Showing posts with label ಕಳಸಾ-ಭಂಡೂರ. Show all posts
Showing posts with label ಕಳಸಾ-ಭಂಡೂರ. Show all posts

ಮಹದಾಯಿ - ಕಳಸಾ - ಭಂಡೂರ : ಏನಿದು ವಿವಾದ?

ಕರ್ನಾಟಕ ರಾಜ್ಯದ ಹುಬ್ಬಳ್ಳಿ ಭಾಗದ ಕುಡಿಯುವ ನೀರಿನ ಯೋಜನೆಯಾದ ಕಳಸಾ-ಭಂಡೂರಾ ಯೋಜನೆ ಬಗ್ಗೆ ನೆರೆಯ ಗೋವಾ ರಾಜ್ಯ ಎತ್ತಿದ್ದ ತಕರಾರು, ಕೊನೆಗೆ ಕೇಂದ್ರಸರ್ಕಾರ ನ್ಯಾಯಾಧಿಕರಣವೊಂದನ್ನು ರಚಿಸಲು ಕಾರಣವಾಗಿದೆ. ಒಂದು ಸರಿಯಾದ ರಾಷ್ಟ್ರೀಯ ಜಲನೀತಿಯಿಲ್ಲದೆ ಇಂಥಾ ಟ್ರಿಬ್ಯೂನಲ್‍ಗಳು ಎಷ್ಟು ಪರಿಣಾಮಕಾರಿಯಾಗಿವೆ ಎಂಬುದು ಪ್ರಶ್ನಾರ್ಹವಾಗಿದೆ. ಕನ್ನಡಿಗರ ಪಾಲಿಗಂತೂ ಟ್ರಿಬ್ಯೂನಲ್‍ಗಳೆಂದರೇನೇ ದುಸ್ವಪ್ನದ ಹಾಗೆ, ನಮ್ಮಿಂದ ನಮ್ಮ ಪಾಲನ್ನು ಕಿತ್ತುಕೊಳ್ಳಲೆಂದೇ ಇರುವ ಹಾಗೆ, ನಮ್ಮ ಯೋಜನೆಗಳನ್ನು ತಡೆದು ವಿಳಂಬ ಮಾಡಿಸುವ ಒಂದು ತಂತ್ರದ ಹಾಗೆ ಕಾಣ್ತಾಯಿದೆ ಅನ್ನುವ ಅನುಮಾನಕ್ಕೆ ಕಾರಣವಾಗಿದೆ. ಏನಿದು ಮಹದಾಯಿ ಯೋಜನೆ? ಏನು ಈ ವಿವಾದ? ಎಂಬುದನ್ನು ಸ್ವಲ್ಪ ನೋಡೋಣ ಬಾ ಗುರು!

ಮಹದಾಯಿ ಹುಟ್ಟು ಮತ್ತು ಹರಿವು
ಕರ್ನಾಟಕದ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ 18 ಕಿ.ಮೀ ದೂರದ ಪಶ್ಚಿಮ ಘಟ್ಟ ಸಾಲಿನ ಜಂಬೋತಿ ಎನ್ನುವಲ್ಲಿ ಹುಟ್ಟುವ ಮಹದಾಯಿ ನದಿ ಕರ್ನಾಟಕದಲ್ಲಿ 28.8 ಕಿ.ಮೀ ದೂರ ಹರಿದು ನೆರೆಯ ಗೋವಾ ರಾಜ್ಯವನ್ನು ಪ್ರವೇಶಿಸುತ್ತದೆ. ಗೋವಾದಲ್ಲಿ ಮಾಂಡೋವಿ ಎಂಬ ಹೆಸರಿಂದ ಕರೆಯಲಾಗುವ ಈ ನದಿಯು ಅಲ್ಲಿ 52 ಕಿ.ಮೀ ದೂರ ಸಾಗಿ ಅರಬ್ಬಿ ಸಮುದ್ರ ಸೇರುತ್ತದೆ. ಇದರ ನದಿ ಪಾತ್ರದ ಹರವು ಒಟ್ಟು 2032 ಚದರ ಕಿ.ಮೀ ಆಗಿದ್ದು ಕರ್ನಾಟಕದಲ್ಲಿ ಇದು 452 ಚ.ಕಿ.ಮೀ ಇದೆ. ಈ ನದಿಯಲ್ಲಿ ವರ್ಷವೊಂದಕ್ಕೆ ಸರಾಸರಿ 210 ಟಿ.ಎಂ.ಸಿ ನೀರು ಸಿಗುತ್ತದೆ. ಇದರಲ್ಲಿ ಕರ್ನಾಟಕದ ಪಾಲು 45 ಟಿ.ಎಂ.ಸಿಯಾಗಿದೆ. ಈ ನದಿ ಪಶ್ಚಿಮ ದಿಕ್ಕಿಗೆ ಹರಿಯುತ್ತದೆ. ಇದಕ್ಕೆ ಅತಿ ಸಮೀಪದಲ್ಲೆ ಪೂರ್ವ ದಿಕ್ಕಿಗೆ ಹರಿಯುವ ಕನ್ನಡ ನಾಡಿನ, ವಿಶೇಷವಾಗಿ ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆಸರೆಯಾಗಿರುವ ಮಲಪ್ರಭ ನದಿ ಹುಟ್ಟುತ್ತದೆ. ಇದು ಕಳಸಾ ಭಂಡೂರದಿಂದ 4 ಕಿ.ಮೀ ದೂರದಲ್ಲಿದೆ. ಹುಬ್ಬಳ್ಳಿ ಧಾರವಾಡ ಗದಗಗಳಂತಹ ಜನವಸತಿ ಪ್ರದೇಶಗಳಲ್ಲಿ ಹತ್ತು ಹದಿನೈದು ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವ ಶೋಚನೀಯ ಸ್ಥಿತಿಯಿದೆ. ನಗರೀಕರಣದಿಂದ ಈ ಬೇಡಿಕೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಬೇಡಿಕೆಯನ್ನು ಪೂರೈಸಲೇ ಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವು ಒಂದು ಮಹತ್ವದ ಯೋಜನೆಯನ್ನು ಆರಂಭಿಸಿತು.

ಕಳಸಾ-ಭಂಡೂರಾ ನಾಲೆ ಯೋಜನೆ ಮತ್ತು ವಿವಾದ

1980ರ ಸುಮಾರಿನಲ್ಲಿ ನರಗುಂದ ರೈತ ಬಂಡಾಯದ ತರುವಾಯ ಅಂದಿನ ಮುಖ್ಯಮಂತ್ರಿ ಶ್ರೀ ಗುಂಡೂರಾವ್‍ರವರು ನೇಮಿಸಿದ್ದ ಬೊಮ್ಮಾಯಿ ಆಯೋಗ ಯೋಜನೆಯೊಂದನ್ನು ಜಾರಿಮಾಡಲು ಸಲಹೆ ನೀಡಿತು. ಮಹದಾಯಿ ನದಿಗೆ ಮತ್ತು ಅದರ ತೊರೆಗಳಿಗೆ ಹಲವಾರು ಕಡೆ ಅಣೆಕಟ್ಟೆಗಳನ್ನು ಕಟ್ಟಿ ನಾಲೆಗಳ ಮೂಲಕ ಮಲಪ್ರಭೆಗೆ 7.56 ಟಿ.ಎಂ.ಸಿಯಷ್ಟು ನೀರನ್ನು ಸರಬರಾಜು ಮಾಡುವುದೇ ಆ ಯೋಜನೆ. ಪಶ್ಚಿಮಕ್ಕೆ ಹರಿಯುತ್ತಿರುವ ಮಹದಾಯಿಯಿಂದ ಸ್ವಲ್ಪ ಮಟ್ಟಿನ ನೀರನ್ನು ಪೂರ್ವಕ್ಕೆ ಹರಿಸಿ ಮಲಪ್ರಭೆಗೆ ಪೂರೈಸುವುದೇ ಇದರ ಮೂಲ ಉದ್ದೇಶ. ಇದಕ್ಕಾಗೆ ಕಳಸ ಮತ್ತು ಭಂಡೂರ ಎಂಬ ಎರಡು ಕಡೆ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದೆ. ಸುರ್ಲಾ ನಾಲೆ, ಸಿಂಗಾರ್ ನಾಲೆ, ನೆರ್ಸೆ ನಾಲೆ, ಕಳಸ ನಾಲೆ, ಭಂಡೂರ ನಾಲೆ, ಹಲ್ತಾರ್ ನಾಲೆಗಳು ಈ ಯೋಜನೆಯ ಅಡಿಯಲ್ಲಿ ಬರಲಿವೆ. ಇದಕ್ಕಾಗಿ ಕರ್ನಾಟಕ ಸರ್ಕಾರ 2002ರಲ್ಲಿ ಕೇಂದ್ರದ ಮಂಜೂರಾತಿಯನ್ನು ಪಡೆದು ಕೆಲಸ ಕೈಗೆತ್ತಿಕೊಂಡಿತು. ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್.ಆರ್.ಬೊಮ್ಮಾಯಿಯವರ ಕಾಲದಲ್ಲಿ (1989) ಗೋವಾದ ಮುಖ್ಯಮಂತ್ರಿಗಳಾಗಿದ್ದ ಪ್ರತಾಪ್ ಸಿಂಗ್ ರಾಣೆಯವರ ಜೊತೆ ಮಾತುಕತೆ ನಡೆದಿದ್ದು ರಾಣೆಯವರು 45 ಟಿ.ಎಂ.ಸಿ ನೀರು ಬಳಸಲು ನಮ್ಮ ಅಡ್ಡಿಯೇನಿಲ್ಲ ಎಂದು ನುಡಿದಿದ್ದರು. ಆದರೆ ನಂತರ ಅಲ್ಲಿ ಅಧಿಕಾರಕ್ಕೆ ಬಂದ ಮನೋಹರ್ ಪರಿಕ್ಕರ್ ನೇತೃತ್ವದ ಬಿ.ಜೆ.ಪಿ ಸರ್ಕಾರ ಈ ಯೋಜನೆಗೆ ಕೊಂಕು ಎತ್ತಿತು. ಆಗ ರಾಜ್ಯದಲ್ಲಿ ಕಾಂಗ್ರೆಸ್‌ನ ಎಸ್.ಎಂ.ಕೃಷ್ಣಾ ಮುಖ್ಯಮಂತ್ರಿಗಳಾಗಿದ್ದರು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಬಿ.ಜೆ.ಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಗೋವಾದ ಒತ್ತಡಕ್ಕೆ ಮಣಿದು ಆಗಲೆ ನೀಡಲಾಗಿದ್ದ ಒಪ್ಪಿಗೆಯನ್ನು ಹಿಂಪಡೆಯಿತು. ಆಗ ರಾಜ್ಯ ಸರ್ಕಾರ ತನ್ನದೆ ಹಣವನ್ನು ಹೂಡಿ ಈ ಯೋಜನೆಯನ್ನು ಮುಂದುವರೆಸಲು ನಿರ್ಧರಿಸಿತು ಮತ್ತು ರಾಷ್ಟ್ರೀಯ ಜಲ ಆಯೋಗ ಮತ್ತು ರಾಷ್ಟ್ರೀಯ ಪರಿಸರ ವಿಜ್ಞಾನ ಸಂಶೋಧನಾ ಸಂಸ್ಥೆ (ನ್ಯಾಷನಲ್ ಎನ್‌ವಿರಾನ್‌ಮೆಂಟಲ್ ಇಂಜಿನಿಯರಿಂಗ್ ರೀಸರ್ಚ್ ಇನ್‌ಸ್ಟಿಟ್ಯೂಟ್) ಗಳಿಂದ ಅನುಮತಿ ಪಡೆದಿರುವುದರಿಂದ ನೀರು ಹರಿಸಿಕೊಳ್ಳುತ್ತೇವೆ ಎನ್ನುವ ನಿಲುವು ತಾಳಿತು.

ಯೋಜನೆಗೆ ವಿರೋಧ ಮಾಡುತ್ತಿರುವ ಗೋವಾ
ಈ ಸಂಬಂಧ ದಿನಾಂಕ 22.09.2006ರಂದು ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು ಭೂಮಿ ಪೂಜೆ ನೆರವೇರಿಸಿದರು. ಇದರಿಂದ ಕನಲಿದ ಗೋವಾ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ 15.11.2006ರಲ್ಲಿ ದೂರು ಸಲ್ಲಿಸಿ ಕರ್ನಾಟಕದ ಯೋಜನೆಗೆ ತಡೆ ಆದೇಶ ನೀಡಬೇಕೆಂದೂ, ಯೋಜನೆಯನ್ನು ರದ್ದು ಮಾಡಬೇಕೆಂದೂ ಕೋರಿತು. ಸರ್ವೋಚ್ಛ ನ್ಯಾಯಾಲಯವು ದಿನಾಂಕ 27.11.2006ರಂದು ಕರ್ನಾಟಕದ ಕಾಮಗಾರಿಗೆ ತಡೆ ನೀಡಲು ನಿರಾಕರಿಸಿತು.

ಈ ವೇಳೆಗೆ ಮಹದಾಯಿ ಬಚಾವೋ ಅಭಿಯಾನದ ಹೆಸರಲ್ಲಿ ಗೋವಾದಲ್ಲಿ ಕರ್ನಾಟಕದ ಕುಡಿಯುವ ನೀರಿನ ಯೋಜನೆಯನ್ನು ವಿರೋಧಿಸಿ ಹೋರಾಟ ಆರಂಭವಾಯ್ತು. ಗೋವಾ ರಾಜ್ಯ ಈ ಯೋಜನೆಯಿಂದ ತನ್ನ ರಾಜ್ಯದ ಅರಣ್ಯ ಮತ್ತು ಜೀವಸಂಕುಲಕ್ಕೆ ಹಾನಿಯಾಗುತ್ತದೆ ಎನ್ನುವ ವಾದ ಮುಂದಿಟ್ಟಿತು. ನದಿಗೆ ತಿರುವು ನೀಡುವುದರಿಂದ ಗೋವಾದ ಜೀವನದಿಯಾದ ಮಾಂಡೊವಿ ಬತ್ತಿಹೋಗಲಿದೆ ಎಂಬ ವಾದ ಮುಂದಿಟ್ಟು ಅಲ್ಲಿನ ಜನರಲ್ಲಿ ಆಂದೋಲನವುಂಟು ಮಾಡುತ್ತಿದ್ದಾರೆ. ವಾಸ್ತವವಾಗಿ 210 ಟಿ.ಎಂ.ಸಿ ಪ್ರಮಾಣದ ನೀರು ದೊರೆಯುವ ನದಿ ಮಾಂಡೋವಿಯಲ್ಲಿ ದೊರೆಯುವ 21೦ ಟಿ.ಎಂ.ಸಿಯಲ್ಲಿ 7.56 ಟಿ.ಎಂ.ಸಿ ನೀರನ್ನು ತಿರುಗಿಸಿದರೆ ನದಿ ಬತ್ತಿಹೋಗುವುದೇ? 4 ಕಿ.ಮೀ ದೂರ ನಾಲೆ ತೋಡಿದರೆ ಅರಣ್ಯ ಸಂಪತ್ತು, ಅಲ್ಲಿನ ಜೀವಸಂಕುಲ ನಾಶವಾಗುವುದೆ? ಗೋವಾಕ್ಕೆ ಪರಿಸರದ ಬಗ್ಗೆ ಕಾಳಜಿಯಿದ್ದಲ್ಲಿ ಅದೇ ಮಾಂಡೋವಿಯ ದಂಡೆಯಲ್ಲಿ ಎರಡೆರಡು ವಿದ್ಯುತ್ ಉತ್ಪದನಾ ಘಟಕಗಳನ್ನು ಯಾಕೆ ತೆರೆಯುವ ಯೋಜನೆ ಹೊಂದಿದೆ?
ಸದ್ಯಕ್ಕೆ ಸುಪ್ರಿಂಕೋರ್ಟಿನಲ್ಲಿ ಮಹದಾಯಿ ಯೋಜನೆ ಕುರಿತು ಪ್ರಕರಣದ ವಿಚಾರಣೆ ನಡೆಯುತ್ತಿದೆ. ತೀರ್ಪು ಹೊರಬರುವ ಮುನ್ನವೇ ಈಗ ಮತ್ತೆ ಗೋವಾ ಲಾಬಿಗೆ ಮಣಿದಿರುವ ಕೇಂದ್ರ ಸರಕಾರ ನ್ಯಾಯಾಧೀಕರಣ ರಚಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಮಹದಾಯಿ ನದಿಯ ನಮ್ಮ ಪಾಲಿನ 45 ಟಿಎಂಸಿ ನೀರಿನಲ್ಲಿ 7.56 ಟಿಎಂಸಿ ತೆಗೆದುಕೊಳ್ಳಲು ಇನ್ನೂ ಹತ್ತು ಹದಿನೈದು ವರುಷಗಳು ಕಾಯಬೇಕೆ? ಒಟ್ಟಿನಲ್ಲಿ ಇದು ಹುಬ್ಬಳ್ಳಿ ಗದಗುಗಳ ಕುಡಿಯುವ ನೀರಿನ ಬವಣೆಯನ್ನು ಇನ್ನೂ ಹೆಚ್ಚು ಮಾಡುತ್ತದೆ ಅಲ್ವಾ ಗುರೂ?
Related Posts with Thumbnails