾಗಿದೆ. ಏಕೆಂದರೆ ಡಬ್ಬಿಂಗ್ ಬೇಕು ಎನ್ನುವ ಸ್ವಾತಂತ್ರ್ಯವನ್ನು ಈ ನಾಡಿನಲ್ಲಿ ಹತ್ತಿಕ್ಕಲಾಗುತ್ತಿದೆಯೇ ಹೊರತು ಬೇಡ ಎನ್ನುವ ಸ್ವಾತಂತ್ರ್ಯವನ್ನಲ್ಲಾ! ಶ್ರೀಯುತರು ಮುಂದುವರೆಯುತ್ತಾ ತಾವೇ ತಾವಾಗಿ ಎದುರಾಳಿಗಳ ಪ್ರಶ್ನೆಗಳನ್ನೆತ್ತಿ ಉತ್ತರಿಸುವ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಾಸ್ತವವಾಗಿ ಕನ್ನಡ ಚಿತ್ರಗಳು ಸೃಜನಶೀಲವಾಗಿಲ್ಲದಿರುವುದಕ್ಕೆ ಡಬ್ಬಿಂಗ್ ಚಿತ್ರಗಳು ಬರಬೇಕೆನ್ನುವ ವಾದವೇ ಇಲ್ಲದಿರುವಾಗ ಹಾಗೊಂದು ಪ್ರಶ್ನೆ ಹುಡುಕಿ ಅದಕ್ಕೊಂದು ಉತ್ತರ ನೀಡಿರುವುದು ಇವರು ವಿಷಯ ವಿಶ್ಲೇಷಣೆಗಿಳಿಯದೆ ಸುಮ್ಮನೇ ಅನಿಸಿಕೆಯೊಂದನ್ನು ರೂಪಿಸಿಕೊಂಡು ಅದಕ್ಕೆ ಸಮರ್ಥನೆ ಹುಡುಕುತ್ತಿರುವಂತೆ ಅನ್ನಿಸುತ್ತದೆ. ಕನ್ನಡ ಚಿತ್ರಗಳು ಅದ್ಭುತವಾಗಿದ್ದರೂ, ಸೃಜನಶೀಲತೆ ಅಲ್ಲಿ ಸಾಕಾರವಾಗುತ್ತಿದ್ದರೂ, ಜಗತ್ತಿನಲ್ಲೇ ಅತ್ಯುತ್ತಮ ಚಿತ್ರಗಳನ್ನು ಕನ್ನಡ ಚಿತ್ರೋದ್ಯಮ ನಮ್ಮ ಮುಂದೆ ತಂದಿಡುತ್ತಿದ್ದರೂ “ಡಬ್ಬಿಂಗ್ ಚಿತ್ರಗಳನ್ನು ನೋಡಬೇಕು” ಎಂದು ಕನ್ನಡದ ಪ್ರೇಕ್ಷಕ ಬಯಸುವುದು ಅಪರಾಧವೇನೂ ಅಲ್ಲಾ! ಆಗಲೂ ತನ್ನ ತಾಯ್ನುಡಿಗೆ ಡಬ್ ಆದ ಕಾರ್ಯಕ್ರಮಗಳನ್ನು ನೋಡುವ ಆಯ್ಕೆ ಕನ್ನಡಿಗನಿಗೆ ಸಿಗಲೇಬೇಕಲ್ಲವೇ? ಇದೇ ರೀತಿ ‘ಜಾಗತೀಕರಣದ ಯುಗದಲ್ಲಿ ಕನ್ನಡ ಚಿತ್ರಗಳಿಗೆ ಎದುರಾಗಿ ಡಬ್ಬಿಂಗ್ ಚಿತ್ರಗಳನ್ನು ಇಡುವ ಬದಲಿಗೆ ಕೆಟ್ಟ ಕನ್ನಡ ಚಿತ್ರಗಳಿಗೆ, ಒಳ್ಳೆಯ ಕನ್ನಡ ಚಿತ್ರಗಳನ್ನು ಎದುರಾಗಿಸುವುದು ಒಳಿತೆಂ’ದು ಅಭಿಪ್ರಾಯಪಟ್ಟಿದ್ದಾರೆ. ಮಾರುಕಟ್ಟೆ ಕೇಂದ್ರಿತ ಮನೋಭಾವ ಸೃಜನಶೀಲತೆಗೆ ಮಾರಕ ಎಂದೂ ಹೇಳಿ ಇಡೀ ವಿಷಯವನ್ನು ಗೊಂದಲಮಯವಾಗಿಸಿದ್ದಾರೆ. ಕಲೆ, ಸೃಜನಶೀಲತೆಗಳೇ ಸರಕಾಗಿರುವ ಚಿತ್ರೋದ್ಯಮ ಇವರ ಮಾತನ್ನು ಒಪ್ಪಿದರೆ, ನಾಳೆಯಿಂದ ಯಾವ ಸಿನಿಮಾಕ್ಕೂ ಟಿಕೆಟ್ ಇಟ್ಟು ತೋರಿಸುವ ಹಾಗಿರುವುದಿಲ್ಲಾ! ಯಾಕೆಂದರೆ ಸೃಜನಶೀಲ ಚಿತ್ರಗಳು ತೆರೆಕಾಣಲೂ ಕೂಡಾ ವ್ಯಾಪಾರ ಮಾಡಬೇಕು. ಇವರಿಗೆ ಅದೇಕೆ ವ್ಯಾಪಾರ, ಮಾರುಕಟ್ಟೆ, ಗ್ರಾಹಕ ಎಂದೊಡನೆ “ಅದು ಕೆಟ್ಟದ್ದು” ಎಂದೆನ್ನಿಸುತ್ತದೆ ಎಂಬುದಕ್ಕೆ ಉತ್ತರವಿಲ್ಲಾ!

೨. ಡಬ್ಬಿಂಗ್ ಚಿತ್ರಗಳು ಬರುವುದರಿಂದ ಸ್ವಂತ ಚಿತ್ರನಿರ್ಮಾಣ ನಿಂತು ಕಾರ್ಮಿಕರ ಬದುಕುವ ಹಕ್ಕು ಕಿತ್ತುಕೊಂಡಂತಾಗುತ್ತದೆ ಎನ್ನುವ ಮಾತುಗಳನ್ನು ಆಡಿರುವ ಶ್ರೀಯುತರು, ವಾಸ್ತವವಾಗಿ ನಿರೀಕ್ಷಿಸುತ್ತಿರುವುದಾದರೋ ಏನನ್ನು? ಚಿತ್ರರಂಗದಲ್ಲಿ ಹಣ ಹೂಡುವವರು ತಮಗೆ ಯಾವುದು ಲಾಭದಾಯಕವೋ  ಅದನ್ನು ತಾನೇ ಮಾಡುತ್ತಾರೆ. ನಿಮಗೆ ಲಾಭದ ದಾರಿ ಮುಚ್ಚುತ್ತೇವೆ, ನಷ್ಟವಾದರೂ ಇದೇ ದಾರಿಯಲ್ಲಿ ಸಾಗಿ ಸಾವಿರಾರು ಕಾರ್ಮಿಕರನ್ನು ಉಳಿಸಿ ಎನ್ನುವ ನಿಲುವು ಸರಿಯಾದುದೇ ಎಂದು ಪ್ರಾಜ್ಞರು ಯೋಚಿಸಬೇಕು. ನಿರ್ಮಾಪಕನಿಗೆ ತನ್ನ ಆಯ್ಕೆಯ ಚಿತ್ರ ಮಾಡುವ ಹಕ್ಕನ್ನು ಕಿತ್ತುಕೊಳ್ಳುವುದು ಅವರ ಬದುಕುವ ಹಕ್ಕನ್ನು ಕಿತ್ತುಕೊಂಡಂತಾಗದೇ? ಡಬ್ಬಿಂಗ್ ಚಿತ್ರಗಳು ಮತ್ತು ತುಟಿಚಲನೆ, ಗುಣಮಟ್ಟದ ಕೊರತೆ ಮುಂತಾಗಿ ಹೇಳುವ ಬರಗೂರರು ಅಂತಹ ಚಿತ್ರಗಳನ್ನು ಒಪ್ಪುವ, ತಿರಸ್ಕರಿಸುವ ಅಥವಾ ಮೆಚ್ಚುವ ಅವಕಾಶವನ್ನೇ ನಿರಾಕರಿಸುವುದನ್ನು ಹೇಗೆ ತಾನೇ ಸಮರ್ಥಿಸಿಕೊಳ್ಳಬಲ್ಲರು?

೩. ಇನ್ನು ಕನ್ನಡದ ಬೆಳವಣಿಗೆ ಮತ್ತು ಡಬ್ಬಿಂಗ್ ಎನ್ನುವ ವಿಷಯವಾಗಿ ಮಾತಾಡುತ್ತಾ, ಡಬ್ಬಿಂಗಿನಿಂದ ಕನ್ನಡ ಬೆಳವಣಿಗೆ ಆಗದು ಎಂದು ಹೇಳಿದ್ದಾರೆ. ಆದರೆ ಅದಕ್ಕೆ ಯಾವ ಆಧಾರವನ್ನೂ ನೀಡಿಲ್ಲಾ. ವಾಸ್ತವವಾಗಿ ಕನ್ನಡದ ಮಕ್ಕಳು/ ಜನರು ತಮ್ಮ ಇಷ್ಟದ ಪರಭಾಷೆಯ ಕಾರ್ಯಕ್ರಮಗಳನ್ನು/ ಚಿತ್ರಗಳನ್ನು ಕನ್ನಡದಲ್ಲಿಯೇ ನೋಡುವ ಅವಕಾಶ ದೊರೆಯುವುದಕ್ಕಿಂತಾ ದೊಡ್ಡದು ಬೇರೇನು ಬೇಕು? ನಮ್ಮ ಮಕ್ಕಳು ಚಿಕ್ಕಂದಿನಿಂದಲೂ ಮನರಂಜನೆಗಾಗಿ ಪರಭಾಷೆಯನ್ನು ಅವಲಂಬಿಸದೆ ಕನ್ನಡಕ್ಕೆ ಅಂಟಿಕೊಳ್ಳುವುದಕ್ಕಿಂತಾ ದೊಡ್ಡ ಇನ್ನಾವ ಕನ್ನಡದ ಬೆಳವಣಿಗೆ ಬೇಕಾಗಿದೆ? ಡಬ್ಬಿಂಗ್ ಚಿತ್ರಗಳಲ್ಲಿ ನಾನಾ ಬಗೆಯ ಕನ್ನಡಕ್ಕೆ ಅವಕಾಶವಿಲ್ಲ ಎನ್ನುವುದರ ಅರ್ಥವಾದರೂ ಏನು? ಯಾಕೆ ಅದು ಸಾಧ್ಯವಾಗುವುದಿಲ್ಲಾ? ಯಾಕೆ ತುಟಿಚಲನೆಗಾಗೇ ಡೈಲಾಗ್ ಬರೀಬೇಕು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರವೇ ಇಲ್ಲಾ! ಪ್ರಪಂಚದಲ್ಲಿ ಡಬ್ ಮಾಡುವ ಎಲ್ಲೆಡೆಯೂ ಇರದ ಇಂತಹ ನಿಯಮವನ್ನು ತಡೆಗಾಗಿಯೇ ಬಳಸುತ್ತಿರುವಂತೆ ತೋರುತ್ತದೆ. ವಾಸ್ತವವಾಗಿ ಹಾಗೆ ತುಟಿಚಲನೆಗೆ ಸಂಪೂರ್ಣವಾಗಿ ಹೊಂದಿಸಿ ಡಬ್ ಮಾಡುವುದು ಎಂದಿಗೂ ಎಲ್ಲಿಯೂ ಯಾರಿಗೂ ಸಾಧ್ಯವೇ ಆಗದ ಕ್ರಿಯೆ! ಯಾರಾದರೂ ಇಂಗ್ಲೀಶ್ ಸಿನಿಮಾಗೆ ಕನ್ನಡದ ಡೈಲಾಗ್ ಕೂಡಿಸಿ ಬರೆಯಲು ಸಾಧ್ಯವೇ? ಫ್ರೆಂಚ್ ಸಿನಿಮಾಗೆ  ಜಪಾನೀಸ್ ಭಾಷೆ ಕೂಡಿಸಲು ಸಾಧ್ಯವೇ? ಡಬ್ ಸಿನಿಮಾ ಎಂದರೇ ತುಟಿಚಲನೆ ಹೊಂದಿಕೆಯಾಗಿರುವುದಿಲ್ಲ ಎನ್ನುವುದನ್ನು ನೋಡುಗ ತಿಳಿದೇ ಇರುತ್ತಾನೆ ಮತ್ತು ಈ ಹೊಂದಾಣಿಕೆಯಿಲ್ಲದೆ ಇರುವುದೇ ಅವನು ಡಬ್ಬಿಂಗ್ ಸಿನಿಮಾವನ್ನು ಮೆಚ್ಚದಿರಲು ಕಾರಣವಾಗಬಹುದು ಎಂಬುದನ್ನು ಅದ್ಯಾಕೋ ಚಿತ್ರರಂಗದ ಮಂದಿ ಯೋಚಿಸುವುದಿಲ್ಲ!

ಸಂವಿಧಾನದ ತಪ್ಪು ವ್ಯಾಖ್ಯಾನ

ಇನ್ನು ಬರಗೂರರು ಸಂವಿಧಾನವನ್ನು ಉದ್ಗರಿಸಿ ಡಬ್ಬಿಂಗ್ ನಿಶೇಧವನ್ನು ಎತ್ತಿಹಿಡಿಯುವ ವ್ಯರ್ಥಸಾಹಸಕ್ಕೆ ಮುಂದಾಗಿದ್ದಾರೆ. ಸಂವಿಧಾನದ ನಾಲ್ಕು ವಿಧಿಗಳ ಬಗ್ಗೆ ಮಾತಾಡಿದ್ದಾರೆ. ೧೯ (ಜಿ), ೧೯ (೬), ೨೧, ೨೩ ಮತ್ತು ೨೪ನ್ನು ಎತ್ತಿ ಆಡಿದ್ದಾರೆ. ಡಬ್ಬಿಂಗ್ ನಿಶೇಧವನ್ನು ಸಮರ್ಥಿಸಲು ಸಂವಿಧಾನವನ್ನೂ ಬಿಡದೆ ಬಳಸಿಕೊಂಡಿರುವ ಶ್ರೀಯುತರು ಈ ಭರದಲ್ಲಿ ತಮಗೆ ಬೇಕಾದಂತೆ ಟಿಪ್ಪಣಿ ನೀಡಿದ್ದಾರೆ ಮತ್ತು ಕನ್ನಡನಾಡಲ್ಲಿರುವ ಅಸಾಂವಿಧಾನಿಕ ಡಬ್ಬಿಂಗ್ ತಡೆಯೆನ್ನುವುದು ಎಲ್ಲಾ ರೀತಿಯಲ್ಲೂ ಸಂವಿಧಾನಕ್ಕೆ ವಿರುದ್ಧವಾದುದು ಎನ್ನುವುದನ್ನೇ ಮರೆತಿರುವಂತೆ ನಡೆದುಕೊಳ್ಳುತ್ತಿರುವುದು ಮಾತ್ರಾ ದುರಂತ! ಭಾರತೀಯ ಸಂವಿಧಾನದ ೧೯(ಜಿ) ತನ್ನ ಪ್ರಜೆಗಳಿಗೆ ಯಾವುದೇ ನ್ಯಾಯಬದ್ಧ ವ್ಯಾಪಾರ ಮಾಡುವ ಹಕ್ಕಿದೆ ಎನ್ನುತ್ತದೆ. ಡಬ್ಬಿಂಗ್ ಕಾನೂನುಬದ್ಧವಾದ ಕ್ರಿಯೆಯಾದ್ದರಿಂದ ಇದನ್ನು ಸಂವಿಧಾನ ಎತ್ತಿ ಹಿಡಿಯುತ್ತದೆನ್ನುವ ಬರಗೂರರ ಮಾತುಗಳು ಒಪ್ಪಬೇಕಾದ್ದೇ! ಆದರೆ ಅವರ ಮುಂದಿನ ಮಾತುಗಳನ್ನು ಸಾಣೆ ಹಿಡಿಯಬೇಕಾಗಿದೆ.

೧೯(೬)ರ ಪ್ರಕಾರ ಸರ್ಕಾರಕ್ಕೆ ಯಾವುದನ್ನೇ ನಿಶೇಧಿಸುವ ಹಕ್ಕಿದೆ ಎನ್ನುತ್ತಾ ಹಾಗಾಗಿ ಡಬ್ಬಿಂಗ್ ನಿಶೇಧವಾಗಬೇಕು ಎನ್ನುವ ಅರ್ಥದಲ್ಲಿ ಶ್ರೀಯುತರು ಬರೆದಿದ್ದಾರೆ. ಇಲ್ಲಿ ಸರ್ಕಾರಕ್ಕೆ “ನ್ಯಾಯೋಚಿತ ನಿಶೇಧ” ಹೇರುವ ಅವಕಾಶವಿದೆ ಎನ್ನುತ್ತಾ ಹಾಗಾಗಿ ಡಬ್ಬಿಂಗ್ ನಿಶೇಧ ಮಾಡಬಹುದು ಎಂದಿದ್ದಾರೆ. ಈ ನ್ಯಾಯೋಚಿತ ನಿಶೇಧ ಅನ್ನುವುದರ ವ್ಯಾಖ್ಯಾನವಾದರೂ ಏನು? ಯಾವುದರಿಂದ ಸಮಾಜದ ಸ್ವಾಸ್ಥ್ಯ/ ಜನರ ಆರೋಗ್ಯ/ ಬದುಕು ಹಾನಿಗೊಳಗಾಗುತ್ತೋ ಅಂಥದ್ದನ್ನು ಇದರಡಿಯಲ್ಲಿ ಸರ್ಕಾರ ನಿಶೇಧ ಮಾಡಿರೋದನ್ನು ಕಾಣಬಹುದು. ಒಂದಂಕಿ ಲಾಟರಿ, ಸರಾಯಿ, ಗುಟ್ಕಾ ಮೊದಲಾದವು... ಈ ಪಟ್ಟಿಯಲ್ಲಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದಾಗ ಸರ್ಕಾರ ಸಮರ್ಥನೆ ನೀಡಿರುವುದೂ ಕೂಡಾ ಇವು ನಿಯಂತ್ರಿಸಲಾಗದಂತಹ... ಆರೋಗ್ಯಕ್ಕೆ/ ಬದುಕಿಗೆ ಹಾನಿಕರವಾದವು ಎಂದೇ.  ಇಲ್ಲಿ ಡಬ್ಬಿಂಗ್ ಎನ್ನುವುದು ಹೇಗೆ ಹಾನಿಕರ ಎನ್ನುವುದನ್ನು ಇಡೀ ಜಗತ್ತು ಒಪ್ಪುವಂತೆ ವಿವರಿಸದೆ ಸರ್ಕಾರ ಇಂಥಾ ಕ್ರಮಕ್ಕೆ ಮುಂದಾದರೆ ನ್ಯಾಯಾಲಯದಲ್ಲಿ ಚೀಮಾರಿಗೊಳಗಾಗುವುದು ನಿಶ್ಚಿತ.

ಇನ್ನು ಸಂವಿಧಾನದ ೨೩, ೨೪ನೇ ಕಾಲಮ್ಮುಗಳನ್ನು ಸಂಬಂಧವೇ ಇಲ್ಲದಿದ್ದರೂ ಎಳೆದುತಂದಿದ್ದಾರೆ. ೨೩ನೇ ಕಾಲಮ್ಮು ಜೀತಪದ್ದತಿ ಹಾಗೂ ಅಕ್ರಮ ಮಾನವ ಸಾಗಣೆಗಳ ನಿಶೇಧಗಳ ಬಗ್ಗೆ, ಸೇವಾ ಕಾಯ್ದೆಯಾದ ಎಸ್ಮಾ ಬಗ್ಗೆ ಮಾತಾಡಿದೆ.  ೨೪ನೇ ಕಾಲಮ್ಮಿನಲ್ಲಿ ಬಾಲಕಾರ್ಮಿಕ ಪದ್ದತಿ ನಿಶೇಧದ ಬಗ್ಗೆ ಮಾತಾಡಲಾಗಿದೆ. ಇದಕ್ಕೂ ಡಬ್ಬಿಂಗಿಗೂ ಅದೆಲ್ಲಿಂದ ಸಂಬಂಧವಿದೆಯೋ ಬಲ್ಲವರೇ ಹೇಳಬೇಕು.

ಸಿಸಿಐನ ವ್ಯಾಪ್ತಿ ಮತ್ತು ಮನರಂಜನೆ

ಇನ್ನು ಕಡೆಯದಾಗಿ ಭಾರತೀಯ ಸ್ಪರ್ಧಾ ಆಯೋಗದ ಬಗ್ಗೆಯೂ ತಪ್ಪುತಪ್ಪಾದ ಮಾಹಿತಿ ನೀಡಿದ್ದಾರೆ. ಸಿಸಿಐ ಗ್ರಾಹಕ ಹಕ್ಕು ಮತ್ತು ಸರಕುಗಳಿಗೆ ಸಂಬಂಧಿಸಿದ್ದು ಎಂಬುದು ಸರಿಯಲ್ಲಾ. ಮೂಲತಃ ಸಿಸಿಐ ಅಡಿಯಲ್ಲಿ ಮನರಂಜನೆಯೂ ಕೂಡಾ ಬರುತ್ತಿದ್ದು ಜನರಿಂದ ಹಣಪಡೆದು ನೀಡುವ ಯಾವುದೇ ಸೇವೆಯೂ ಕೂಡಾ ಗ್ರಾಹಕ ಸೇವೆಯೇ ಆಗಿದೆ ಎನ್ನುತ್ತಾ ಹಾಗಾಗಿ ಚಲನಚಿತ್ರವೂ ಸೇರಿದಂತೆ ಇಡೀ ಮನೋರಂಜನಾ ವಲಯವೂ ಸಿಸಿಐ ವ್ಯಾಪ್ತಿಯ ಅಡಿಯಲ್ಲಿ ಬರುತ್ತದೆಂದು ಬರೆಯಲಾಗಿದೆ.

ಸಿಸಿಐ ಕಾಯ್ದೆಯ ೫೪ನೇ ಕಾಲಮ್ಮಿನಲ್ಲಿ ಯಾವುದನ್ನೇ ಆಗಲಿ ಸಿಸಿಐ ವ್ಯಾಪ್ತಿಯಿಂದ ಹೊರಗಿಡುವ ಅಧಿಕಾರ ಕೇಂದ್ರಸರ್ಕಾರಕ್ಕಿದೆ ಎಂದಿರುವ ಶ್ರೀಯುತರು ಅರೆಸತ್ಯವೊಂದನ್ನು ಮಾತ್ರಾ ಮಾತಾಡಿದ್ದಾರೆ. ಮುಂದುವರೆಯುತ್ತಾ ಇದೇ ಕಾಲಮ್ಮಿನಲ್ಲಿ ಯಾವ ಯಾವ ಸಂದರ್ಭಗಳಲ್ಲಿ ಕೇಂದ್ರಸರ್ಕಾರ ಇಂಥಾ ಕ್ರಮಕ್ಕೆ ಮುಂದಾಗಬಹುದು ಎಂದೂ ವಿವರಿಸುತ್ತಾ ಸರ್ಕಾರದ ಭದ್ರತೆಗೆ, ಜನತೆಯ ಹಿತಕ್ಕೆ ಧಕ್ಕೆ ತರುವಂತಿದ್ದರೆ, ಅಂತರದೇಶೀಯ ಒಪ್ಪಂದಗಳಿಗೆ ಧಕ್ಕೆ ತರುವಂತಿದ್ದರೆ, ಕೇಂದ್ರಸರ್ಕಾರದ ಸಾರ್ವಭೌಮತ್ವಕ್ಕಾಗಿ ದುಡಿಯುವ ಯಾವುದೇ ಸಂಸ್ಥೆಯಾಗಿದ್ದರೆ ವಿನಾಯ್ತಿ ನೀಡಬಹುದು.. ಅದೂ ಕೂಡಾ ಸಾರ್ವಭೌಮತ್ವದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಿನಾಯ್ತಿ ನೀಡಬಹುದು ಎನ್ನಲಾಗಿದೆ ಅಷ್ಟೇ!


ಇಷ್ಟಕ್ಕೂ ಕೇಂದ್ರವೋ ರಾಜ್ಯವೋ ಮತ್ತೊಂದು ಸರ್ಕಾರ ಡಬ್ಬಿಂಗನ್ನು ನಿಶೇಧ ಮಾಡಿದ್ದ ಪಕ್ಷದಲ್ಲಿ ಇವರಾಡಿದ ಮಾತುಗಳನ್ನು ಒಪ್ಪಬಹುದಾಗಿತ್ತು. ಅಂತಹ ಯಾವ ನಿಶೇಧವೂ ಇಲ್ಲದಿದ್ದರೂ ಚಿತ್ರರಂಗದ ದೊಣೇನಾಯಕರ ಪರ ವಹಿಸಿರುವುದು ಅಚ್ಚರಿಯೆನ್ನಿಸುತ್ತದೆ. ಒಟ್ಟಾರೆ ಶತಾಯ ಗತಾಯ ಡಬ್ಬಿಂಗ್ ತಡೆಯಲೇ ಬೇಕೆನ್ನುವ ಉಮ್ಮೇದಿನಲ್ಲಿ ಬರಗೂರು ರಾಮಚಂದ್ರಪ್ಪನವರಂಥಾ ಹಿರಿಯರೂ ಕೂಡಾ ಈ ದೇಶದ ಸಂವಿಧಾನ, ಜನಸಾಮಾನ್ಯರ ಆಯ್ಕೆಸ್ವಾತಂತ್ರ್ಯ, ಸ್ಪರ್ಧೆಗಳ ಮೂಲ ಆಶಯಗಳನ್ನೇ ಮರೆತವರಂತೆ ನಡೆದುಕೊಂಡಿರುವುದು ಮಾತ್ರಾ ವಿಷಾದನೀಯ.

3 ಅನಿಸಿಕೆಗಳು:

Anonymous ಅಂತಾರೆ...

​ಅಲ್ಲಿ ಹಾಕಿದ ಅನಿಸಿಕೆಯನ್ನು ಪುನ ಹಾಕುತ್ತಿದ್ದಏನೇ

ನಿಷೇದ ನ್ಯಾಯಯುತ ಅಂತಾದರೆ , ಟಿ ವಿ ಸೀರಿಯಲ್ ಗಳನ್ನೂ ಮೊದಲು ನಿಷೇದಿಸಿ ; ಅದೇ ರೀತಿ ಚಲನಚಿತ್ರಗಳಿಗೂ ನಿರ್ಭಂದ ಹೇರಿ. ಏಕಂದರೆ ಚಲನಚಿತ್ರದ ಗೀಳು ತೀವ್ರವಾಗಿರುವ ಹಲವು ಯುವಕರು ತಮ್ಮ ಹಣ ಹಾಗು ಸಮಯ ಎರಡನ್ನು ಖರ್ಚು ಮಾಡಿ ತಮ್ಮ ಕ್ರಿಯಾಶೀಲತೆ ಯನ್ನು ಮರೆಯುತಿದ್ದಾರೆ. ಹಾಗೆ ಹಲವು ಹೆಂಗಸರು ಮನೆಯ ಗೆಳಸಗನ್ನು ಬಿಟ್ಟು ನಕಾರಾತ್ಮಕ ಅಂಶಗಳೇ ತುಂಬಿರುವ ಧಾರಾವಾಹಿ ಗಳಿಂದ ಮನಸ್ಸು ಕೆದಿಸುಕೊ್ಲುಥ್ಥರೆ.
ಕೆಲ ವರ್ಷಗಳ ಹಿಂದೆ ಹೆಂಗಸರು ಬಿಡುವಿನ ವೇಳೆಯಲ್ಲೂ nitting ಮುಂತಾದ ಕ್ರಿಯಾತ್ಮಕ ಕೆಲಸ ಮಾದುಥಿದ್ದರು. ಈಗಅ ಅವೆಲ್ಲ ಬಹುತೇಕ ಮಾಯವಾಗಿದೆ, ಈ ಸಮಯದಲ್ಲಿ ಧಾರಾವಾಹಿಗಳನ್ನು ನೋಡಿ ಆ ಧಾರಾವಾಹಿಯಾ ಸೀರೆ ಚೆನ್ನಾಗಿದೆ, ಈ ಒಡವೆ ಚೆನ್ನಾಗಿದೆ ಎಂದು ಕೊಳ್ಳುವ ಸಂಸ್ಕೃತಿ ಬೆಳೆ ಸುತ್ತಿದೆ. ಲಾಟರಿ, ಸರಾಯಿ, ಗುಟ್ಕಾ ಮೊದಲಾದವುಗಳಂತೆ ಇದು ಸಮಾಜದ ಸ್ವಾಸ್ಥ್ಯ ಜೀವನ ಹಾಳು ಮಾಡುತ್ತದೆ.
ಈ ವಾದದಲ್ಲಿ ಹುರುಳಿಲ್ಲ ಎಂದಾದರೆ ನಮ್ಮ ಈ "ಬುದ್ದಿ" ಜೀವಿ ಯಾ ಮಾತುಗಳನ್ನು ಏಕೆ ನಂಬಬೇಕು

Anonymous ಅಂತಾರೆ...

CCI ya thirpu prakta wagalu yake istondu samaya tegita untu... Yelladru I Kannada rakshakaru (sorry bhakshakaru) ada sara govindu shivanna (iwaga rajakiyakke seri rajakiyawannu upayogisi) ... I thirpannu thiruchuwa sadyate ideyaaa...

Anantha Rao ಅಂತಾರೆ...

Just saw few months old debates on this dubbing issue. You & other friends debated very well but anti dubbing people failed to understand intrinsic message of yours Just one important point needs to be highlighted to anti dubbing people. Their issues are 1) many in Kannada Film industry will lose jobs and 2) imposition of outside culture. However, 1) Is it not true millions of Kannadigas will learn another languages and this only helps migrant workers, thus local people loose jobs to outsiders?? Only protection of film industry jobs important and what about rest ?? Other Kannadigas too have rights to project jobs. 2) Even now in all Kannada movies cultural imposition already there. Look at new movie names, or its contents or listen to songs, Is not cultural imposition?

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails