ನಮಗೆ ಬೇಕಿರೋದು "ನಮ್ಮ ಮೆಟ್ರೋ"! "ಹಮಾರಾ ಮೆಟ್ರೋ" ಅಲ್ಲಾ!!



ಉಪೇಂದ್ರ ಅವರ ಸಿನಿಮಾ ಶೈಲಿಯಲ್ಲಿ ಹೇಳಬೇಕೆಂದರೆ... ಇಂದು ಬೆಂಗಳೂರಿನಲ್ಲಿ ಎರಡನೇ ಹಂತದ "ಹಮಾರ ಮೆಟ್ರೋ" ಉದ್ಘಾಟನೆಯಾಗಿದೆ. ಐ ಲೈಕ್ ಇಟ್! ಎಲ್ಲಾ ಕನ್ನಡಿಗರಿಗೂ ಅಭಿನಂದನೆ. "ಹಮಾರಾ ಮೆಟ್ರೋ" ಅಧಿಕಾರಿ ವರ್ಗಕ್ಕೂ, ಅರ್ಧಕ್ಕಿಂತಾ ಹೆಚ್ಚು ಬಂಡವಾಳ ಹಾಕಿ ಇಡೀ ಕರ್ನಾಟಕವನ್ನು ಹಿಂದೀಮಂದಿಗೆ ಬರೆದುಕೊಡುತ್ತಿರುವ ರಾಜ್ಯಸರ್ಕಾರಕ್ಕೂ... ಇಷ್ಟೆಲ್ಲಾ ನಡೆಯುತ್ತಿದ್ದರೂ ‘ತಮಗೆ ಏನೂ ಆಗೇ ಇಲ್ಲಾ, ಆಗೋದೇ ಇಲ್ಲಾ, ಹಿಂದೀ ಭಾರತದ ರಾಷ್ಟ್ರಭಾಷೆ, ಇದು ಭಾರತದ ಒಗ್ಗಟ್ಟಿನ ಭಾಷೆ’ ಎಂಬ ಭ್ರಮೆಯಲ್ಲಿ ನಾಳಿನ ಕನ್ನಡಿಗರ ಬದುಕನ್ನು ಕರಾಳವಾಗಿಸುತ್ತಿರುವ ಕನ್ನಡನಾಡಿನ ಎಲ್ಲಾ "ಸತ್-ಪ್ರಜೆ"ಗಳಿಗೂ ಅಭಿನಂದನೆಗಳು!

ಇಂದು ಮೆಟ್ರೋ ಮೂಲಕ ನುಸುಳುವ ಹಿಂದೀ ನಾಳೆ ಬಿಎಂಟಿಸಿಯನ್ನು ಬಿಡೋದಿಲ್ಲಾ! ಮುಂದೊಮ್ಮೆ ಮುಂಬೈಯಲ್ಲಿ ಮರಾಟಿಗೆ ಆಗಿರುವ ಗತಿ ಕನ್ನಡಕ್ಕೂ ಆಗುವ ಮೊದಲು ನಾಡಿನ ಜನರು, ಸರ್ಕಾರ ಎಚ್ಚೆತ್ತುಕೊಂಡರೆ ಒಳಿತು. ಯಾವುದೇ ಕಾನೂನಿನ ಬೆಂಬಲವಿಲ್ಲದ, ಕೇವಲ ಮೆಟ್ರೋದ ಆಡಳಿತ ಮಂಡಳಿ ತೆಗೆದುಕೊಂಡಿರುವ ಈ ಹಿಂದೀ ಪರವಾದ ನಿಲುವು ಎಷ್ಟು ಬೇಗ ಬದಲಾದರೆ ಅಷ್ಟು ನಾಡಿಗೆ ಒಳಿತು! ಏಕೆಂದರೆ...

ನಮ್ಮ ಮೆಟ್ರೋ ಎಂಬ ಹಿಂದೀ ಪ್ರಚಾರಕ!

"ಸಮಾನತೆಯೇ ಜೀವಾಳ, ಇಲ್ಲಿ ಎಲ್ಲರೂ ಸಮಾನರು" ಎಂದು ಬಡಾಯಿ ಕೊಚ್ಚಿಕೊಳ್ಳುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವದ ಹೆಸರಲ್ಲಿ, ಬಹುಸಂಖ್ಯಾತರ ನೆಪದಲ್ಲಿ... ನಿಜಕ್ಕೂ ಅರ್ಧಕ್ಕಿಂತಲೂ ಹೆಚ್ಚು ಭಾರತೀಯರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಿರುವುದು ಉತ್ತರವಾಗಿ ಕಾಣುತ್ತದೆ. ಭಾರತವು ತನ್ನ ಸಂವಿಧಾನದಲ್ಲಿ ಬರೆದುಕೊಂಡು ಒಪ್ಪಿಕೊಂಡು ಆಚರಿಸುತ್ತಿರುವ "ಆಡಳಿತ ಭಾಷಾ ನೀತಿ"ಯೇ ಇದಕ್ಕೆ ಕಾರಣವಾಗಿದೆ. ಈ ಕಾರಣದಿಂದಾಗಿಯೇ ನಮ್ಮ ನಿಮ್ಮ ಕೋಟ್ಯಾಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ‘ಹಿಂದೀ ಭಾಷೆಯನ್ನು ಈ ದೇಶದ ಮೂಲೆಮೂಲೆಗಳಿಗೆ ಹರಡಲು’ ಬಳಸಲಾಗುತ್ತಿದೆ. ಈ ಹರಡುವಿಕೆಯ ಹಿಂದಿರುವ ಉದ್ದೇಶವೇ ಇಡೀ ಭಾರತವನ್ನು ಹಿಂದೀ ಭಾಷಿಕರ ಆಡುಂಬೊಲ ಮಾಡುವುದು ಎಂಬಂತೆ ಕಾಣುತ್ತಿದೆ.  ಹಿಂದೀ ಭಾಷಿಕರು ಎಲ್ಲೇ ಹೋಗಲಿ ಅವರ ಬದುಕು ಸರಾಗವಾಗಿರುವಂತೆ ನೋಡಿಕೊಳ್ಳುವುದೇ ಇದರ ಗುರಿಯಾಗಿದೆ. ಇಲ್ಲದಿದ್ದರೆ ಭಾರತದ ಯಾವುದೇ ಮೂಲೆಯಲ್ಲಿನ ಕೇಂದ್ರಸರ್ಕಾರಿ ಕಚೇರಿಯಲ್ಲೂ ಹಿಂದೀಯಲ್ಲಿ ಬರೆಯಲಾದ ಪತ್ರಕ್ಕೆ ಹಿಂದೀಯಲ್ಲೇ ಉತ್ತರಿಸುವುದು ಕಡ್ಡಾಯ ಎನ್ನುವ ಕಾನೂನು ಇರುತ್ತಿರಲಿಲ್ಲ! ಇರಲಿ... ಈ ಹರಡುವಿಕೆಯು ಕೆಲವೆಡೆ ಹೇರಿಕೆಯಾಗಿದ್ದರೆ ಇನ್ನೂ ಕೆಲವೆಡೆ ಹೇರಿಕೆ ಗೊತ್ತೇ ಆಗದಂತಿದೆ. ಇಂಥಾ ಒಂದು ಪುಣ್ಯಕ್ಷೇತ್ರ ನಮ್ಮ ಬೆಂಗಳೂರಿನಲ್ಲೇ ಹರಿದಾಡುತ್ತಿದೆ. ಅದು "ನಮ್ಮ ಮೆಟ್ರೋ" ರೈಲು ಸಂಪರ್ಕ ವ್ಯವಸ್ಥೆ!

ಮೆಟ್ರೋದಲ್ಲಿ ಹಿಂದೀ ನರ್ತನ!

ನಮ್ಮ ಮೆಟ್ರೋದಲ್ಲಿ ಕೇಂದ್ರಸರ್ಕಾರದ ಹಣ ಸ್ವಲ್ಪಮಟ್ಟಿಗೆ ತೊಡಗಿಸಲಾಗಿದೆ ಎನ್ನುವ ಕಾರಣ ನೀಡಿಯೋ, ಕರ್ನಾಟಕವು ತ್ರಿಭಾಷಾಸೂತ್ರವನ್ನು ಒಪ್ಪಿದೆಯೆನ್ನುವ ಕಾರಣ ನೀಡಿಯೋ ಮೂರುಭಾಷೆಗಳಲ್ಲಿ ಎಲ್ಲಾ ಸೇವೆಗಳನ್ನು ನೀಡಲಾಗುತ್ತಿದೆ. ಇದುವರೆವಿಗೆ ಬೆಂಗಳೂರಿನ ಸಾರ್ವಜನಿಕ ಬಳಕೆಯ ಸ್ಥಳೀಯ ಸಾರಿಗೆಯಲ್ಲಿ ಕನ್ನಡ ಮತ್ತು ಇಂಗ್ಲೀಶ್ ಬಿಟ್ಟು ಹಿಂದೀಯನ್ನು ಬಳಸಿರಲಿಲ್ಲಾ! ಇದೀಗ ನಮ್ಮ ಮೆಟ್ರೋದಲ್ಲಿ ಬರಿಯ ಫಲಕಗಳಷ್ಟೇ ಅಲ್ಲದೆ ಹಿಂದೀಯಲ್ಲಿ ಸೂಚನೆಗಳನ್ನು ಕೂಡಾ ನೀಡಲು ಶುರುಮಾಡಿದ್ದಾರೆ. ಅಲ್ಲಾರೀ! ಕನ್ನಡದಲ್ಲಿದೆಯಲ್ಲಾ... ಹಿಂದೀಲಿ ಇದ್ದರೇನು? ಎಂದು ಭಾವಿಸುವ ಜನರಿಗೇನು ನಮ್ಮಲ್ಲಿ ಕೊರತೆಯಿಲ್ಲ. ಆದರೆ ಯೋಚಿಸಿ ನೋಡಿದರೆ.. ಇದರ ಹಿಂದೆ ಹಿಂದೀ ಭಾಷಿಕರ ವಲಸೆಯನ್ನು ಉತ್ತೇಜಿಸುವ, ಆ ಮೂಲಕ ಕರ್ನಾಟಕದಂತಹ ರಾಜ್ಯಗಳ ಜನಲಕ್ಷಣವನ್ನೇ ಬುಡಮೇಲುಗೊಳಿಸುವ ಹುನ್ನಾರ ಕಾಣುತ್ತದೆ. ಈ ನೀತಿಯ ಹಿಂದೆ ಭಾರತದ ಭಾಷಾನೀತಿಯು ಕೆಲಸ ಮಾಡಿರುವುದು ಕಾಣುತ್ತದೆ ಮತ್ತು ಅದರ ಹುಳುಕು ಕಣ್ಣಿಗೆ ರಾಚುತ್ತದೆ!

ಹುಳುಕು ಯಾಕೆಂದರೆ...!

ಇಲ್ಲಿ ಹಿಂದೀಯ ಅಗತ್ಯವೇ ಇಲ್ಲದಿರುವಾಗಲೂ ಹಾಗೆ ಹಿಂದೀಯನ್ನು ಬಳಸಿರುವುದರ ಏಕೈಕ ಉದ್ದೇಶ "ಹಿಂದೀ ಭಾಷಿಕ ಜನರಿಗೆ ಅನುಕೂಲವಾಗಲೀ" ಎನ್ನುವುದೇ ಆಗಿದೆ. ‘ಬೆಂಗಳೂರಿಗೆ ಭಾರತದ ಎಲ್ಲೆಡೆಯಿಂದ ಜನರು ಬರುತ್ತಾರೆ ಹಾಗಾಗಿ ಇಲ್ಲಿ ಹಿಂದೀ ಬೇಕು’ ಎನ್ನುವವರು ಅರಿಯಬೇಕಾದದ್ದು, ಬೆಂಗಳೂರಿನ ಎರಡನೇ ದೊಡ್ಡ ಭಾಷಿಕ ಸಮುದಾಯ ನೂರಾರು ವರ್ಷಗಳ ಹಿಂದೆಯೇ ಇಲ್ಲಿ ಬಂದು ನೆಲೆಸಿರುವ ತೆಲುಗರದ್ದು! ಹಾಗೇ ಉರ್ದು ಭಾಷಿಕರು, ತಮಿಳರು ಎಲ್ಲಾ ಆದಮೇಲೆ ಹಿಂದಿಯವರ ಸರತಿ ಬರುತ್ತದೆ. ಭಾರತೀಯರೆಲ್ಲಾ ಸಮಾನರೆನ್ನುವುದೇ ದಿಟವಾದರೆ ನಮ್ಮ ಮೆಟ್ರೋದಲ್ಲಿ ಕನ್ನಡದ ಜೊತೆಗೆ ತೆಲುಗು, ಉರ್ದು, ತಮಿಳು ಭಾಷೆಗಳೂ ಇರಬೇಕಿತ್ತು! ಬೇಡಪ್ಪಾ... ದೆಹಲಿಯ ಮೆಟ್ರೋದಲ್ಲಿ ಭಾರತದ ಇನ್ಯಾವ ಭಾಷೆಗೆ ಸ್ಥಾನ ನೀಡಿದ್ದಾರೆ? ಅಂದರೆ ಭಾರತದ ಮೂಲೆಮೂಲೆಯಲ್ಲೂ ಆಯಾಜನರ ಭಾಷೆಯ ಜೊತೆಗೆ ಹಿಂದೀಯನ್ನು ಸೇರಿಸುವುದು! ಅದಕ್ಕೆ ಹೆಚ್ಚು ಜನರಿಗೆ ಅದು ಬರುವ ಭಾಷೆ ಎಂದುಬಿಡುವುದು. ಆ ಮೂಲಕ ಜನಸಂಖ್ಯಾ ಸ್ಫೋಟದಿಂದ ನರಳುತ್ತಿರುವ ಹಿಂದೀ ಭಾಷಿಕ ರಾಜ್ಯಗಳ ಜನರಿಗೆ ಕರ್ನಾಟಕದಂತಹ ಸಮೃದ್ಧ ಜನವಿರಳ ಪ್ರದೇಶಗಳಿಗೆ ವಲಸೆ ಹೋಗಲು ಅನುಕೂಲ ಮಾಡಿಕೊಡುವುದು! ಇದು ಯಾವರೀತಿಯಲ್ಲಿ ಸಮಾನತೆಯೇ ಜೀವಾಳ ಎನ್ನುವ ಮಾತಿಗೆ ಹತ್ತಿರವಾಗಿದೆ? ಇನ್ನು ಹೀಗೆ ಮೆಟ್ರೋದಂತಹ ಸ್ಥಳೀಯ ಸಮೂಹ ಸಾರಿಗೆಯಲ್ಲಿ ಹಿಂದೀ ತೂರಿಸಿರುವುದನ್ನು ಸಮಾನತೆಯ ಸಂಕೇತವಾಗಿ ಕಾಣಬೇಕೋ... ಹಿಂದೀ ಸಾಮ್ರಾಜ್ಯಶಾಹಿ ಮನಸ್ಥಿತಿಯ ಪ್ರತೀಕವಾಗಿ ಕಾಣಬೇಕೋ? ಬೆಂಗಳೂರಿಗೆ ವಲಸೆ ಬರುವ ಹಿಂದೀ ಭಾಷಿಕರಿಗೆ ತೊಂದರೆಯಾಗಬಾರದೆನ್ನುವ ಘನ ಉದ್ದೇಶ ಭಾರತ ಸರ್ಕಾರಕ್ಕಿರುವಂತೆಯೇ... ದೆಹಲಿಗೆ ಹೋಗುವ, ದೆಹಲಿಯಲ್ಲಿರುವ ಕನ್ನಡದವರ ಬಗ್ಗೆಯೂ ಇದೆಯೇ? ಅಸಲಿಗೆ ಹೀಗೆ ಎಲ್ಲರಿಗೂ ಅನುಕೂಲ ಮಾಡಿಕೊಡುವಂತಹ ಭಾಷಾನೀತಿ ಭಾರತದಲ್ಲಿದೆಯೇ ಎಂದರೆ ಕಾಣುವುದು ದೊಡ್ಡ ನಿರಾಸೆ! 

ಸಮಾನತೆಯ ಕೂಗು!

"ಈ ಹುಳುಕು ಸರಿ ಹೋಗಲಿ... ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನಮಾನ ಸಿಗಲಿ. ತನ್ನ ನಾಡಿನಲ್ಲಿ ಆಯಾಭಾಷೆಯ ಸಾರ್ವಭೌಮತ್ವಕ್ಕೆ ಧಕ್ಕೆ ತಾರದಂತಹ ಭಾಷಾನೀತಿ ರೂಪುಗೊಳ್ಳಲಿ" ಎಂಬ ದನಿ ಎತ್ತುವಲ್ಲಿ ನಮ್ಮ ಕನ್ನಡಿಗರೇನು ಹಿಂದೆ ಬಿದ್ದಿಲ್ಲ - ಇದು ಹಿಗ್ಗಿನ,  ಭರವಸೆಯ ವಿಷಯ. ಮೆಟ್ರೋದಲ್ಲಿ ಹಿಂದೀ ತುರುಕಲು ಆರಂಭಿಸಿದಾಗಲೇ ಇದರ ಬಗ್ಗೆ ಸಂಸ್ಥೆಯ ಮುಖ್ಯಸ್ಥರೊಂದಿಗೆ ದೂರು ಸಲ್ಲಿಸಿದವರು ಹಲವರು. ಮೆಟ್ರೋ ಮುಖ್ಯಸ್ಥರ ಉದ್ಧಟತನದ ಉತ್ತರದಿಂದ ಬೇಸತ್ತವರು ಮತ್ತೆ ಕೆಲವರು. ಸೋಲೊಪ್ಪದೆ ಬೆನ್ನು ಹತ್ತಿ ಮೆಟ್ರೋದ ಈ ಹಿಂದೀ ಪರವಾದ ನಿಲುವನ್ನು ಪ್ರಶ್ನಿಸಿ "ಇಂತಹ ನಿಲುವಿಗೆ ಕಾರಣ ವಿವರಿಸಿ" ಎಂದು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಅರ್ಜಿ ಸಲ್ಲಿಸಿ ನಕ್ಷತ್ರಿಕನ ಹಾಗೆ ಬೆನ್ನು ಹತ್ತಿದವರು ಮತ್ತೆ ಕೆಲವರು. ಮನವಿಕಾಯುವಿಕೆಮೇಲ್ಮನವಿದೂರು,  ವಿಚಾರಣೆ... ಹೀಗೆ ಛಲ ಬಿಡದ ತ್ರಿವಿಕ್ರಮನಂತೆ ಎಲ್ಲಾ ಮೆಟ್ಟಿಲುಗಳನ್ನೂ ಹತ್ತುತ್ತಾ, ಸುಮಾರು ಎರಡು ವರ್ಷಗಳಿಂದಲೂ ಉತ್ಸಾಹ ಬತ್ತಿಸಿಕೊಳ್ಳದೆ ಮೆಟ್ರೋದ ಬೆನ್ನು ಬಿದ್ದಿರುವ ಗೆಳೆಯರಿಗೆ ಬಂದಿರುವ ಉತ್ತರಗಳನ್ನು ನೀವು ಇಲ್ಲಿ ನೋಡಿರಿ.

ಆರ್ ಟಿ ಐಗೆ ಉತ್ತರ!



ಹೀಗೆ ರಾಜ್ಯಸರ್ಕಾರದ ಗೆಜೆಟ್ ಸೂಚನೆಯಂತೆ ಹಿಂದೀ ಬಳಸಿದ್ದೇವೆ ಎಂದು ಮೊದಲು ಹೇಳಿದವರು ಅದಕ್ಕೆ ಬೇಕಾದ ಆಧಾರ ಕೊಡದೆ ಯಾವುದೋ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪತ್ರ ಲಗತ್ತಿಸಿದ್ದರು. ಮುಂದೆ ಮೇಲ್ಮನವಿ/ ವಿಚಾರಣೆ ಅಂದಾಗ ಇದು ತಮ್ಮ ಆಡಳಿತ ಮಂಡಳಿಯ ತೀರ್ಮಾನ ಮತ್ತು ಯಾವುದೇ ಸರ್ಕಾರದ ಆದೇಶವಲ್ಲಾ ಎಂದರು. ಇದು ಇವರ ಸದ್ಯದ ಕೊನೆಯ ಉತ್ತರ. ಕನ್ನಡ ನಾಡಿನ ಮೆಟ್ರೋಲಿ ಹಿಂದೀ ಇರಬೇಕೆಂಬ ನಿರ್ಣಯವನ್ನು ತೆಗೆದುಕೊಳ್ಳಲು ಇದೇನು ಇವರ ಖಾಸಗಿ ಸ್ವತ್ತೇ ಎಂಬ ಪ್ರಶ್ನೆ ಜನರದ್ದು! ನಾಳೆ ನಾಲ್ಕು ಮಂದಿ ಮಲಯಾಳಿಗಳೋ, ತಮಿಳರೋ ಬಂದು ಆಡಳಿತ ಮಂಡಳಿಯಲ್ಲಿ ಕೂತು ಮಲಯಾಳವನ್ನೋ, ತಮಿಳನ್ನೋ ಬೆಂಗಳೂರಿನ ಮೆಟ್ರೋದಲ್ಲಿ ತರುವುದಿಲ್ಲಾ ಎನ್ನಲು ಸಾಧ್ಯವೇ! ಕನ್ನಡದ ಜನತೆ ಎಚ್ಚೆತ್ತುಕೊಳ್ಳದೆ ಹೋದರೆ ನಾಳೆ ಪಶ್ಚಾತ್ತಾಪ ಪಡಬೇಕಾದೀತು!! ಅಲ್ವಾ ಗುರೂ?







2 ಅನಿಸಿಕೆಗಳು:

hamsanandi ಅಂತಾರೆ...

ನಮ್ಮ ಮೆಟ್ರೋದಲ್ಲಿ ಹಿಂದಿ ಬೇಕಿಲ್ಲ!

Unknown ಅಂತಾರೆ...

Howdu. Namma metrodalli hindi bekilla

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails