ಗಾಡ್ರೆಜ್ ಜಾಹೀರಾತು: ಆಡೂ ಆಟ ಆಡೂ...


ಇಂಥಾ ಒಂದು ಜಾಹೀರಾತು ಇವತ್ತಿನ ಪ್ರಜಾವಾಣಿಯ ಮೊದಲನೆ ಪುಟದಲ್ಲಿ ರಾರಾಜುಸ್ತಾ ಇದೆ ಗುರೂ! ಗಾಡ್ರೆಜ್ ಸಂಸ್ಥೆಯೋರು ಹೊರಡಿಸಿರೋ ಈ ಜಾಹೀರಾತು ಒಂದೊಳ್ಳೆ ಮಾರುಕಟ್ಟೆ ತಂತ್ರವಾಗಿದೆ ಅನ್ನೋದು ಕಾಣ್ತಾಯಿದೆ. ತಮ್ಮ ಉತ್ಪನ್ನಗಳನ್ನು ಜನರಿಗೆ ಪರಿಚಯಿಸೋಕೆ ಅಂತಾ ಸಂಸ್ಥೆಗಳು ಟಿ.ವಿಗಳಲ್ಲಿ ಜಾಹೀರಾತು ಕೊಡೋದ್ರು ಜೊತೆ ಹೊಸ ಹೊಸ ಸ್ಪರ್ಧೆಗಳನ್ನು ಏರ್ಪಡಿಸೋದನ್ನು ನಾವೆಲ್ಲಾ ನೋಡ್ತಾನೆ ಇದೀವಿ. ಇದೂ ಅಂಥದ್ದೇ ಒಂದು ಸ್ಪರ್ಧೆ ಅನ್ನೋದು ಒಂದು ಲೆಕ್ಕದಲ್ಲಿ ನಿಜವೇ ಆದರೂ, ಗಾಡ್ರೆಜ್ ಸಂಸ್ಥೆ ಈ ಬಾರಿ ಭಾರತದ ಭಾಷಾ ವೈವಿಧ್ಯತೇನಾ ಗಮನಕ್ಕೆ ತೆಗೆದುಕೊಂಡಿರೋದು ಎದ್ದು ಕಾಣ್ತಿದೆ. ಇದು ಮೆಚ್ಚತಕ್ಕ ವಿಷಯವಾಗಿದೆ.

ತಮಿಳುನಾಡಿನಲ್ಲಿ ತಮಿಳು, ಕರ್ನಾಟಕದಲ್ಲಿ ಕನ್ನಡ

ಕರ್ನಾಟಕದಲ್ಲಿ "ಗೇಮ್ ಆಡಿ, ಲೈಫ್ ಛೇಂಜ್ ಮಾಡಿ" ಹೆಸರಲ್ಲಿ ಶುರುವಾಗ್ತಿರೋ ಈ ಕಾರ್ಯಕ್ರಮಾನಾ ತಮಿಳುನಾಡಿನಲ್ಲಿ ತಮಿಳಿನಲ್ಲಿ "ಗಾಡ್ರೆಜ್ ವಾಳ್ವೈ ಮಾಟ್ರಲಾಂ ವಾಂಗೋ " ಎಂದೂ, ಆಂಧ್ರಪ್ರದೇಶದಲ್ಲಿ ತೆಲುಗಿನಲ್ಲಿ "ಆಡಂಡಿ, ಲೈಫ್ ಮಾರ್ಚುಕೊಂಡಿ" ಎಂದೂ ಆಯಾಯಾ ಭಾಷೆಗಳಲ್ಲೇ ಮಾಡಲು ಗಾಡ್ರೆಜ್ ಸಂಸ್ಥೆ ಮುಂದಾಗ್ತಿದೆ. ಇದು ಒಳ್ಳೇ ನಡೆಯಾಗಿದೆ.
ನಮ್ಮೂರ ಎಫ್.ಎಂ ವಾಹಿನಿಗಳನ್ನು ಕೇಳುದ್ರೆ ಕಿವಿ ಮೇಲೆ ರಾಚೋದು ಹಿಂದೀ ಜಾಹೀರಾತುಗಳೇ. ಇದ್ಯಾಕಪ್ಪಾ ಹೀಗ್ ಮಾಡ್ತೀರಾ ಅಂದ್ರೆ "ನಮಗೆ ಎಲ್ಲಾ ದಿಲ್ಲಿಯಿಂದ ಬರುತ್ತೆ, ಮುಂಬೈಯಿಂದ ಬರುತ್ತೆ" ಅನ್ನೋ ಸಬೂಬು ಕೇಳುತ್ತೆ. ಅವರ ಪ್ರಕಾರ ಆಯಾ ಭಾಷೆಗಳಲ್ಲಿ ಜಾಹೀರಾತು ಮಾಡ್ಸಿ ಹಾಕೋದು ಖರ್ಚಿನ ಬಾಬತ್ತು. ಇರಲಿ. ಆದರೆ ಕನ್ನಡಿಗರನ್ನು ಕನ್ನಡದಲ್ಲೇ ಪರಿಣಾಮಕಾರಿಯಾಗಿ ಮುಟ್ಟೋಕೆ ಸಾಧ್ಯ ಅಂತಾ ಮನವರಿಕೆ ಆದವರು ಕರ್ನಾಟಕದಲ್ಲಿ ಕನ್ನಡದಲ್ಲಿ ಜಾಹೀರಾತು ಹಾಕಕ್ಕೆ ಹಿಂಜರಿಯಲಾರರು ಅಲ್ವಾ ಗುರೂ!

ಡಿಶ್ ಮಾರುಕಟ್ಟೆಗೆ ಕನ್ನಡ ಆಯಾಮ


ವಿಡಿಯೋಕಾನ್ ಸಂಸ್ಥೆಯ ಈ ಜಾಹೀರಾತು ವಿಜಯ ಕರ್ನಾಟಕ ದಿನ ಪತ್ರಿಕೆಯ 08.09.2010ರ ಸಂಚಿಕೆಯಲ್ಲಿ ಪ್ರಕಟವಾಗಿದೆ. ವಿಡಿಯೋಕಾನ್ ಸಂಸ್ಥೆಯೋರು ಅತಿಹೆಚ್ಚಿನ ಸಂಖ್ಯೆಯ ಕನ್ನಡ ಚ್ಯಾನೆಲ್‍ಗಳು ಅಂತಾ ಹಾಕೋ ಮೂಲಕ ಕನ್ನಡಿಗರ ಗಮನಾನ ಸೆಳೆಯೋ ಪ್ರಯತ್ನಾ ಮಾಡಿದಾರೆ.

ಡಿಶ್ ಎಂಬ ಮನೆಮನೆಯ ಕಿರೀಟ!

ಟಿ.ವಿ ಕ್ಷೇತ್ರದಲ್ಲಿ ಖಾಸಗಿ ಚಾನೆಲ್ಲುಗಳ ಪ್ರವೇಶ ಒಂದು ಕ್ರಾಂತಿಯನ್ನುಂಟು ಮಾಡಿದ ಹಾಗೇ, ಇಂಥಾ ವಾಹಿನಿಗಳನ್ನು ಮನೆಮನೆಗೆ ಮುಟ್ಟಿಸುವಲ್ಲಿ ಡಿ.ಟಿ.ಎಚ್ ಮಾಡಿರೋ ಕ್ರಾಂತಿಯೂ ಪ್ರಮುಖವಾದದ್ದು. ಯಾವುದೇ ತಂತಿಗಳ ಸಹಾಯವಿಲ್ಲದೆ ಮನೆ ಮನೆಯ ಮೇಲೆ ಕಿರೀಟದಂತೆ ಕೂಡಿಸಲಾಗೋ ಡಿಶ್‍ಗಳ ಮೂಲಕ ನೂರಾರು ಚಾನೆಲ್ಲುಗಳು ಅತ್ಯದ್ಭುತ ಎನ್ನಿಸೋ ಗುಣಮಟ್ಟದಲ್ಲಿ ಸಿಗುತ್ತವೆ ಅನ್ನೋದು ತಂತ್ರಜ್ಞಾನದ ಕೊಡುಗೆ. ಇಂಥಾ ಕ್ರಾಂತಿಯನ್ನು ಉದ್ಯಮವಾಗಿಸಿಕೊಂಡು ನಾಡಿನ ಹಳ್ಳಿಹಳ್ಳಿಗಳನ್ನೂ ಮುಟ್ಟುತ್ತಿರೋ ಸಂಸ್ಥೆಗಳು ಹತ್ತಾರು. ಇಂಥಾ ಸಂಸ್ಥೆಗಳಲ್ಲಿ ದೊಡ್ಡ ಹೆಸರಿನವುಗಳಾದ ಸನ್, ರಿಲಯನ್ಸ್, ಏರ‍್ಟೆಲ್, ಡಿಶ್, ಟಾಟಾ ಸ್ಕೈ ಮೊದಲಾದವುಗಳ ಸಾಲಿಗೆ ಈಗ ವಿಡಿಯೋಕಾನ್ ಸೇರಿಕೊಂಡಿದೆ.

ಕೊಳ್ಳುಗರಿಗೆ ಬೇಕಾದ್ದು ಕೊಡಬೇಕು.

ಈ ಚಾನೆಲ್ಲುಗಳು ತಮ್ಮ ಮಾರುಕಟ್ಟೆ ಹೆಚ್ಚಿಸಿಕೊಳ್ಳಲು ಕೊಡೋ ಜಾಹೀರಾತುಗಳಲ್ಲಿ "ಸೌತ್ ಪ್ಯಾಕು" "ಸೌತ್ ಸ್ಪೆಷಲ್ ಪ್ಯಾಕು" ಅಂತೆಲ್ಲಾ ಹೇಳ್ತಾ ತಮ್ಮಲ್ಲಿ ನೂರಾರು ಚಾನೆಲ್ಲುಗಳಿವೆ ಅಂತಾ ಪೈಪೋಟಿ ಮಾಡ್ತಾರೆ, ಅದರ ಬದಲು ಕನ್ನಡಿಗರಿಗೆ ಎಷ್ಟು ಕನ್ನಡ ಚಾನಲ್ ಕೊಡ್ತೀವಿ ಅನ್ನೋದು ಮಾರುಕಟ್ಟೆ ತಂತ್ರ ಆಗಬೇಕು ಅಂತಾ ಹಿಂದೊಮ್ಮೆ ಏನ್‍ಗುರುವಿನಲ್ಲಿ ಬರೆದಿದ್ದೆವು. ಇದೀಗ ವಿಡಿಯೋಕಾನ್ ಸಂಸ್ಥೆಯ ಕಡೆಯಿಂದ ಈ ದಿಕ್ಕಲ್ಲಿ ಮೊದಲ ನಡೆ ಕಾಣ್ತಾಯಿದೆ. ಅತಿಹೆಚ್ಚು ಕನ್ನಡ ಚಾನೆಲ್ಲುಗಳನ್ನು ಕೊಡ್ತೀವಿ, ನಮ್ಮದನ್ನು ತೊಗೊಳ್ಳಿ ಅನ್ನೋ ಜಾಹೀರಾತು ಮಾರುಕಟ್ಟೆಯಲ್ಲಿ ಕನ್ನಡ ಭಾಷೆ ತೆಗೆದುಕೊಳ್ಳುತ್ತಿರುವ ಪ್ರಾಮುಖ್ಯತೆಯನ್ನೂ, ಕನ್ನಡಿಗರಲ್ಲಿ ಉಂಟಾಗುತ್ತಿರುವ ಜಾಗೃತಿಯನ್ನೂ ತೋರಿಸುತ್ತಿದೆ. ಈ ಜಾಹೀರಾತಲ್ಲಿ ಕನ್ನಡದಲ್ಲಿ ಬರೆದಿರೋ ಹಿಂದೀ ಸಾಲುಗಳನ್ನು ಬಲಾಯಿಸಿಕೊಳ್ಳಿ ಅಂತಾ ವಿಡಿಯೋಕಾನ್ ಸಂಸ್ಥೆಯೋರಿಗೆ ಹೇಳ್ತಾ, ಅತಿಹೆಚ್ಚು ಕನ್ನಡ ಚಾನೆಲ್ಲು ಕೊಡ್ತೀನಿ ಅಂದಿದ್ದಕ್ಕೆ ಪ್ರೋತ್ಸಾಹಿಸಿ ಅಭಿನಂದಿಸೋದು ಸರಿಯಾಗಿದೆ ಅಲ್ವಾ ಗುರೂ!

ಗ್ರಹಣ ಹಿಡಿದಿರೋ ದಿನಗಳು!


ಭಾರತೀಯ ರೇಲ್ವೇಯಿಂದ ಕನ್ನಡಿಗರಿಗೆ ಹಿಂದೀ ವಿಷ!


ಸಮಸ್ತ ಕನ್ನಡಿಗರ ಹೆಮ್ಮೆಯ ದಿನಪತ್ರಿಕೆಯಾದ ವಿಜಯ ಕರ್ನಾಟಕದ, ಮೊನ್ನೆಯ ಅಂದ್ರೆ ಸೆಪ್ಟೆಂಬರ್ 09ನೇ ತಾರೀಕಿನ ಸಂಚಿಕೆಯ ಆರನೇ ಪುಟದಲ್ಲಿ ಬಂದಿರೋ ಜಾಹೀರಾತು ನೋಡಿ. ರೈಲು ಇಲಾಖೆಯೋರು ಇದುನ್ನಾ ಕನ್ನಡ ದಿನಪತ್ರಿಕೆಯಲ್ಲಿ ಹಿಂದೀಲಿ ಹಾಕ್ಸಿದಾರಲ್ಲಾ? ಯಾಕೆ?

ಹಿಂದಿ ಹೇರಿಕೆಯ ಹೀನಸುಳಿ.

"ಹೌದೂ! ನೀವು ಎಷ್ಟು ಉಗುದ್ರೂ, ಬಾಯಿ ಬಡ್ಕೊಂಡ್ರೂ ನಾವಿರೋದೇ ಹೀಗೇ" ಅಂತಿದೆ ಭಾರತದ ಕೇಂದ್ರಸರ್ಕಾರ. "ಭಾರತದಲ್ಲಿರಬೇಕು ಅಂದ್ರೆ ಹಿಂದೀ ಕಲಿತಿರಬೇಕು. ಹಿಂದೀ ಒಪ್ಕೊಳ್ಳಿ ಇಲ್ಲಾ ಜೊತೆಗಾರ ಪಯಣಿಗರು ಕೊಡೋ ವಿಷಾ ಕುಡ್ದು ಸಾಯಿರಿ" ಅಂತಾ ಅಲ್ದೇ ಇನ್ನೇನು ಅರ್ಥ ಇದೆ ಗುರೂ ಇದಕ್ಕೆ? ಭಾರತದ ಸರ್ಕಾರವು ಸಂವಿಧಾನವೇ ಹಿಂದಿಯ ಪ್ರಸಾರವನ್ನು ಸರ್ಕಾರದ ಕರ್ತವ್ಯ ಮಾಡಿ, ಅದರ ಆಧಾರದ ಮೇಲೆ ಸರ್ಕಾರ "ಒತ್ತಾಯ, ಆಮಿಷ ಮತ್ತು ವಿಶ್ವಾಸಗಳೆಂಬ ಮೂರು ಅಸ್ತ್ರಗಳನ್ನು ಬಳ್ಸಿ, ಹಿಂದೀನಾ ಹರಡಿ" ಅಂತಾ ನಿಯಮಾನೇ ಬರೆದಿದೆಯೆಲ್ಲಾ? ಇನ್ನು ಯಾರದ್ದೇನು ಆಕ್ಷೇಪಾ ಅಂತಾ ಹಿಂದೀ ಮಾತೆಯನ್ನು ಕನ್ನಡಿಗರ ಮನೆಮನೆಗಳಲ್ಲಿ ಪ್ರತಿಷ್ಠಾಪಿಸಲು ಮುಂದಾಗುತ್ತಿದೆ. ದೇಶದಲ್ಲಿ ಒಗ್ಗಟ್ಟು ಮೂಡಿ, ಶಾಂತಿ ನೆಲೆಸಬೇಕೆಂದರೆ ಈ ಹಾಳು ಕನ್ನಡ, ತಮಿಳು, ತೆಲುಗು, ಮಲಯಾಳಿ, ಗುಜರಾತಿ, ಮರಾಠಿ, ಬೆಂಗಾಳಿ, ಪಂಜಾಬಿ, ಒರಿಯಾ, ತುಳು ,ಕೊಂಕಣಿ.... ಮುಂತಾದ ಭಾಷೆಗಳೆಲ್ಲಾ ಹಿಂದೀ ಭಾಷೆಯಲ್ಲಿ ಲೀನವಾಗಬೇಕು ಅಂತಾ ಅಂದ್ಕೊಂಡುಬಿಟ್ಟಂಗಿದೆ ಗುರೂ!

ಭಾರತಕ್ಕೊಪ್ಪೋ ಭಾಷಾನೀತಿ...

ಹಿಂದಿನ ಬರಹದಲ್ಲಿ ವಿಶ್ವಸಂಸ್ಥೆಯು ಜಗತ್ತಿನ ನಾನಾ ಭಾಷಾ ಸಮುದಾಯಗಳ ಭಾಷಿಕ ಹಕ್ಕನ್ನು ಉಳಿಸಿಕೊಳ್ಳೋದರ ಬಗ್ಗೆ ಹೊಂದಿರೋ ನಿಲುವು, ತೋರಿಸಿರೋ ಕಾಳಜಿಗಳ ಬಗ್ಗೆ ನೋಡುದ್ವಿ. ವಿಶ್ವಸಂಸ್ಥೆಯ ಸದಸ್ಯತ್ವ ಹೊಂದಿರೋ ಭಾರತದಲ್ಲಿ ಪರಿಸ್ಥಿತಿ ಹೀಗೇ ಇದೆಯಾ ಅಂತಾ ಈ ಬಾರಿ ನೋಡೋಣ. ಭಾರತ ದೇಶ ಅನೇಕ ಭಾಷಾ ಜನಾಂಗಗಳಿರುವ ನಾನಾ ಸಂಸ್ಕೃತಿಗಳ, ಆಚರಣೆಗಳ, ನಂಬಿಕೆಗಳ ಒಂದು ದೊಡ್ಡ ದೇಶ. ರಾಜಕೀಯವಾಗಿ 1947ರಲ್ಲಿ ಸ್ವಾತಂತ್ರ್ಯ ದಕ್ಕಿಸಿಕೊಂಡ ಸಂದರ್ಭದಲ್ಲಿ ನಮ್ಮೆದುರು ಇದ್ದ ಮುಖ್ಯವಾದ ಸವಾಲುಗಳು "ಈ ವೈವಿಧ್ಯತೆಗಳ ನಾಡನ್ನು ಹೇಗೆ ಆಳಿಕೊಳ್ಳೋದು? ಹೇಗೆ ಒಗ್ಗಟ್ಟಿನಲ್ಲಿಟ್ಟುಕೊಳ್ಳೋದು?..." ಇತ್ಯಾದಿಗಳು.

ಮೊದಲ ಹೆಜ್ಜೆಯಲ್ಲೇ ಎಡವಿದ ಭಾರತ

ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಮೊದಲೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಅಧಿವೇಶನಗಳಲ್ಲಿ ಸ್ವಾತಂತ್ರ್ಯದ ನಂತರದ ಭಾರತದ ಸ್ವರೂಪದ ಬಗ್ಗೆ ಚರ್ಚಿಸಿದ್ದರು. ಆಗಲೇ ಹಿಂದಿಯನ್ನು ಭಾರತದ ರಾಷ್ಟ್ರಭಾಷೆಯಾಗಿ ಹೊಂದುವ ಬಗ್ಗೆ ಚರ್ಚೆಯಾಯಿತು. ಸ್ವಾತಂತ್ರ್ಯದ ನಂತರ ಅಂತಹ ಪ್ರಯತ್ನಗಳೂ ನಡೆದವು. ಹಿಂದಿಯೇತರ ಪ್ರದೇಶಗಳ ವಿರೋಧದ ಕಾರಣದಿಂದಾಗಿ ಅದು ಫಲಿಸಲಿಲ್ಲ. ಧುಲೇಕರ್ ಎಂಬ ಒಬ್ಬ ಸಂಸದರಂತೂ “ಹಿಂದಿ ಬಾರದವರು ಭಾರತದಲ್ಲಿರಲು ನಾಲಾಯಕ್ಕು” ಎಂಬ ಹೇಳಿಕೆ ನೀಡಿದ್ದರು. ಅದಕ್ಕೆ ಉತ್ತರವಾಗಿ ಕೃಷ್ಣಮಾಚಾರಿಯವರು “ನಿಮಗೆ ಒಡೆದಿರುವ ಹಿಂದೀ ಭಾರತ ಬೇಕೆ? ಅಥವಾ ಇಡೀ ಭಾರತ ಬೇಕೇ?” ಎಂದು ಖಾರವಾಗಿ ಪ್ರತಿಕ್ರಿಯಿಸಿ, ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿಸಿದರೆ ಭಾರತ ಒಡೆದು ಹೋದೀತು ಎಂಬ ಎಚ್ಚರಿಕೆ ನೀಡಿದ್ದರು. ಮೂರು ವರ್ಷಗಳ ತೀವ್ರವಾದ ಚರ್ಚೆಯ ನಂತರ ೧೯೫೦ರಲ್ಲಿ ಭಾರತದ ಸಂವಿಧಾನವು ರೂಪುಗೊಂಡು ಜಾರಿಯಾಯಿತು.

ಸಂವಿಧಾನ ನೀಡಿರುವ ಹಿಂದಿಪ್ರಚಾರದ ಪರವಾನಗಿ

ಸದರಿ ಸಂವಿಧಾನದಲ್ಲಿ ಹಿಂದಿಯನ್ನು ರಾಷ್ಟ್ರಭಾಷೆಯೆಂದು ಘೋಷಿಸಲಿಲ್ಲವಾದರೂ ಭಾರತಕ್ಕೆ ರಾಜ್‌ಭಾಷಾ ಎಂಬ ಹೊಸ ಪಟ್ಟವನ್ನು ಕಟ್ಟಿ ಅದನ್ನು ಭಾರತದ ಕೇಂದ್ರಸರ್ಕಾರದ ಅಧಿಕೃತ ಸಂಪರ್ಕ ಭಾಷೆಯನ್ನಾಗಿಸಿ, ಜೊತೆಗೆ ೧೫ ವರ್ಷಗಳ ಕಾಲಕ್ಕಾಗಿ ಇಂಗ್ಲೀಷನ್ನು ಸೇರಿಸಿ ಘೋಷಿಸಲಾಯಿತು. ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡದಂತೆ ತಡೆಯಲು ಯತ್ನಿಸಿದ ಹಿಂದಿಯೇತರ ನಾಡಿನವರಿಗೆ ಭಾರತೀಯ ಸಂವಿಧಾನದಲ್ಲಿ ರಾಷ್ಟ್ರಭಾಷೆ ಎಂಬ ಪದದ ಬಳಕೆ ಆಗಿಲ್ಲದಿರುವುದು ಸಮಾಧಾನ ತಂದಿತು. ಆದರೆ ಸಂವಿಧಾನದ 351ನೇ ಕಲಮಿನಲ್ಲಿ ಹಿಂದಿಯ ಪ್ರಸಾರವನ್ನು ಮಾಡುವುದು ಕೇಂದ್ರದ ಕರ್ತವ್ಯವೆಂದು ಬರೆಯಲಾಗಿರುವುದು, ಒಟ್ಟಾರೆ ಭಾರತದೇಶದ ಭಾಷಾನೀತಿಗೆ ಹಿಡಿದ ಕನ್ನಡಿಯಾಗಿದ್ದು, ವಾಸ್ತವವಾಗಿ ಅಂದಿನಿಂದಲೇ ಹಿಂದೀ ಭಾಷೆಯನ್ನು ಭಾರತದ ಮನೆಮನೆಗಳಲ್ಲಿ ಪ್ರತಿಷ್ಠಾಪಿಸುವ ಕ್ರಮಕ್ಕೆ ಭಾರತದ ಕೇಂದ್ರಸರ್ಕಾರವೇ ಮುನ್ನುಡಿ ಹಾಡಿತು. ಹೀಗಾಗಿ ಆ ಸಮಾಧಾನವೆಂಬುದು ಹಿಂದೀಭಾಷೆಗೆ ರಾಷ್ಟ್ರಭಾಷೆ ಎಂಬ ಹೆಸರು ದಕ್ಕಿಲ್ಲ ಎಂಬುದಕ್ಕೇ ಮಾತ್ರಾ ಸೀಮಿತವಾಯಿತು.

ಸಂವಿಧಾನದ ಪುಟಗಳಲ್ಲಿ “ಭಾರತದಲ್ಲಿ ಹಿಂದಿಯ ಬಳಕೆಯನ್ನು ಕ್ರಮೇಣ ಹೆಚ್ಚಿಸಲು ಭಾರತವು ಬದ್ಧವಾಗಿರುತ್ತದೆ” (ಆರ್ಟಿಕಲ್ 351) ಎಂದು ಬರೆಯಲಾಯಿತು. ಭಾರತದಲ್ಲಿ ಹಿಂದಿಯನ್ನು ಏಕೈಕ ಅಧಿಕೃತ ಭಾಷೆಯನ್ನಾಗಿಸುವ ಗುರಿಯಿಂದ, ಹಿಂದಿಯನ್ನು ಪಸರಿಸಲು ಐದು ವರ್ಷಗಳಲ್ಲಿ ಒಂದು ಇಲಾಖೆಯನ್ನು ತೆಗೆಯಬೇಕು ಮತ್ತು ಕ್ರಮೇಣ ಇಂಗ್ಲಿಷ್ ಬಳಕೆಗೆ ಕಡಿವಾಣ ಹಾಕಲು ಶ್ರಮಿಸಬೇಕು (ಆರ್ಟಿಕಲ್ 344) ಎನ್ನಲಾಯಿತು. ರಾಜ್ಯ ರಾಜ್ಯಗಳ ನಡುವೆ, ರಾಜ್ಯ ಕೇಂದ್ರಸರ್ಕಾರಗಳ ನಡುವಿನ ಎಲ್ಲಾ ವಹಿವಾಟುಗಳು ಹಿಂದಿ/ ಇಂಗ್ಲೀಷಿನಲ್ಲಿ ಮಾತ್ರವೇ ಇರತಕ್ಕದು (ಆರ್ಟಿಕಲ್ 345) ಎಂದೆಲ್ಲಾ ಬರೆಯಲಾಯಿತು.

ಹಿಂದಿ ಹರಡುವಿಕೆಯ ಯೋಜನೆಗಳು

ಸಾಧ್ಯವಾದಾಗಲೆಲ್ಲಾ ಹಿಂದಿಯ ಸಾರ್ವಭೌಮತ್ವ ಸ್ಥಾಪಿಸಲು ಪ್ರಯತ್ನಗಳು ನಡೆದವು. ಭಾಷಾ ಸಮಿತಿಯನ್ನು ನೇಮಿಸಿ 1963ರಲ್ಲಿ ಅಧಿಕೃತ ಭಾಷಾ ಸ್ಥಾನದಿಂದ ಇಂಗ್ಲಿಷನ್ನು ಕಿತ್ತೆಸೆದು, ಹಿಂದಿಯೊಂದನ್ನೇ ಉಳಿಸಿಕೊಳ್ಳುವ ಪ್ರಯತ್ನಗಳು ನಡೆದವು. ತಮಿಳುನಾಡಿನಲ್ಲಿ ಪ್ರತಿರೋಧ ಹುಟ್ಟಿಕೊಂಡಾಗ, 1965ರಲ್ಲಿ ಇಂಗ್ಲೀಷನ್ನೂ ಅದೇ ಸ್ಥಾನದಲ್ಲಿ ಮುಂದುವರೆಸುವ ಒಂದು ತಿದ್ದುಪಡಿಯನ್ನು ತರಲಾಯಿತು. ಆದರೇನು? ಯಾವುದೇ ಇತರ ಭಾರತೀಯ ಭಾಷೆಗಿಲ್ಲದ ಸೌಕರ್ಯ ಹಿಂದಿ ಪ್ರಚಾರಕ್ಕೆ ನೀಡಲಾಯಿತು. ಸಾರ್ವಜನಿಕರ ತೆರಿಗೆಯ ಹಣದಿಂದ ನೂರಾರು ಕೋಟಿ ರೂಪಾಯಿಗಳನ್ನು ಕೇವಲ ಹಿಂದೀ ಪ್ರಚಾರಕ್ಕಾಗಿ ಬಳಸಲಾಗುತ್ತಿದೆ. ಮತ್ತೊಂದು ಕಡೆ ಭಾರತದ ತುಂಬೆಲ್ಲಾ ಹಿಂದೀ ಪ್ರಚಾರ ಸಭೆಗಳನ್ನು ಆರಂಭಿಸಲಾಯಿತು. ವಿಶ್ವಾಸ, ಉತ್ತೇಜನ ಮತ್ತು ಒಲಿಸುವಿಕೆಯ ಮೂಲಕ ಹಿಂದಿಯನ್ನು ಹರಡಬೇಕೆಂಬುದು ಭಾರತ ದೇಶದ ನೀತಿಯಾಯಿತು.

ಡಿಪಾರ್ಟ್‌ಮೆಂಟ್ ಆಫ್ ಅಫಿಷಿಯಲ್ ಲಾಂಗ್ವೇಜ್

ಇಂತಹ ಗುರಿ ಈಡೇರಿಕೆಗಾಗಿಯೇ ಡಿಪಾರ್ಟ್‌ಮೆಂಟ್ ಆಫ್ ಅಫಿಷಿಯಲ್ ಲಾಂಗ್ವೇಜ್ ಅನ್ನೋ ಇಲಾಖೆಯನ್ನು ತೆರೆಯಲಾಯಿತು. ಅದರ ಮೂಲಕ ಕೇಂದ್ರಸರ್ಕಾರಿ/ ಕೇಂದ್ರದ ಅಧೀನದ ಕಛೇರಿಗಳಲ್ಲಿ ಹಿಂದಿಯನ್ನು ಅನುಷ್ಠಾನಗೊಳಿಸಲು ರೂಪುರೇಶೆಗಳನ್ನು ರೂಪಿಸಿ ಭಾರತದ ಅಧಿಕೃತ ಸಂಪರ್ಕ ಭಾಷಾ ಕಾಯ್ದೆಯನ್ನು ರೂಪಿಸಲಾಯ್ತು. ೧೯೭೬ರಲ್ಲಿ ಜಾರಿಗೆ ತರಲಾದ ಭಾರತದ ಅಫಿಷಿಯಲ್ ಲಾಂಗ್ವೇಜ್ ರೂಲ್ಸ್‌ನ ನಿಯಮಾವಳಿಗಳಂತೂ ಹಿಂದಿಯನ್ನು ಪ್ರತಿಷ್ಠಾಪಿಸುವ ಕೆಲಸಕ್ಕೆ ಮತ್ತಷ್ಟು ವೇಗ ತಂದುಕೊಡುವಂತಿದ್ದವು. ಈ ಕಾನೂನು ಜಾರಿಯಲ್ಲಿಯೂ ತಾರತಮ್ಯ ಎದ್ದು ಕಾಣುವಂತಿತ್ತು. ಏಕೆಂದರೆ ಈ ಕಾಯ್ದೆ ತಮಿಳುನಾಡಿಗೆ ಅನ್ವಯವಾಗುವುದಿಲ್ಲ ಎಂದು ಮೊದಲ ಪ್ಯಾರಾದಲ್ಲೇ ಬರೆಯಲಾಗಿದೆ. ದೇಶದ ಯಾವುದೇ ಮೂಲೆಯ ಕೇಂದ್ರಸರ್ಕಾರಿ ಕಛೇರಿಯಲ್ಲೂ ಹಿಂದಿಯಲ್ಲಿ ಬರೆಯಲಾದ ಪತ್ರಕ್ಕೆ ಹಿಂದಿಯಲ್ಲೇ ಉತ್ತರ ನೀಡಬೇಕು ಎಂದು ಇದರಲ್ಲಿರುವುದು ಹಿಂದೀ ಸಾಮ್ರಾಜ್ಯಶಾಹಿಯ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ

ಹಿಂದಿಯೊಂದಕ್ಕೆ ಮಾತ್ರಾ ಮಾನ್ಯತೆ

ಒಟ್ಟಾರೆ ಭಾರತದ ಭಾಷಾನೀತಿಯು ಸ್ಪಷ್ಟವಾಗಿ ಹಿಂದಿಯೆನ್ನುವ ಒಂದು ಭಾಷೆಗೆ ಮಾತ್ರಾ ಪ್ರೋತ್ಸಾಹ ಕೊಡುವಂತಿದೆ. ಈ ಪ್ರೋತ್ಸಾಹ, ಹಿಂದಿ ಭಾಷಿಕ ಪ್ರದೇಶಗಳಿಗೆ ಮಾತ್ರಾ ಸೀಮಿತವಾಗಿದ್ದಿದ್ದರೆ ನಮ್ಮ ನುಡಿಗೂ ಹೀಗೆ ಪ್ರೋತ್ಸಾಹ ಕೊಡಿ ಅನ್ನಬಹುದಿತ್ತು. ಆದರೆ ಭಾರತ ಸರ್ಕಾರದ ಈ ಕ್ರಮಗಳು ಹಿಂದಿಯನ್ನು ನಮ್ಮ ನಾಡೊಳಗೆ ಪ್ರತಿಷ್ಠಾಪಿಸಲು ನೀಡುತ್ತಿರುವ ಪ್ರೋತ್ಸಾಹವಾಗಿದೆ. ತಾರತಮ್ಯದ ಭಾಷಾನೀತಿ, ವಿಶ್ವಸಂಸ್ಥೆಯ ಭಾಷಾನೀತಿಗೆ ವಿರುದ್ಧವಾಗಿರುವಂತೆ ಎದ್ದು ಕಾಣುತ್ತಿದೆ.
ಹಾಗಾದರೆ ಭಾರತದ ಭಾಷಾನೀತಿ ಹೇಗಿರಬೇಕು ಎಂದರೆ...

ಭಾರತಕ್ಕೊಪ್ಪೋ ಭಾಷಾನೀತಿ


ಅನೇಕ ವೈವಿಧ್ಯತೆಗಳನ್ನು ಹೊಂದಿರುವ ಭಾರತವನ್ನು ಅವುಗಳ ವೈವಿಧ್ಯತೆ/ ಅನನ್ಯತೆಗಳನ್ನು ಉಳಿಸಿಕೊಳ್ಳಲು ಪೂರಕವಾಗುವಂತೆ ನಮ್ಮ ಭಾಷಾನೀತಿ ಇರಬೇಕಾಗಿದೆ. ವಿಶ್ವಸಂಸ್ಥೆಯು ಘೋಷಿಸಿರುವ ಭಾಷಾ ಹಕ್ಕುಗಳು ಭಾರತದ ಪ್ರತಿಯೊಂದು ಭಾಷಾ ಸಮುದಾಯಕ್ಕೆ ದೊರಕಿಸಿಕೊಡುವಂತಹ ಭಾಷಾನೀತಿ ರೂಪುಗೊಳ್ಳಬೇಕಾಗಿದೆ. ಭಾರತದ ಪ್ರತಿಯೊಂದು ಭಾಷೆಗೂ ರಾಜ್‌ಭಾಷೆಯ ಪಟ್ಟ ಸಿಗಲಿ. ರಾಜ್ಯರಾಜ್ಯಗಳ ನಡುವಿನ ವಹಿವಾಟು ಆಯಾ ರಾಜ್ಯಗಳ ನುಡಿಗಳಲ್ಲಾಗಲಿ. ಪ್ರತಿರಾಜ್ಯಕ್ಕೂ ತನ್ನ ನುಡಿಯಲ್ಲಿ ತನ್ನ ಆಡಳಿತ, ಶಿಕ್ಷಣ, ಬದುಕುಗಳನ್ನು ಕಟ್ಟಿಕೊಳ್ಳಲು ಪೂರಕವಾಗುವಂತಹ ಭಾಷಾನೀತಿ ಭಾರತದ್ದಾಗಲಿ. ಹೀಗೆ ಪ್ರತಿಯೊಂದು ಪ್ರದೇಶದಲ್ಲೂ ಆಯಾ ಪ್ರದೇಶದ ಭಾಷೆಗೆ ಸಾರ್ವಭೌಮತ್ವವನ್ನು ನಿಜವಾಗಿಯೂ ತಂದುಕೊಡಬಲ್ಲಂತೆ ಭಾರತದ ಭಾಷಾನೀತಿಯನ್ನು ಮರು ರೂಪಿಸಬೇಕಾಗಿದೆ. ಒಟ್ಟಾರೆ ಎಂಟನೇ ಪರಿಚ್ಛೇದದಲ್ಲಿರುವ ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡಬೇಕಾಗಿದೆ.
ಪ್ರಗತಿಯ ಪಯಣದಲ್ಲಿ ಪ್ರತಿಯೊಂದು ಭಾಷಾ ಸಮುದಾಯವೂ, ವ್ಯಕ್ತಿಯೂ, ಜನಗಳೂ ಪಾಲುಗೊಳ್ಳಲು ಅನುಕೂಲಕರವಾದ, ಪೂರಕವಾಗುವಂತಹ, ಭಾಷಾ ವೈವಿಧ್ಯಗೆ ಧಕ್ಕೆ ತರದಂತಹ, ಸಂಪರ್ಕ ಸಂವಹನ ಸಾಧಿಸಲು ಪೂರಕವಾಗಿರುವ, ಎಲ್ಲಾ ಭಾಷಿಕ ಸಮುದಾಯಗಳ ಸರ್ವತೋಮುಖ ಏಳಿಗೆಗೆ, ಪರಿಸರಕ್ಕೆ, ಸಂಸ್ಕೃತಿಗೆ ಪೂರಕವಾಗುವಂತೆ ಪ್ರತಿಯೊಂದು ಭಾಷಾ ಸಮೂಹವೂ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ಭಾಷನೀತಿಯನ್ನು ರೂಪಿಸಲಿ.

ಕೊನೆಹನಿ : ಇಂತಹ ಭಾಷಾನೀತಿಯನ್ನು ರೂಪಿಸಲು ಭಾರತವೆನ್ನುವ ಬಹುಭಾಷಿಕ ಪ್ರದೇಶಗಳಿಂದಾದ ದೇಶದಲ್ಲಿ ಸಂವಿಧಾನಕ್ಕೆ ಅಗತ್ಯವಿರುವ ತಿದ್ದುಪಡಿ ಮಾಡುವುದರಲ್ಲಿ ತಪ್ಪೇನೂ ಇಲ್ಲ.

ವಿಶ್ವಸಂಸ್ಥೆಯ ಭಾಷಾ ನೀತಿ

ಸೆಪ್ಟೆಂಬರ್ ಅಂದ ಕೂಡಲೇ ಹಿಂದಿ ದಿನಾಚರಣೆ ನೆನಪಾಗುತ್ತದೆ. ಈ ಹಿಂದೆಲ್ಲಾ ಸೆಪ್ಟೆಂಬರ್ 14ನ್ನು ಭಾರತದ ತುಂಬೆಲ್ಲಾ ಹಿಂದೀ ದಿನವನ್ನಾಗಿ ಆಚರಿಸಲಾಗುತ್ತಿತ್ತು. ಭಾರತ ಕೇಂದ್ರಸರ್ಕಾರದ ಭಾಷಾನೀತಿಗಳಿಂದಾಗಿಯೂ, ಬೊಕ್ಕಸದ ನೆರವಿನಿಂದಾಗಿಯೂ ಇತ್ತೀಚಿಗೆ ಈ ದಿನಾಚರಣೆಯು - ಹಿಂದಿ ಸಪ್ತಾಹ, ಹಿಂದೀ ಪಕ್ಷಾಚರಣೆಯಾಗಿದ್ದು, ಮುಂಬರುವ ದಿನಗಳಲ್ಲಿ ಹಿಂದೀ ಮಾಸಾಚರಣೆ, ವರ್ಷಾಚರಣೆಗಳಾಗಿ ಬದಲಾದರೂ ಅಚ್ಚರಿಯಿಲ್ಲ. ಭಾರತದ ಕೇಂದ್ರಸರ್ಕಾರವೇನೋ ಹಿಂದಿಯನ್ನು ಇಡೀ ಭಾರತದ ಮೂಲೆಮೂಲೆಗೆ ಮುಟ್ಟಿಸುವ ರಣೋತ್ಸಾಹದಲ್ಲಿದೆ. ನಮಗೆ ಹಿಂದಿ ಬೇಕೋ? ಬೇಡವೋ? ಕನ್ನಡಿಗರ ಬದುಕಲ್ಲಿ ಹಿಂದೀ ಎನ್ನುವ ನಮ್ಮದಲ್ಲದ ನುಡಿಯನ್ನು ಭಾರತಸರ್ಕಾರ ನುಗ್ಗಿಸುವುದು ಸರಿಯೇ? ಬಹುಭಾಷೆಯ ಸಮುದಾಯಗಳು ಸೇರಿ ಆಗಿರುವ ಭಾರತಂತಹ ದೇಶದಲ್ಲಿ ಎಂಥಾ ವ್ಯವಸ್ಥೆ ಇರಬೇಕು? ಇಂತಹ ವಿಷಯಗಳ ಬಗ್ಗೆ ವಿಶ್ವಸಂಸ್ಥೆಯು ಎಂತಹ ನಿಲುವನ್ನು ಹೊಂದಿದೆ ಎಂದು ನೋಡಿದಾಗ, ಭಾರತದ ಸದರಿ ಭಾಷಾನೀತಿಯ ತಪ್ಪುಒಪ್ಪುಗಳು ಮನದಟ್ಟಾಗುತ್ತವೆ. ಏನ್‌ಗುರು ಮುಂದಿನ ಕೆಲವು ದಿನಗಳ ಕಾಲ ಈ ಬಗ್ಗೆ ಸರಣಿ ಬರಹವನ್ನು ನಿಮ್ಮ ಮುಂದಿಡುತ್ತಿದೆ.

ವಿಶ್ವಸಂಸ್ಥೆಯು ಭಾಷೆಗೆ ನೀಡಿರುವ ಮಹತ್ವ

ವಿಶ್ವಸಂಸ್ಥೆಯು ವಿಶೇಷವಾಗಿ ಗಮನ ಹರಿಸಿರುವ ಕ್ಷೇತ್ರಗಳಲ್ಲಿ ಪ್ರಮುಖವಾದ ಒಂದು ಕ್ಷೇತ್ರ ಮಾನವ ಹಕ್ಕುಗಳು. ಇದರೊಳಗೇ ಭಾಷಾ ಸಮುದಾಯದ ಹಕ್ಕುಗಳನ್ನು ಅಡಕಗೊಳಿಸಿದ್ದಾರೆ. ಇದರ ಮೂಲ ಉದ್ದೇಶ ಪ್ರಪಂಚದ ಎಲ್ಲಾ ಭಾಷಿಕ ಸಮುದಾಯಗಳೂ ಕೂಡಾ ಉಳಿಯಬೇಕು. ಪ್ರತಿಯೊಂದು ಸಮುದಾಯವೂ ಕೂಡಾ ಮನುಕುಲದ ಪ್ರಗತಿಯಲ್ಲಿ ತಾನೂ ಭಾಗವಾಗಿರುವುದರ ಜೊತೆಯಲ್ಲೇ, ಇದಕ್ಕಾಗಿ ಕೊಡುಗೆ ನೀಡುತ್ತಾ ತನ್ನನ್ನು ತೊಡಗಿಸಿಕೊಳ್ಳಬೇಕು. ಇಂತಹ ಪಾಲುದಾರಿಕೆ ಸಾಧ್ಯವಾಗುವುದು ಪ್ರತಿಯೊಂದು ಸಮುದಾಯದ ಭಾಷೆ ಉಳಿದಾಗ, ಬೆಳೆದಾಗ ಮಾತ್ರಾ. ಕೆಲವು ಸಮುದಾಯಗಳ ಭಾಷೆಗಳು ಹಲವಾರು ಕಾರಣಗಳಿಂದಾಗಿ ಇಂದು ಆತಂಕ ಎದುರಿಸುತ್ತಿದೆ. ಹಾಗಾಗಿ ಇಂತಹ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ, ಒಟ್ಟಾರೆ ಮನುಕುಲದ ಅಭಿವೃದ್ಧಿಯ ದೃಷ್ಟಿಯಿಂದ ಈ ಭಾಷಾಹಕ್ಕುಗಳನ್ನು ಗುರುತಿಸಿ ಘೋಷಿಸಲಾಗಿದೆ. ಇದು ಇಡೀ ಜಗತ್ತಿಗೆ ಅನ್ವಯಿಸುವಂತದ್ದು. ಭಾರತದೇಶದಲ್ಲಿ ಇದೀಗ ಅನುಸರಿಸಲಾಗುತ್ತಿರುವ ಭಾಷಾನೀತಿಯು, ಹೇಗೆ ಇಂತಹ ಒಂದು ಸದುದ್ದೇಶಕ್ಕೆ ವಿರುದ್ಧವಾಗಿದೆ ಎಂಬುದನ್ನು ಈ ಹಿಂದೀ ಉತ್ಸವಗಳ ಸಂದರ್ಭದಲ್ಲಿ ತಿಳಿದುಕೊಳ್ಳೋಣ. ವಿಶ್ವಸಂಸ್ಥೆಯ ಅಂಗ ಸಂಸ್ಥೆಗಳಲ್ಲೊಂದಾದ UNESCO, ಜಗತ್ತಿನ ಭಾಷಾ ಸಮುದಾಯಗಳ ಕುರಿತು ಹೊರಡಿಸಿರೋ ಬಾರ್ಸಿಲೋನಾ ಭಾಷಾಹಕ್ಕುಗಳ ಘೋಷಣೆಯಲ್ಲಿ ಪ್ರತಿಯೊಂದು ಭಾಷಾ ಸಮುದಾಯದ ಹಕ್ಕುಗಳ ಬಗ್ಗೆ ಹೀಗೆ ಹೇಳಿದೆ :

ಭಾಷಾ ಹಕ್ಕು ಘೋಷಣೆಯ ಉದ್ದೇಶ

ಯುನೆಸ್ಕೋ ಹೊರತಂದಿರುವ ಈ ಭಾಷಾಹಕ್ಕುಗಳು: ಬಾರ್ಸಿಲೋನಾ ಘೋಷಣೆಯ ಉದ್ದೇಶ ಇಂತಿದೆ :
ಸ್ವಯಂ ಆಡಳಿತದ ಕೊರತೆ, ಜನಸಂಖ್ಯೆಯ ಕೊರತೆ, ಸಮುದಾಯದ ಕೆಲಭಾಗ ಅಥವಾ ಇಡೀ ಸಮುದಾಯವೇ ಚದರಿ ಹೋಗಿರುವುದು, ಬಲಹೀನ ಆರ್ಥಿಕಮಟ್ಟ, ಸುಧಾರಿಸಿಲ್ಲದ ಭಾಷಾಮಟ್ಟ, ಬಲಶಾಲಿ ಸಮೂಹದ ನಂಬಿಕೆ/ ಸಂಸ್ಕೃತಿಗಳಿಗೆ ಮುಖಾಮುಖಿಯಾಗಿರುವಿಕೆಗಳು ಒಂದು ಭಾಷಾ ಸಮುದಾಯದ ಉಳಿವಿಗೆ ಎದುರಾಗಿರುವ ಆತಂಕಗಳಾಗಿದ್ದು ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಆಯಾಮಗಳ ಗುರಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸವಾಲುಗಳನ್ನೆದುರಿಸುವುದು ಅಸಾಧ್ಯವೆನ್ನುವ ಪರಿಸ್ಥಿತಿ ಉಂಟಾಗಿದೆ.

ರಾಜಕೀಯ ಗುರಿಗಳು : ಏಳಿಗೆಯ ದಿಕ್ಕಿನೆಡೆಗಿನ ಪ್ರಗತಿಯ ಪಯಣದಲ್ಲಿ ಎಲ್ಲಾ ಸಮುದಾಯಗಳೂ ಒಂದಾಗಿ ಸಾಗಲು ಪೂರಕವಾಗುವಂತಹ, ಭಾಷಾ ವೈವಿಧ್ಯಗೆ ಧಕ್ಕೆ ತರದಂತಹ ವ್ಯವಸ್ಥೆಯನ್ನು ರೂಪಿಸುವುದು.
ಸಾಂಸ್ಕೃತಿಕ ಗುರಿಗಳು : ಪ್ರಗತಿಯ ಹಾದಿಯಲ್ಲಿ ಜಗತ್ತಿನಾದ್ಯಂತ ಸಂಪರ್ಕ ಸಂವಹನ ಸಾಧಿಸಲು ಪೂರಕವಾಗಿರುವ, ಪ್ರತಿಯೊಂದು ಭಾಷಾ ಸಮುದಾಯವೂ, ವ್ಯಕ್ತಿಯೂ, ಜನಗಳೂ ಪಾಲುಗೊಳ್ಳಲು ಅನುಕೂಲಕರವಾದ ವ್ಯವಸ್ಥೆಯನ್ನು ರೂಪಿಸುವುದು.
ಆರ್ಥಿಕ ಗುರಿಗಳು : ಪ್ರಗತಿಗೆ ಪೂರಕವಾಗುವಂತಹ, ಎಲ್ಲಾ ಭಾಷಿಕ ಸಮುದಾಯಗಳ ಸರ್ವತೋಮುಖ ಏಳಿಗೆಗೆ, ಪರಿಸರಕ್ಕೆ, ಸಂಸ್ಕೃತಿಗೆ ಪೂರಕವಾಗುವಂತೆ ಪ್ರತಿಯೊಂದು ಭಾಷಾ ಸಮೂಹವೂ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ಮಾದರಿಯನ್ನು ರೂಪಿಸುವುದು.

ಈ ಮೂರು ಗುರಿಗಳ ಕಾರಣದಿಂದಾಗಿ ಇಲ್ಲಿ ಯಾವೊಂದು ರಾಷ್ಟ್ರವನ್ನಾಗಲೀ, ರಾಜಕೀಯ ಸಾರ್ವಭೌಮತ್ವವನ್ನಾಗಲೀ ಮಾನದಂಡವಾಗಿ ಪರಿಗಣಿಸದೆ ಭಾಷಿಕ ಸಮುದಾಯವನ್ನು ಪರಿಗಣಿಸಿ, ಸಮುದಾಯಗಳ ಭಾಷಿಕ ಹಕ್ಕಿನ ಬಗ್ಗೆ ಪ್ರತಿಪಾದಿಸಲಾಗಿದೆ. ಇಡೀ ಮನುಕುಲ ತನ್ನ ಭಾಷಾವೈವಿಧ್ಯತೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಗಳನ್ನು ಉಳಿಸಿಕೊಂಡು ಸೌಹಾರ್ದಯುತವಾದ ಸಹಬಾಳ್ವೆಯನ್ನು ನಡೆಸುತ್ತಾ, ಇಡೀ ಮನುಕುಲವು ಏಳಿಗೆಯತ್ತ ಸಾಗಲು ಇದು ಅತ್ಯಗತ್ಯವೆಂದು ಭಾವಿಸಲಾಗಿದೆ.
ಇದರಲ್ಲಿರೋ ಮಹತ್ವದ ಅಂಶಗಳು

ವೈಯುಕ್ತಿಕ ಮಟ್ಟದಲ್ಲಿ ವ್ಯಕ್ತಿಯೊಬ್ಬನಿಗೆ ತನ್ನತನವನ್ನು ಉಳಿಸಿಕೊಳ್ಳಲು ಇರುವ ಹಕ್ಕಿನ ಬಗ್ಗೆ ತಿಳಿಸುತ್ತಾ, ತಾನಿರುವ ನೆಲದ ಮುಖ್ಯವಾಹಿನಿಗೆ ಪೂರಕವಾಗಿರಬೇಕೆಂಬ ಸಣ್ಣ ಎಚ್ಚರಿಕೆಯನ್ನೂ ನೀಡುತ್ತದೆ. ಇದರೊಟ್ಟಿಗೆ ಒಂದು ಭಾಷಾ ಸಮುದಾಯಕ್ಕೆ ತನ್ನದೇ ನೆಲದಲ್ಲಿ ಇರುವ ಹಕ್ಕುಗಳ ಬಗ್ಗೆ ತಿಳಿಸಲಾಗಿದೆ. ಅಂದರೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಕನ್ನಡವನ್ನು ಎಷ್ಟರಮಟ್ಟಿಗೆ ಬಳಸುವ ಹಕ್ಕು ಇದೆ ಎಂಬುದನ್ನು ಇದು ತಿಳಿಸಿಕೊಡುತ್ತದೆ. ಇಡೀ ವರದಿಯು ಇಂಗ್ಲೀಷಿನಲ್ಲಿ http://www.unesco.org/cpp/uk/declarations/linguistic.pdf ಕೊಂಡಿಯಲ್ಲಿ ಸಿಗುತ್ತದೆ. ಈ ವರದಿಯ ಪ್ರಮುಖವಾದ ಕೆಲವು ಮಾಹಿತಿಗಳನ್ನು ಈ ಕೆಳಗೆ ಕೊಟ್ಟಿದ್ದೇವೆ.

ಪರಿಚ್ಛೇದ 8.2 : ಪ್ರತಿಯೊಂದು ಭಾಷಾ ಸಮುದಾಯಕ್ಕೂ ತನ್ನ ನುಡಿಯನ್ನು ಮುಂದಿನ ಪೀಳಿಗೆಗೆ ದಾಟಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಹಕ್ಕು ಇರುತ್ತದೆ.
ಪರಿಚ್ಛೇದ 11 : ಎಲ್ಲಾ ಭಾಷಾ ಸಮುದಾಯಗಳಿಗೂ ಈ ಘೋಷಣೆಯ ಪ್ರತಿಯೊಂದು ಹಕ್ಕನ್ನೂ ಸಾಧಿಸಿಕೊಳ್ಳುವ ಅಧಿಕಾರವಿರುತ್ತದೆ.
ಪರಿಚ್ಛೇದ 14 : ಈ ಹಕ್ಕುಗಳನ್ನು ತನ್ನ ವ್ಯಾಪ್ತಿಯ ಪ್ರದೇಶದಲ್ಲಿನ ನುಡಿಯ ಸ್ವಾಭಾವಿಕವಾದ ಹಕ್ಕುಗಳಿಗೆ ಧಕ್ಕೆ ತರುವಂತೆ ಅರ್ಥೈಸಲಾಗದು.
ಪರಿಚ್ಛೇದ 16 : ಎಲ್ಲಾ ಭಾಷಿಕ ಸಮುದಾಯಕ್ಕೂ ತನ್ನ ಪರಿಧಿಯೊಳಗಿನ ಎಲ್ಲಾ ಸ್ಥಳೀಯ ಹಾಗೂ ಕೇಂದ್ರಗಳ ಸಾರ್ವಜನಿಕ ಕಛೇರಿಯಲ್ಲಿ ತನ್ನದೇ ನುಡಿಯಲ್ಲಿ ಸೇವೆಯನ್ನು ಪಡೆಯುವ ಹಕ್ಕಿರುತ್ತದೆ.
ಪರಿಚ್ಛೇದ 18 : ಎಲ್ಲಾ ಭಾಷಾ ಸಮುದಾಯಗಳಿಗೂ ತಮ್ಮದೇ ನುಡಿಯಲ್ಲಿ ನೆಲದ ಕಾನೂನು, ನೀತಿ ನಿಯಮಗಳನ್ನು ಆಯಾಪ್ರದೇಶದ ಭಾಷೆಯಲ್ಲೇ ದೊರಕಿಸಿಕೊಡಬೇಕು.
ಪರಿಚ್ಛೇದ 22 : ಎಲ್ಲಾ ಭಾಷಾ ಸಮುದಾಯಗಳಿಗೆ ಪ್ರಮಾಣಪತ್ರಗಳನ್ನು ನೋಟರಿಯಿಂದಾಗಲೀ, ಇನ್ಯಾವುದೇ ಅಧಿಕೃತ ಸಂಸ್ಥೆಗಳಿಂದ ಪಡೆಯುವಾಗಲಾಗಲೀ, ಆಯಾಪ್ರದೇಶದ ಭಾಷೆಯಲ್ಲಿ ಪಡೆಯುವ ಹಕ್ಕಿರುತ್ತದೆ. ಇದನ್ನು ಮಾನ್ಯ ಮಾಡದೇ ಇರುವ ಹಾಗಿಲ್ಲ.
ಪರಿಚ್ಛೇದ 24 : ಪ್ರತಿಯೊಂದು ಭಾಷಾ ಸಮುದಾಯಕ್ಕೂ ತನ್ನ ನಾಡಿನ ಕಲಿಕೆಯ ವ್ಯವಸ್ಥೆಯಲ್ಲಿ ಯಾವ ಹಂತದವರೆಗೂ ತಾಯ್ನುಡಿಯಿರಬೇಕೆಂದು ನಿರ್ಣಯಿಸುವ ಹಕ್ಕಿರುತ್ತದೆ.
ಪರಿಚ್ಛೇದ 28 : ತನ್ನ ನೆಲದ ಇತಿಹಾಸ, ಸಂಸ್ಕೃತಿಗಳನ್ನು ಕಲಿಕೆಯಲ್ಲಿ ತಮಗೆ ಬೇಕಾದ ಪ್ರಮಾಣದಲ್ಲಿ ಅಳವಡಿಸುವ ಹಕ್ಕು ಪ್ರತಿಯೊಂದು ಭಾಷಾ ಸಮೂಹಕ್ಕೂ ಇರುತ್ತದೆ.
ಪರಿಚ್ಛೇದ 32 : ಪ್ರತಿಯೊಂದು ಭಾಷಾ ಸಮುದಾಯಕ್ಕೂ ತನ್ನ ನೆಲದ, ಊರಿನ, ಜಾಗದ ಹೆಸರನ್ನು ತನಗೆ ಬೇಕಾದಂತೆ ಉಚ್ಚರಿಸುವ, ಬಳಸುವ ಹಾಗೂ ಬದಲಾಯಿಸುವ ಅಧಿಕಾರವಿರುತ್ತದೆ.
ಪರಿಚ್ಛೇದ 35 : ಪ್ರತಿಯೊಂದು ಭಾಷಾ ಸಮುದಾಯಕ್ಕೂ ತನ್ನ ನೆಲದಲ್ಲಿನ ಮಾಧ್ಯಮಗಳಲ್ಲಿ ಆ ನೆಲದ ಭಾಷೆ ಯಾವ ಪ್ರಮಾಣದಲ್ಲಿರಬೇಕು ಎಂದು ನಿರ್ಣಯಿಸಿಕೊಳ್ಳುವ ಹಕ್ಕಿರುತ್ತದೆ.
ಪರಿಚ್ಛೇದ 45 : ಪ್ರತಿಯೊಂದು ಭಾಷಾ ಸಮುದಾಯಕ್ಕೂ ತನ್ನ ನೆಲದಲ್ಲಿ ಗ್ರಂಥಾಲಯ, ಚಲನಚಿತ್ರ, ರಂಗಭೂಮಿ, ಮ್ಯೂಸಿಯಂಗಳೂ ಸೇರಿದಂತೆ ಎಲ್ಲಾ ತೆರನಾದ ಸಾಂಸ್ಕೃತಿಕ ಪ್ರಾಕಾರಗಳಲ್ಲಿ ಆ ನೆಲದ ಭಾಷೆಗಿರಬೇಕಾದ ಪ್ರಮುಖವಾದ ಸ್ಥಾನವನ್ನು (ಸಾರ್ವಭೌಮತ್ವವನ್ನು) ಕಾಪಾಡಿಕೊಳ್ಳುವ ಹಕ್ಕಿರುತ್ತದೆ.
ಪರಿಚ್ಛೇದ 48.1 : ಪ್ರತಿಯೊಂದು ಭಾಷಾ ಸಮುದಾಯಕ್ಕೂ ತನ್ನ ನೆಲದಲ್ಲಿ, ತನ್ನ ನುಡಿಯಲ್ಲೇ ಎಲ್ಲಾ ತೆರನಾದ ಗ್ರಾಹಕ ಸೇವೆಯನ್ನು ಪಡೆಯುವ ಹಕ್ಕಿರುತ್ತದೆ. ಬ್ಯಾಂಕಿಂಗ್, ಇನ್ಶುರೆನ್ಸ್, ಸರಕು, ಸಾಮಾನು ಸರಂಜಾಮುಗಳು ಇತ್ಯಾದಿ ಎಲ್ಲವನ್ನೂ ಆ ಪ್ರದೇಶದ ಭಾಷೆಯಲ್ಲಿ ಪಡೆದುಕೊಳ್ಳುವ ಹಕ್ಕಿರುತ್ತದೆ.
ಪರಿಚ್ಛೇದ 48.2 : ಯಾವುದೇ ಸಂಸ್ಥೆ ಆಂತರಿಕವಾಗಿ ಹೊಂದಿರುವ ಅಥವಾ ಹೊಂದಿಲ್ಲದ, ಯಾವುದೇ ಕಾನೂನು ಈ ಚೌಕಟ್ಟನ್ನು ಮೀರಲಾಗುವುದಿಲ್ಲ.
ಪರಿಚ್ಛೇದ 51 : ಪ್ರತಿಯೊಂದು ಭಾಷಿಕ ಸಮುದಾಯಕ್ಕೂ ತನ್ನ ನೆಲದಲ್ಲಿನ ಎಲ್ಲಾ ವ್ಯಾಪಾರಿ ವಹಿವಾಟಿನ ಜಾಹೀರಾತುಗಳು, ಸೈನ್‌ಬೋರ್ಡುಗಳು ಇತ್ಯಾದಿಗಳಲ್ಲಿ ಆ ನೆಲದ ಭಾಷೆಗೆ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುವ ಹಕ್ಕಿರುತ್ತದೆ.
ಎಷ್ಟೊಂದು ವಿಸ್ತಾರವಾಗಿ ನಮ್ಮ ಹಕ್ಕುಗಳ ಬಗ್ಗೆ UNESCO ವಿಶ್ವಸಂಸ್ಥೆಯ ಎಲ್ಲಾ ದೇಶಗಳಿಗೂ ಅನ್ವಯವಾಗುವಂತೆ, ಭಾಷಾ ಸಮುದಾಯಗಳ ಹಕ್ಕಿಗೆ ಸಂಬಂಧಿಸಿದಂತೆ ಘೋಷಣೆ ಹೊರಡಿಸಿದೆಯಲ್ಲವೇ? ಆದರೆ ಭಾರತದೇಶವು ತನ್ನ ನೆಲದಲ್ಲಿ ಎಂತಹ ಭಾಷಾನೀತಿಯನ್ನು ಅಳವಡಿಸಿಕೊಂಡಿದೆ? ಭಾರತದ ಸಂವಿಧಾನ, ಸಂಸತ್ತು, ಆಡಳಿತ ವ್ಯವಸ್ಥೆ ಈ ನಾಡಿನಲ್ಲಿರುವ ಭಾಷಾ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಅಗತ್ಯವಿರುವ ನಿಯಮಾವಳಿಗಳನ್ನು ಹೊಂದಿವೆಯೇ? ಬಹುಭಾಷಿಕ ಭಾರತದ ವೈವಿಧ್ಯತೆಯನ್ನು, ಭಾರತದೇಶವು ಶಾಪವೆಂದು ಪರಿಗಣಿಸಿದೆಯೇ? ಎಂಬುದನ್ನೆಲ್ಲಾ ಅರಿಯಲು ಭಾರತ ಸರ್ಕಾರದ ಭಾಷಾನೀತಿಯ ಬಗ್ಗೆ ಕಣ್ಣು ಹಾಯಿಸೋಣ.

ಮುಂದುವರೆಯುವುದು...

ಚಾಮುಂಡಾ ಅಂದ್ರೆ ನಾಕ: ಚಾಮುಂಡಿ ಅಂದ್ರೆ ನರಕ... ಗೊತ್ತಾ?

ಇತ್ತೀಚಿಗೆ ಕನ್ನಡ ಬರವಣಿಗೆ : ದೋಷಗಳು, ದೌರ್ಬಲ್ಯಗಳು ಅಂತಾ ಮೇಲೂ, ಕನ್ನಡ ಬರೆವಣಿಗೆ ಅಂತಾ ಒಳಗೂ ಅಚ್ಚಾಗಿರೋ ಒಂದು ಪುಸ್ತಕ ಪ್ರಕಟವಾಗಿದೆ. ಈ ಪುಸ್ತಕವು ಕನ್ನಡದ ಬಗ್ಗೆ ಈ ವಿದ್ವಾಂಸ ವಲಯ ಹೊಂದಿರುವ ಅವೈಜ್ಞಾನಿಕವಾದ ನಿಲುವು ನಂಬಿಕೆಗಳನ್ನು ತೋರಿಸಿಕೊಡುತ್ತಿದೆ. ಕನ್ನಡ ಬರವಣಿಗೆ (ಬರೆವಣಿಗೆ?) ಇದೀಗ ದುಸ್ಥಿತಿಯಲ್ಲಿದೆ ಎಂದು ಭಾವಿಸಿರುವ ವಿದ್ವಾಂಸದ್ವಯರು ಬರೆದಿರೋ ಸದರಿ ಪುಸ್ತಕದ ಸಾರಾಂಶ ಇಂತಿವೆ. (ಬಣ್ಣದ ಪ್ಯಾರಾ ಪುಸ್ತಕದಲ್ಲಿದ್ದದ್ದು)

ಇವು ಇಂದಿನ ದುಸ್ಥಿತಿಗೆ ಕಾರಣಗಳಂತೆ!

ಬಳಕೆ ಹೆಚ್ಚಿದ ಹಾಗೇ ಭಾಷೆ ಸವೆಯುತ್ತದೆ. ಅಂದಗೆಡುತ್ತದೆ, ಶಕ್ತಿಗುಂದುತ್ತದೆ. ಏಕೆಂದರೆ ಬಳಕೆದಾರರೆಲ್ಲಾ ಒಂದೇಮಟ್ಟದಲ್ಲಿ ವಿದ್ಯಾವಂತರೂ ಸುಶಿಕ್ಷಿತರೂ ಆಗಿ ಇರುವುದಿಲ್ಲ. ಅವರು ತಮ್ಮ ಕೈಬಾಯಿಗಳಿಗೆ ಸಿಕ್ಕ ಈ ಭಾಷೆಯೆಂಬ ವಸ್ತುವನ್ನು ತೋರಿದಂತೆ ಎಳೆದಾಡುತ್ತಾರೆ, ಎಸೆದಾಡುತ್ತಾರೆ....ಇಂದು ಬಳಕೆಯಲ್ಲಿರುವ ಕನ್ನಡದ ಶಿಷ್ಟಭಾಷೆಯನ್ನು ಲಕ್ಷಿಸಿದರೆ, ಆ ಎಳೆದಾಟ, ಆ ಎಸೆದಾಟ ಯಾವ ರೀತಿಯದು ಎಂಬುದು ತಿಳಿಯುತ್ತದೆ.

ಈ ಸ್ಥಿತಿಗೆ ಕಾರಣವೇನು?

೧. ಕನ್ನಡ ಭಾಷೆಯ ಇಂದಿನ ಶಿಕ್ಷಣದಲ್ಲಿ ಕ್ರಮಬದ್ಧವಾದ ವ್ಯಾಕರಣ ಪಾಠ ಅಲಕ್ಷಿತವಾಗಿದೆ. ೨. ಸಂಸ್ಕೃತ ಭಾಷೆ ಸಾಹಿತ್ಯಗಳ ಅಧ್ಯಯನ ಅವಗಣನೆಗೆ ಗುರಿಯಾಗಿದೆ. ೩. ಭಾಷೆ ಸಾಹಿತ್ಯಗಳ ಶಿಕ್ಷಕರ ಭಾಷಾಜ್ಞಾನ ತೀರಾ ಕೆಳಮಟ್ಟದಲ್ಲಿದೆ. ೪. ಅಭ್ಯಾಸಿಗಳಿಗೂ ವಿದ್ಯಾರ್ಥಿಗಳಿಗೂ ಅನುಸರಣಯೋಗ್ಯವಾದ ಒಳ್ಳೆಯ ಮಾದರಿಗಳು ದೊರೆಯುತ್ತಿಲ್ಲ. ೫. ಕಲಿಯುವವರೂ ಕಲಿಸುವವರೂ ಸಮಾನವಾಗಿ ಶಿಷ್ಟ ಭಾಷೆಯ ಬಳಕೆಯಲ್ಲಿ ಅಸಡ್ಡೆ ತಿರಸ್ಕಾರಗಳನ್ನು ತೋರಿಸುತ್ತಿದ್ದಾರೆ. ೬. ತಾಂತ್ರಿಕ, ವೈದ್ಯಕೀಯ ಮತ್ತು ವೈಜ್ಞಾನಿಕ ಶಿಕ್ಷಣಕ್ಕೆ ಬಹುವಾಗಿ ಪ್ರಾಶಸ್ತ್ಯ ದೊರೆಯುತ್ತಿದ್ದು, ಭಾಷೆ ಸಾಹಿತ್ಯಗಳ ಅಧ್ಯಯನದಲ್ಲಿ ಉತ್ಸಾಹವೂ ಶ್ರದ್ಧೆಯೂ ಸಾಧನೆ ಪರಿಶ್ರಮಗಳೂ ಉದಾಸೀನಕ್ಕೆ ಗುರಿಯಾಗಿವೆ. ೭. ಸೃಜನಾತ್ಮಕ ಸಾಹಿತ್ಯ ಪ್ರಕಾರಗಳಲ್ಲಿ ಪ್ರಾದೇಶಿಕವೂ ಸಾಮಾಜಿಕವೂ ಆದ ಉಪಭಾಷೆಗಳನ್ನೂ ಗ್ರಾಮ್ಯವನ್ನೂ ಹೆಚ್ಚುಹೆಚ್ಚಾಗಿ ಬಳಸುವ ರೂಢಿ ಬೆಳೆಯುತ್ತಿರುವುದರಿಂದ ಶಿಷ್ಟಭಾಷೆಯ ತಿಳಿವಳಿಕೆಗೆ ಬೇಕಾದ ಶಿಕ್ಷಣವೂ ಸಂಸ್ಕಾರವೂ ಈಗ ಅನಾವಶ್ಯಕವೆಂದೂ ತೋರುತ್ತಿದೆ. ೮. ತಪ್ಪುಗಳನ್ನು ತಪ್ಪೆಂದು ತಿಳಿಯದಿರುವುದೂ, ತಿಳಿದರೂ ತಿದ್ದಿಕೊಳ್ಳದಿರುವುದು ಪ್ರವೃತ್ತಿಯಾಗಿದೆ. ೯. ಸರ್ಕಾರ ಮತ್ತು ಸಾಮಾಜಿಕ ಸಂಸ್ಥೆಗಳು ಭಾಷಾ ಶುದ್ಧತೆಯ ಬಗ್ಗೆ ನಿರ್ಲಕ್ಷ್ಯದಿಂದಿವೆ. (ಪುಟ ೭: ಕ.ಬ:ದೋ.ದೌ)

ಆಡಿದಂತೆ, ಬಳಸಿದಂತೆ ಭಾಷೆ ಸವೆಯುತ್ತದೆ ಎನ್ನುವುದಾದರೆ, ಬಳಸಿದರೆ ಸವೆಯುತ್ತದೆಯೆಂದು ಭಾಷೆಯ ಬಳಕೆ ಹೆಚ್ಚಬಾರದು ಎಂಬುದು ಲೇಖಕರ ನಿಲುವೇನು? ಭಾಷೆಯನ್ನು ಬಳಸಲು ವಿದ್ಯಾವಂತರೂ ಸುಶಿಕ್ಷಿತರೂ ಆಗಿರಬೇಕೇನು? ಉಳಿದವರು ಬಳಸುವುದು ಭಾಷೆಯಲ್ಲವೇನು? ಸಂಸ್ಕೃತದ ಅಧ್ಯಯನವು ಐದೂವರೆ ಕೋಟಿ ಕನ್ನಡಿಗರಿಗೆಲ್ಲಾ ಆಗಬೇಕು ಎಂಬುದು ಇವರ ನಿಲುವೇನು? ಸಂಸ್ಕೃತದ ಅಧ್ಯಯನವಾಗದೆ ಕನ್ನಡವನ್ನು ಬಳಸುವುದು ಸರಿಯಲ್ಲವೇನು? ಒಟ್ಟಾರೆ ಕನ್ನಡದ ನಾಲಗೆಯನ್ನು ಸಂಸ್ಕೃತವೆಂಬ ಬೆಣಚುಕಲ್ಲಿಂದ ಗಸಗಸ ತಿಕ್ಕಿ ಶುದ್ಧ ಶಿಷ್ಟ ಕನ್ನಡವೆಂಬ - ಎಂದಿಗೂ ಜನಬಳಕೆಯಲ್ಲಿಲ್ಲದ, ಇದ್ದರೂ ಬೆರಳೆಣಿಕೆಯ ಸಂಸ್ಕೃತ-ಕನ್ನಡ ಪಂಡಿತರ ಬರಹದಲ್ಲಿರುವ - ಭಾಷೆಯನ್ನು ಉಳಿಸಿ ಬಳಸಿ ಬೆಳೆಸಬೇಕೆಂಬ ನಿಲುವು ಕಾಣುತ್ತಿದೆ.

ಈ ಹಿಂದೆ ಸಂಸ್ಕೃತದಿಂದ ಕನ್ನಡಕ್ಕೆ ಬಂದಿರುವ ಮಹಾಪ್ರಾಣಘಟಿತ ಪದಗಳು ತದ್ಭವಗಳಾಗಿ ಬಂದಿರುವುದು ಸರಿಯಷ್ಟೇ. ಇವನ್ನು ಬಳಸುವುದಕ್ಕೆ ಆಕ್ಷೇಪವಿಲ್ಲ. ಆದರೆ ಹೊಸದಾಗಿ ಪದಗಳನ್ನು ಸ್ವೀಕರಿಸುವುದಾದರೆ ಹಾಗೆ ತದ್ಭವ ರೂಪಕ್ಕೆ ತರಬಾರದು. ಆಗ ಸಂಸ್ಕೃತಶಬ್ದಗಳು ಅಂದಗೆಟ್ಟು ಅಪಪ್ರಯೋಗಗಳಾಗುತ್ತವೆ. ಹೀಗೆ ಅಂದಗೆಟ್ಟ ಕೆಲವು ಪದಗಳೆಂದರೆ ಧೃಢ, ಉಚ್ಛ, ಭೀಭತ್ಸ, ಪುತ್ಥಳಿ, ಸ್ವಚ್ಚ ಇತ್ಯಾದಿಗಳು. (ಪುಟ ೯: ಕ.ಬ:ದೋ.ದೌ)

ಯಾವುದೇ ಭಾಷೆಯ ಪದಗಳನ್ನು ಕನ್ನಡಿಗರು ಬಳಸುವಾಗ ಕನ್ನಡದ ಶೈಲಿಯ ಉಚ್ಚರಣೆ ಸಹಜ. ಹಾಗಾಗಿಯೇ ಅಂದು ತತ್ಭವಗಳು ಉಂಟಾಗಿದ್ದು. ಅಂದಿಗೆ ಅದು ಸರಿ, ಇಂದಿಗೆ ಸರಿಯಿಲ್ಲ ಎಂದರೆ ಹೇಗೆ? ಬಸ್, ಕಾರ್ ಎಂಬುವು ಕನ್ನಡದಲ್ಲಿ ಬಸ್ಸು, ಕಾರು ಎಂದು ಬದಲಾಗುವುದೂ ಸಹಜವಾದ ಬದಲಾವಣೆ ತಾನೆ? ಅದು ಅಂದಗೆಡಿಸುವುದೋ? ಎಲ್ಲ ಕನ್ನಡಿಗರೂ ಕನ್ನಡ ನುಡಿಯಲ್ಲಿ ಇರುವ ಸಂಸ್ಕೃತ ಪದಗಳನ್ನು ಸಂಸ್ಕೃತದಲ್ಲಿರುವಂತೆಯೇ ಉಚ್ಚರಿಸಬೇಕೆಂಬ ನಿಲುವು/ ಬಯಕೆಯು ಎಷ್ಟರ ಮಟ್ಟಿಗೆ ಸರಿ? ಎಷ್ಟರ ಮಟ್ಟಿಗೆ ವೈಜ್ಞಾನಿಕ? ಇದು ಎಂದಿಗೂ ಆಗಲಾರದ್ದಲ್ಲವೇನು?

ಸಂಸ್ಕೃತ ವ್ಯಾಕರಣದ ಪರಿಚಯವಿಲ್ಲದೇ ಇರುವ ತಪ್ಪಿನಿಂದಾಗಿಯೂ. ಬಲ್ಲವರ ಒಡನಾಟವಿರದ ತಪ್ಪಿನಿಂದಾಗಿಯೂ ಅನೇಕ ಸಂಸ್ಕೃತ ಪದಗಳು / ಪದಕಟ್ಟುಗಳು ತಪ್ಪಾಗಿವೆ. ಕೋಟ್ಯಾಧೀಶ, ಜಾತ್ಯಾತೀತ, ತಿಂಗಳಾಂತ್ಯ, ಹಿಂದಿಯೇತರ, ಜೈ ರಾಮ, ಅರ್ಧಂಬರ್ಧ, ಕೆಂಪಾಂಬುಧಿ ಇವೆಲ್ಲಾ ತಪ್ಪು. ಕೋಟ್ಯಧೀಶ, ಜಾತ್ಯತೀತ, ತಿಂಗಳಂತ್ಯ, ಹಿಂದೀತರ, ಜಯರಾಮ, ಅರ್ಧಾರ್ಧ, ಕೆಂಪಂಬುಧಿ ಅನ್ನುವುದು ಸರಿ. ಅಂಗಾಂಗ ತಪ್ಪು, ಅಂಗೋಪಾಂಗ ಅನ್ನಬೇಕು, ನಾಯಕಿ ಅಲ್ಲ ನಾಯಿಕೆ, ಸಮಾಜಸೇವಕಿ ಅಲ್ಲಾ ಸಮಾಜಸೇವಿಕೆ, ಪಾಶ್ಚಿಮಾತ್ಯ ಅಲ್ಲ ಪಾಶ್ಚ್ಯಾತ್ಯ, ದಾಯಾದಿ, ಶೋಭಾಯಮಾನ, ಮಹದೇಷ್ವರ, ಯೌವ್ವನ, ಉಪದ್ರ, ಚಾತುರ್ಯ, ಧೂಮ್ರಪಾನ, ಐಕ್ಯತೆ, ದೈನ್ಯತೆ, ಗಾಂಭೀರ್ಯತೆ, ವೈವಿಧ್ಯತೆ, ಔದಾರ್ಯತೆ, ಮಾಲಿನ್ಯತೆ, ದೇವಾನುದೇವತೆ, ಪ್ರಸ್ತಾಪ, ಜಿಗುಪ್ಸೆ, ಮಹತ್ಕಾರ್ಯ, ಲೇಖಕಿ, ಪೌರ್ಣಿಮೆ... ಎಲ್ಲಾ ತಪ್ಪು. ಮಹತ್ವ ಅಂದರೆ ತಪ್ಪು, ಮಹತ್ತ್ವ ಅನ್ನಬೇಕು, ಬಹುತ್ತ್ವ ತಪ್ಪು ಬಹುತ್ವ ಸರಿ... (ಪುಟ ೧೪~೨೩ರ ಸಾರ: ಕ.ಬ:ದೋ.ದೌ)
ಉಲಿದಂತೆ ಬರೆಯಬೇಕು ಅನ್ನುವ ವಾದಕ್ಕೆ ಮೇಲಿನ ಉದಾಹರಣೆಗಳು ಸಮರ್ಥನೆ ಕೊಡುತ್ತವೆ. ಆಡುಭಾಷೆಯಲ್ಲಿ ಇವುಗಳ ಉಚ್ಚರಣೆಯನ್ನು ತಿದ್ದಿಕೊಳ್ಳಬೇಕು ಎಂದರೆ ಎಲ್ಲ ಜನರ ನಾಲಗೆ ಬದಲಿಸಬೇಕು. ‘ಹಾಗೇನೂ ಈ ಪುಸ್ತಕ ಹೇಳುತ್ತಿಲ್ಲ. ಬರಹದಲ್ಲಿ ಹೀಗಿರಬೇಕ’ ಅನ್ನುವುದಾದರೆ ಬರಹಕ್ಕೂ ಆಡುವುದಕ್ಕೂ ನಡುವಿನ ವ್ಯತ್ಯಾಸ ಹೀಗೇ ಉಳಿಸಿಕೊಳ್ಳಬೇಕಾಗುತ್ತದೆ. ಆಗ ಬರಹಕ್ಕೆ ಅರ್ಥವೇ ಇರುವುದಿಲ್ಲ. ನಿಮಗೊಂದು ತಮಾಷೆ ಗೊತ್ತಾ? ಈ ಪಂಡಿತರ ಪ್ರಕಾರ ನಮ್ಮ ಪುರಂದರ ದಾಸರು... ‘ಆಡಿಸಿದಳೆಶೋದೆ ಜಗದೋದ್ಧಾರನಾ...’ ಅಂದಿರೋದು ತಪ್ಪು. ‘ಆಡಿಸಿದಳು ಯಶೋದೆ, ಜಗದುದ್ಧಾರನಾ...’ ಅನ್ನಬೇಕಿತ್ತು.
ಇನ್ನು ಹೆಸರುಗಳನ್ನು ಇಡುವಾಗ (ಅಂಕಿತ ನಾಮ ಬಳಸುವಾಗ) ಸದೃಶರೂಪಗಳ ಅಂಧಾನುಕರಣೆಯಿಂದಾಗಿಯೂ, ಉಚ್ಚಾರಣೆಯ ವಿಕೃತಿಯ ಫಲವಾಗಿಯೂ, ಅಸಡ್ಡೆ, ಅಶಿಕ್ಷೆಯ ಫಲವಾಗಿಯೂ ತಪ್ಪು ಹೆಸರುಗಳನ್ನು ಇಡುತ್ತಾರೆ/ ಬಳಸುತ್ತಾರೆ. ಚಾಮುಂಡಿ, ದುರ್ಗಿ, ಗಾಯಿತ್ರಿ, ರಘೋತ್ತಮ ಪಾಲಾಕ್ಷ ಇವೆಲ್ಲಾ
ಕ್ರಮವಾಗಿ ಚಾಮುಂಡಾ, ದುರ್ಗಾ, ಗಾಯತ್ರಿ, ರಘೂತ್ತಮ ಹಾಗೂ ಫಾಲಾಕ್ಷ ಎಂದಾಗಬೇಕು. ಸಂಖ್ಯಾಪದಗಳು
ಕೂಡಾ ತಪ್ಪಾಗಿವೆ. ಇಪ್ಪತ್ರೊಂಬತ್ತು, ಮೂವತ್ರೊಂಬತ್ತು ಅಂತಾ ಬಳಸುವುದು ತಪ್ಪು. (ಪುಟ ೨೫~೨೬ರ ಸಾರ: ಕ.ಬ:ದೋ.ದೌ)

ಉಚ್ಚರಣೆ ಆಯಾ ಜನರ ಭಾಷೆಯು ನೂರಾರು ವರ್ಷಗಳಿಂದ ಹೊಂದಿರುವ ಶೈಲಿಗೆ ಮಾರ್ಪಾಡಾಗುವುದು ಸಹಜ. ಮಲಯಾಳಿಗಳ ಇಂಗ್ಲೀಷಿಗೂ ಕನ್ನಡಿಗರ ಇಂಗ್ಲೀಷಿಗೂ ಇರುವ ವ್ಯತ್ಯಾಸದಂತೆ... ಇದು ತಾಯ್ನುಡಿಗೂ ಅನ್ವಯವಾಗುತ್ತದೆ. ಬೆಂಗಳೂರಿನ ಶೈಲಿ ಬೇರೆ, ಧಾರವಾಡದ್ದು ಬೇರೆ, ಮಂಗಳೂರಿನದ್ದು ಬೇರೆ. ಧೂಮಪಾನ, ಇಪ್ಪತ್ತೊಂಬತ್ತು, ಮೂವತ್ತೊಂಬತ್ತು ಅನ್ನೋದನ್ನು ಕೆಲವು ಪ್ರದೇಶಗಳ ಕನ್ನಡಿಗರು ಧೂಮ್ರಪಾನ, ಇಪ್ಪತ್ರೊಂಬತ್ತು, ಮೂವತ್ರೊಂಬತ್ತು ಎಂದು ಬಳಸೋದು ನಾಡಿನ ನಾನಾ ಪ್ರದೇಶಗಳ ವೈವಿಧ್ಯತೆ ಎಂಬಂತೆ ನೋಡೋದು ಸರಿ. ವೈವಿಧ್ಯತೆಯನ್ನು ಶಾಪ ಎಂಬಂತಲ್ಲ.


ವಿಭಕ್ತಿಗಳಲ್ಲೂ ತಪ್ಪಾಗುತ್ತಿದೆ. ಕುವೆಂಪುರವರು ತಪ್ಪು. ಕುವೆಂಪು ಅವರು ಅನ್ನಬೇಕು. ರಾಮಸ್ವಾಮಿಯವರು ಅಂದರೆ ತಪ್ಪು, ರಾಮಸ್ವಾಮಿಗಳು ಸರಿ, ಗೀತಳಿಂದ ಎನ್ನುವುದು ತಪ್ಪು ಗೀತನಿಂದ ಎನ್ನುವುದು ಸರಿ. ಅಲ್ಲಿನ, ಇಲ್ಲಿನ, ಇತ್ತೀಚಿನ ಎಂದರೆ ತಪ್ಪು. ಅಲ್ಲಿಯ, ಇಲ್ಲಿಯ, ಇತ್ತೀಚೆಯ ಮಾತ್ರಾ ಸರಿ. ನಡೆಸು, ಬೆಳೆಸು, ತೊಳೆಸು ಎಲ್ಲಾ ತಪ್ಪು. ನಡೆಯಿಸು, ಬೆಳೆಯಿಸು, ತೊಳೆಯಿಸು ಅಂತನ್ನಬೇಕು. (ಪುಟ ೩೯~೪೪ರ ಸಾರ: ಕ.ಬ:ದೋ.ದೌ)

ಆಡುನುಡಿಗೂ ಬರಹಕ್ಕೂ ವ್ಯತ್ಯಾಸ ಇದೆ. ಅಂತಹ ವ್ಯತ್ಯಾಸ ಇದ್ದಷ್ಟೂ ತೊಡಕು ಅನ್ನುವ ನಿಲುವು ಸರಿಯಾಗಿದೆ. ಆದರೆ ಅದನ್ನು ಕಡಿಮೆ ಮಾಡಲು, ಸರಿಪಡಿಸಲು ಹಿಡಿಯಬೇಕಾದ ದಾರಿ ಸರಿಯೇ ಎಂಬುದು ಪ್ರಶ್ನೆ. ಇಲ್ಲಿ ಬರೆದಂತೆ/ ಬರಹದಲ್ಲಿರುವಂತೆ ಉಚ್ಚರಿಸಬೇಕು ಎನ್ನುವುದು ಸರಿಯಲ್ಲ. ಯಾಕೆಂದರೆ ಅದು ಸಾಧಿಸಲು ಸಾಧ್ಯವೂ ಅಲ್ಲ. ಸಾಧುವೂ ಅಲ್ಲ. ಮಾತಾಡಿದಂತೆ ಬರೆಯುವುದು ಮಾತ್ರಾ ಈ ತೊಡಕನ್ನು ತಕ್ಕಮಟ್ಟಿಗೆ ನಿವಾರಿಸಬಹುದೇನೋ ಅಷ್ಟೆ. ಒಟ್ಟಲ್ಲಿ ಈ ಪಂಡಿತರ ಶಿಷ್ಟ ಕನ್ನಡ ಕಲ್ಪನೆ ಅಂಗಿಯ ಅಳತೆಗೆ ಮೈ ಹೊಂದಿಸಬೇಕೆನ್ನುವಂತೆ ಇದೆಯೇ ಹೊರತು ಮೈ ಅಳತೆಗೆ ಅಂಗಿ ಹೊಲಿಸಬೇಕು ಎನ್ನುವ ಹಾಗಿಲ್ಲ. ಹೌದಲ್ವಾ ಗುರೂ?

ರಾಷ್ಟ್ರೀಯ ಅಧ್ಯಕ್ಷರೂ ಅಂದ್ರೆ ಹಿಂಗಿರ್ಬೇಕಾ?


ಬೆಳಗಾವಿಗೆ ಬಂದಿದ್ದ ಭಾರತೀಯ ಜನತಾ ಪಕ್ಷವೆಂಬ ರಾಷ್ಟ್ರೀಯ ಪಕ್ಷದ ಮಹಾದಂಡನಾಯಕರು ಅರ್ಥಾತ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮರಾಠಿಗ ಶ್ರೀ ಶ್ರೀ ಶ್ರೀ ನಿತಿನ್ ಗಡ್ಕರಿಯವರು ಬೆಳಗಾವಿ ಗಡಿ ವಿಷಯವಾಗಿ, ತಾವು ಭಾರೀ ನಿಷ್ಪಕ್ಷಪಾತಿ ಅನ್ನುವಂತೆ ಮಾತಾಡೋ ನಾಟಕ ಮಾಡಿ ಎಡವಟ್ಟು ಮಾತಾಡಿರೋ ಸುದ್ದಿ 21.08.2010ರ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಬಂದಿದೆ ಗುರೂ!

ಬೆಳಗಾವಿ ಮತ್ತು ಮಹಾರಾಷ್ಟ್ರದ ರಾಜಕಾರಣ!

ಶ್ರೀ ಶ್ರೀ ಶ್ರೀ ಗಡ್ಕರಿಯವರು ತಮ್ಮ ಮಾತಲ್ಲಿ, ಬೆಳಗಾವಿ ವಿಷಯದಲ್ಲಿ ಪ್ರಧಾನಿಗಳು ಮಧ್ಯ ಪ್ರವೇಶಿಸಬೇಕೆಂದು ಮಹಾರಾಷ್ಟ್ರದ ನಿಲುವನ್ನು ಒಳಗೊಳಗೇ ಬೆಂಬಲಿಸಿರೋ ರೀತಿ ಹೇಳಿಕೆ ನೀಡಿ, ಆ ಮೂಲಕ ತಾವು ಮೇಲ್ನೋಟಕ್ಕೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು, ಒಳಗೊಳಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರು ಅನ್ನೋದನ್ನು ಸಾರಿದ್ದಾರೆ. ಹೇಗೇ ಅಂತೀರಾ? ಬೆಳಗಾವಿ ವಿಷಯದಲ್ಲಿ 1960ರ ದಶಕದಲ್ಲೇ ಶ್ರೀ ಸೇನಾಪತಿ ಬಾಪಟ್ ಅವರ ಉಪವಾಸ ಮುಷ್ಕರಕ್ಕೆ ಮಣಿದು, ಕರ್ನಾಟಕದ ವಿರೋಧದ ನಡುವೆಯೇ, ಕೇಂದ್ರಸರ್ಕಾರವು ಮಹಾಜನ್ ಆಯೋಗ ರಚಿಸಿತ್ತು. ಆ ವರದಿಯನ್ನು ಸಲ್ಲಿಸೋ ಮೊದಲೇ ಮಹಾರಾಷ್ಟ್ರದ ಅಂದಿನ ಮುಖ್ಯಮಂತ್ರಿಗಳಾಗಿದ್ದ ವಿ.ಪಿ.ನಾಯಕ್ ಅವರು ‘ವರದಿ ಹೇಗಿದ್ದರೂ ಒಪ್ಕೋತೀವಿ’ ಅಂದಿದ್ರು. ವರದಿ ಬಂದಮೇಲೆ ಉಲ್ಟಾ ಹೊಡೆದ ಮಹಾರಾಷ್ಟ್ರದ ರಾಜಕಾರಣಿಗಳು ಇವತ್ತಿನ ತನಕ ಸರಿಹೋಗಿಲ್ಲ. ಗಡಿ ಕಿತಾಪತೀನಾ ಇತ್ತೀಚಿಗೆ ಅವರು ಸುಪ್ರಿಂಕೋರ್ಟಿಗೆ ಒಯ್ದು, ಸಂಸತ್ತಲ್ಲಿ ಅವಕಾಶ ಸಿಕ್ಕಾಗೆಲ್ಲಾ ‘ಪ್ರಧಾನಮಂತ್ರಿ ಮಧ್ಯಸ್ಥಿಕೆ ಮಾಡ್ಲಿ, ಕೇಂದ್ರಸರ್ಕಾರ ಮಧ್ಯಸ್ಥಿಕೆ ಮಾಡ್ಲಿ’ ಅಂತಾ ಹಟಾ ಮಾಡ್ತಾನೆ ಇದಾರೆ. ಈ ರಾಷ್ಟ್ರೀಯ ಪಕ್ಷದ ಮರಾಠಿ ಅಧ್ಯಕ್ಷರು ಕೂಡಾ ಹೇಳ್ತಿರೋದು ಇದನ್ನೇ ತಾನೇ?

ರಾಷ್ಟ್ರೀಯ ಅಧ್ಯಕ್ಷರ ನಿಲುವು!

ಹೀಗೆ ರಾಷ್ಟ್ರೀಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರೋ ದೊಡ್ ಜನುಗೋಳು, ಇನ್ನೂ ವಿವಾದವನ್ನು ಜೀವಂತವಾಗಿ ಉಳಿಸಿಕೊಳ್ಳೋ ತೆರೆನಾಗಿ ಹೇಳಿಕೆ ಕೊಡೋ ಬದಲು ‘ರಾಜ್ಯಗಳ ಗಡಿ ನಿಶ್ಚಯಕ್ಕೆ, ಸ್ವಾತಂತ್ರ್ಯ ಬಂದಾಗಿನಿಂದ ಕಾಲಕಾಲಕ್ಕೆ ರಚಿಸಿರುವ ರಾಜ್ಯ ವಿಂಗಡನಾ ಸಮಿತಿಯ ತೀರ್ಮಾನಗಳಿಗೆ, ಸಂಸತ್ತು ನೇಮಿಸಿದ್ದ ಆಯೋಗದ ತೀರ್ಪಿಗೆ ಎಲ್ಲಾ ರಾಜ್ಯಗಳೂ ಒಪ್ಪಿ, ಅದರಂತೆ ನಡೆಯಬೇಕು. ಆದಕಾರಣ ಮಹಾಜನ್ ವರದಿಯೆನ್ನುವ ಸಂವಿಧಾನಬದ್ಧವಾದ ವರದಿಯೇ ಗಡಿ ತಕರಾರಿಗೆ ಅಂತಿಮ ಪರಿಹಾರ’ ಅಂತಾ ಹೇಳಬೇಕಿತ್ತಲ್ವಾ? ‘ಈಗ ಸುಪ್ರಿಂಕೋರ್ಟಿನಲ್ಲಿ ವಿಷಯ ಇದೆ, ಪ್ರಧಾನಿ ಮಧ್ಯ ಪ್ರವೇಶ ಆಗಬೇಕು...’ ಇತ್ಯಾದಿ ಮಹಾರಾಷ್ಟ್ರದ ನಿಲುವುಗಳನ್ನು ಹೇಳೋವಾಗ, ಕರ್ನಾಟಕ ಬಿಜೆಪಿಯ "ಮಹಾಜನ್ ವರದಿಯೇ ಅಂತಿಮ" ಎನ್ನುವ ನಿಲುವನ್ನು ಯಾಕೆ ಹೇಳಲಿಲ್ಲ ಅನ್ನಿಸಲ್ವಾ? ಇರಲಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಗಡ್ಕರಿಯವರು ನೀಡಿರೋ ಹೇಳಿಕೇಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ ಧುರೀಣರು ಹೇಗೆ ಪ್ರತಿಕ್ರಿಯಿಸ್ತಾರೆ ಅಂತಾ ನೋಡ್ಮಾ...!

ರಾಷ್ಟ್ರೀಯ ನಾಯಕರ ಪಕ್ಷಪಾತತನ!

ಕರ್ನಾಟಕದಿಂದ ರಾಜ್ಯಸಭೆ ಹೊಕ್ಕ ಮತ್ತೊಬ್ಬ ಬಿಜೆಪಿ ರಾಷ್ಟ್ರೀಯ ನಾಯಕರಾದ ಶ್ರೀ ವೆಂಕಯ್ಯನಾಯ್ಡು ಅವರು ಮೊನ್ನೆ ನಡಕೊಂಡಿದ್ದು ಕೂಡಾ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ನಮ್ಮ ಬಳ್ಳಾರಿಯಲ್ಲಿ ಬಿಜೆಪಿ ಮಾಡಿದ ಸಮಾವೇಶದಲ್ಲಿ, ಪಾಪಾ, ಅಷ್ಟು ದೂರದಿಂದ ಬಂದಿದ್ದ ಶ್ರೀಮತಿ ಸುಷ್ಮಾ ಸ್ವರಾಜ್ ಅವರೇ ಕನ್ನಡದಲ್ಲಿ ಮಾತಾಡೋ ಪ್ರಯತ್ನ ಮಾಡುದ್ರೆ, ಈ ಯಪ್ಪಾ ತೆಲುಗಲ್ಲಿ ಮಾತಾಡುದ್ರು. ಯಾಕ್ರಪ್ಪಾ? ಬಳ್ಳಾರಿ ಅನ್ನೋ ಅಚ್ಚಗನ್ನಡದ ಪ್ರದೇಶಾನಾ ಕರ್ನಾಟಕಕ್ಕೆ ಸೇರಿಸಿಕೊಳ್ಳಲು ಅನಕೃ ಕಾಲದಿಂದಾ ನಡೆದ ಹೋರಾಟಾನಾ, ಬಳ್ಳಾರೀನಾ ಕರ್ನಾಟಕಕ್ಕೆ ಸೇರಿಸಲು ಜೀವ ಕೊಟ್ಟ ರಂಜಾನ್ ಸಾಬ್ ಅವರ ಬಲಿದಾನದ ಕಥೇನಾ ಇವರಿಗೆ ಯಾರೂ ಹೇಳಲಿಲ್ವಾ? ಅನ್ಯಾಯವಾಗಿ ಕರ್ನಾಟಕ ಕಳೆದುಕೊಂಡು ಮೂರು ತಾಲ್ಲೂಕುಗಳ ಕಥೇನಾ ಇವರಿಗೆ ಹೇಳಲಿಲ್ವಾ? ಬಳ್ಳಾರಿ ಅನ್ನೋದು ಹೇಗೂ ಭೂಪಟದಲ್ಲಿ ಕರ್ನಾಟಕದಲ್ಲಿ ಇದೆಯಲ್ಲಾ, ಅಷ್ಟು ಸಾಕು... ಅಂದ್ಕೊಂಡು ತೆಲುಗಲ್ಲಿ ಭಾಷಣ ಮಾಡ್ಬುಟ್ರಾ ಯಜಮಾನ್ರು? ಗಡಿಭಾಗದ ಊರುಗಳಲ್ಲಿ ಆಯ ರಾಜ್ಯದ ಭಾಷೇನೆ ಕಡೆಗಣಿಸಿ, ನೆರೆ ರಾಜ್ಯದ ಭಾಷೇಲಿ ಭಾಷಣ ಮಾಡೋದು ಸುಖಾಸುಮ್ಮನೇ ಭಾಷಾ ವೈಷಮ್ಯ ಹುಟ್ಟುಹಾಕುವಂಥಾ ಪ್ರಚೋದನಾತ್ಮಕ ಕ್ರಮಾ ಆಗಲ್ವಾ? ಯಾಕೆ ಈ ರಾಷ್ಟ್ರೀಯ ನಾಯಕರು ಹೀಗೆ ಮಾಡುದ್ರು ಅಂತಾ ಕರ್ನಾಟಕದ ಒಬ್ಬರಾದರೂ ಬಿಜೆಪಿ ಧುರೀಣರು ಕೇಳುತ್ತಾರಾ ಅಂತಾ ಕುತೂಹಲ ಆಗ್ತಿದೆ ಗುರೂ!

ಇದೇನು ರಾಷ್ಟ್ರೀಯ ವಿಷಯಾನಾ?

"ಅಯ್ಯೋ, ನಿಮಗೇನಾದ್ರೂ ತಲೆ ಕೆಟ್ಟಿದೆಯಾ? ರಾಷ್ಟ್ರೀಯ ಪಕ್ಷಾ ಅಂದ್ರೆ ಅದುಕ್ಕೆ ಪ್ರಾದೇಶಿಕ ಚಿಂತನೆ ಇರಬಾರದು ಅಂತಾ ಗೊತ್ತಿಲ್ವಾ? ವೆಂಕಯ್ಯನಾಯ್ಡು ಅವರೇ ನಾನು ರಾಷ್ಟ್ರೀಯ ವಿಷಯಗಳಲ್ಲಿ ಮಾತ್ರಾ ತಲೆ ಹಾಕ್ತೀನಿ ಅಂದಿಲ್ವಾ ಪಾಪಾ, ಅದುಕ್ಕೆ ರಾಷ್ಟ್ರೀಯ ಮಟ್ಟದ ಭಾಷಣಾನಾ ಕನ್ನಡನಾಡೊಳಗೆ ಬಂದು ತೆಲುಗಲ್ಲಿ ಮಾಡ್ತಾರೆ. ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ಗಡ್ಕರಿಯವರು ಮಹಾರಾಷ್ಟ್ರದ ನಿಲುವನ್ನು ಪರೋಕ್ಷವಾಗಿ ಬೆಂಬಲುಸ್ತಾರೆ. ಇದುನ್ನ ಪ್ರಶ್ನಿಸೋದುಂಟಾ? ಅದು ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರೋದಿಲ್ವಾ" ಅಂತೀರಾ ಗುರೂ! ಅದೂ ದಿಟಾನೆ ಬುಡಿ!!

ಅಬ್ಬಾ! ಅಂತೂ ಬಂತು ಕನ್ನಡದ್ದೇ ವ್ಯಾಕರಣ!!


ಕನ್ನಡ ನುಡಿಯನ್ನು ವೈಜ್ಞಾನಿಕವಾಗಿ, ಅದರದೇ ನೆಲೆಯಲ್ಲಿ ಅಧ್ಯಯನ ಮಾಡುತ್ತಿರುವ ಕೆಲವೇ ನುಡಿಯರಿಗರಲ್ಲಿ ಮುಂಚೂಣಿಯಲ್ಲಿರುವವರು ಡಾ. ಡಿ ಎನ್ ಶಂಕರ್ ಭಟ್. ಈ ಹಿಂದೆ ಇವರು ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಎನ್ನುವ ಹೊತ್ತಗೆಯಲ್ಲಿ ಇದುವರೆಗೂ ನಮಗೆ ಕಲಿಸಲಾಗುತ್ತಿದ್ದ ವ್ಯಾಕರಣದ ಮೂಲನೆಲೆ ಕನ್ನಡದ್ದೇ ಅಲ್ಲ ಎನ್ನುವುದನ್ನು ಎಳೆಎಳೆಯಾಗಿ ಬಿಡಿಸಿದ್ದರು ಮತ್ತು ಕನ್ನಡಕ್ಕೆ ಅದರದೇ ನೆಲೆಯಲ್ಲಿ ವ್ಯಾಕರಣವನ್ನು ಬರೆಯಬೇಕಾದ ಅಗತ್ಯವನ್ನು ತಿಳಿಸಿಕೊಟ್ಟಿದ್ದರು. ಇದೀಗ ಕನ್ನಡದ್ದೇ ನೆಲೆಯ ಕನ್ನಡದ ವ್ಯಾಕರಣದ ಹೊತ್ತಗೆಯನ್ನು ಬರೆಯಲು ಮುಂದಾಗಿದ್ದಾರೆ. ಅದರ ಮೊದಲ ಭಾಗ ಇದೀಗ ಮಾರುಕಟ್ಟೆಗೆ ಬಿಡುಗಡೆಯಾಗಿದೆ.

ಈ ಹೊತ್ತಗೆಯಲ್ಲೇನಿದೆ?

ಈ ಹೊತ್ತಗೆಯ ಮೊದಲಲ್ಲಿ ಶಂಕರ ಭಟ್ ಅವರು ಹೀಗಂದಿದ್ದಾರೆ :
ಸೊಲ್ಲರಿಮೆಯ ಈ ಹೊತ್ತಗೆಯಲ್ಲಿ ಕನ್ನಡದವೇ ಆದ ಪದ ಮತ್ತು ಒಟ್ಟುಗಳನ್ನು ಬಳಸಿ ಹೊಸ ಪದಗಳನ್ನು ಹೇಗೆ ಉಂಟು ಮಾಡಲಾಗುತ್ತದೆ ಎಂಬುದನ್ನು ವಿವರಿಸಿದ್ದೇನೆ.ಅರಿಮೆಯ (ವಿಜ್ನಾನದ) ಬರಹಗಳಲ್ಲಿ ಹೊಸ ಪದಗಳನ್ನು ಹುಟ್ಟುಹಾಕಬೇಕೆಂದಿರುವವರು ಸಂಸ್ಕ್ರುತದ ಮೊರೆ ಹೋಗುವ ಬದಲು, ಕನ್ನಡದಲ್ಲೇನೇ ತಮಗೆ ಬೇಕಾಗಿರುವ
ಪದಗಳನ್ನು ಉಂಟುಮಾಡಲು ಇದು ತಿಳಿವನ್ನೀಯಬಲ್ಲದು.
ನನ್ನ ಇತ್ತೀಚೆಗಿನ ಕನ್ನಡ ವ್ಯಾಕರಣ ಯಾಕೆ ಬೇಕು? ಎಂಬ ಹೊತ್ತಗೆಯಲ್ಲಿ ಹಲವು ಬಗೆಯ ಕಲಿಕೆ ಮತ್ತು ಉದ್ಯೋಗಗಳಲ್ಲಿ ಕನ್ನಡದ ಸೊಲ್ಲರಿಮೆ ಹೇಗೆ ನೆರವಿಗೆ ಬರಬಲ್ಲದು ಎಂಬುದನ್ನು ವಿವರಿಸಿದ್ದೇನೆ. ಅಂತಹ ನೆರವನ್ನು ಕೊಡಬಲ್ಲ ಹೊತ್ತಗೆಗಳನ್ನು ಬರೆಯುವವರಿಗೆ ಈ ಕನ್ನಡ ಬರಹದ ಸೊಲ್ಲರಿಮೆ ಅಡಿಗಟ್ಟನ್ನೊದಗಿಸುವಂತಾಗಲಿ ಎಂಬುದು ನನ್ನ ಹಾರೈಕೆ.
ಅರಿಮೆಯ ಬರಹಕ್ಕೆ ಬೇಕಾಗಿ ಬರುವ ಪದಗಳನ್ನೆಲ್ಲ ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ ಮತ್ತು ಅಂತಹ ಪದಗಳನ್ನು ಬಳಸುವುದರಿಂದ ತೊಂದರೆಯೇನೂ ಆಗುವುದಿಲ್ಲ ಎಂಬುದನ್ನು ತೋರಿಸಿಕೊಡುವುದೂ ಈ ಹೊತ್ತಗೆಯ ಒಂದು ಗುರಿಯಾಗಿದೆ.

ಇದು ಬರಿಯ ಮೊದಲ ಕಂತು!
ಕನ್ನಡ ಬರಹದ ಸೊಲ್ಲರಿಮೆಯ ಮೊದಲ ಕಂತು ಮಾತ್ರವೇ ಈ ಹೊತ್ತಗೆಯಲ್ಲಿ ಅಚ್ಚಾಗಿದೆ. ಇದರಲ್ಲಿ ಪ್ರಮುಖವಾಗಿ ಸೊಲ್ಲರಿಮೆಯ ಅಗತ್ಯ, ಸ್ವರೂಪಗಳ ಮುನ್ನೋಟ, ಹೆಸರುಪದಗಳ ಕುರಿತ ಭಾಗಗಳಿವೆ. ಶ್ರೀಯುತ ಶಂಕರ್ ಭಟ್ ಅವರು ಮುಂದಿನ ಕಂತುಗಳ ರಚನೆಯಲ್ಲಿ ತೊಡಗಿದ್ದಾರೆ. ಸದ್ಯದಲ್ಲೇ ಎರಡನೇ ಭಾಗವೂ ಸಿದ್ಧವಾಗಲಿದೆ. ಹೆಗ್ಗೋಡಿನ ಬಾಶಾ ಪ್ರಕಾಶನದವರು ಹೊರತಂದಿರುವ ಈ ಹೊತ್ತಗೆಯನ್ನು ಮಂಗಳೂರಿನ ಅತ್ರಿ ಬುಕ್ ಸೆಂಟರ್ ಅವರು ಹಂಚಿಕೆ/ ಮಾರಾಟ ಮಾಡುತ್ತಿದ್ದಾರೆ. ಬೆಂಗಳೂರಿನ ನವಕರ್ನಾಟಕ, ಟೋಟಲ್ ಕನ್ನಡ.ಕಾಂ ಮಳಿಗೆಗಳೂ ಸೇರಿದಂತೆ ಹೆಸರಾಂತ ಹೊತ್ತಗೆಯಂಗಡಿಗಳಲ್ಲಿ ಸಿಗುತ್ತಿದೆ. ಕನ್ನಡದ ಸೊಲ್ಲರಿಮೆಯನ್ನು ಅರಿಯಬೇಕೆಂದವರಿಗೆ ಇದೊಂದು ಒಳ್ಳೆಯ ಹೊತ್ತಗೆ. ನೀವೂ ಕೊಂಡು ಓದಿ, ನಿಮ್ಮವರಿಗೂ ತಿಳಿಸಿ.

ಭಾರತದ ಒಪ್ಪುಕೂಟ ಮತ್ತು ಸ್ವಾತಂತ್ರ್ಯ!!

ಇವತ್ತು ಭಾರತ ದೇಶದ 64ನೇ ಸ್ವಾತಂತ್ರ್ಯ ದಿನಾಚರಣೆ. ಎಲ್ಲೆಡೆ ಮೂರ್ಬಣ್ಣದ ಬಾವುಟ ಮುಗಿಲೆತ್ತರಕ್ಕೆ ಹಾರಾಡುತ್ತಿದೆ. ಕೆಂಪುಕೋಟೆಯ ಮೇಲಿಂದ, ಮಾಣಿಕ್ ಶಾ ಬಯಲಿಂದ ದೇಶಪ್ರೇಮದ ಕರೆ, ಜೈ ಹಿಂದ್ ಎಂಬ ಕೂಗು ಮುಗಿಲು ಮುಟ್ಟುತ್ತಿವೆ. ಆದ್ರೆ ಇದೇ ಸಮಯದಲ್ಲಿ ಕೇಂದ್ರಸರ್ಕಾರವು ರಾಜ್ಯಗಳ ಆರ್ಥಿಕ ಸ್ವತಂತ್ರವನ್ನು ಮೊಟಕು ಮಾಡಕ್ಕೆ ಹುನ್ನಾರ ನಡೆಸಿ ಸ್ವಾತಂತ್ರ್ಯ ಅನ್ನೋದನ್ನೇ ವಿಡಂಬನೆ ಮಾಡಕ್ಕೆ ಮುಂದಾಗಿದೆ ಗುರೂ! ವಿಷಯ ಏನೂಂದ್ರೆ ಕಳೆದ ವಾರ "ಸರಕು ಮತ್ತು ಸೇವಾ ತೆರಿಗೆ" ಗೆ ಸಂಬಂಧಿಸಿದ್ದ ಒಂದು ತಿದ್ದುಪಡಿಯನ್ನು ಸಂವಿಧಾನಕ್ಕೆ ಮಾಡಲು ಕೇಂದ್ರಸರ್ಕಾರ ಮುಂದಾಗಿದೆ. ಈ ತಿದ್ದುಪಡಿಯಲ್ಲಿ ಕೇಂದ್ರದ ಅರ್ಥಸಚಿವರಿಗೆ ರಾಜ್ಯಗಳ ಸಮಿತಿಯ ನಿಲುವನ್ನು, ಅದಕ್ಕೆ ಬಹುಮತ ಇದ್ದಾಗಲೂ, ತಿರಸ್ಕರಿಸೋ... ವಿಟೋ ಹಕ್ಕನ್ನು ಕೊಡಮಾಡಲಾಗಿದೆ. ಸದ್ಯಕ್ಕೆ ಇದನ್ನು ರಾಜ್ಯಗಳು ತಿರಸ್ಕರಿಸಿವೆ ಅನ್ನೋ ಸುದ್ದಿಯೇನೋ ಬಂದಿದೆ.

ಒಪ್ಪುಕೂಟವೆಂದರೆ ಅಧಿಕಾರ ವಿಕೇಂದ್ರೀಕರಣ!

ಭಾರತದ ಸ್ವರೂಪ ಒಪ್ಪುಕೂಟದ್ದು. ಈ ಸ್ವರೂಪ ಯಾರೋ ಕೊಟ್ಟುಹೋದ ಕೊಡುಗೆ ಅಲ್ಲಾ. ಬೇರೆ ಬೇರೆ ನುಡಿ, ಪ್ರದೇಶ, ವಾತಾವರಣ, ಸಂಸ್ಕೃತಿ, ಆಚರಣೆ, ನಂಬಿಕೆಗಳ ಜನಾಂಗಗಳಿರೋ ಭಾರತಕ್ಕೆ ಇದು ಅನಿವಾರ್ಯವಾದ ಸ್ವರೂಪ ಇದು. ಹಾಗಾಗಿ ಇಲ್ಲಿ ಒಪ್ಪುಕೂಟದ ಅಡಿಪಾಯವೇ ಸಮಾನ ಗೌರವ ಮತ್ತು ಆರ್ಥಿಕ ಸ್ವಾಯತ್ತತೆ. ಹೆಚ್ಚು ಹೆಚ್ಚು ಅಧಿಕಾರ ವಿಕೇಂದ್ರೀಕರಣ. ಕೇಂದ್ರಸರ್ಕಾರ ಹೆಚ್ಚು ಹೆಚ್ಚು ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಬದಲಿಗೆ ಇರೋ ಅಧಿಕಾರವನ್ನು ಕಿತ್ತುಕೊಳ್ಳುವ ಈ ಮನಸ್ಥಿತಿ ಒಪ್ಪುಕೂಟದ ಕಲ್ಪನೆಗೆ ವಿರುದ್ಧವಾಗಿದೆ. ಈಗಾಗಲೇ ಇರುವ ಅಧಿಕಾರಗಳನ್ನು ಮತ್ತಷ್ಟು ಬಲಪಡಿಸೋ ಬದಲು ಹೀಗೆ ರಾಜ್ಯಗಳನ್ನು ಬಲಹೀನಗೊಳಿಸೋದು ಮುಂದೆ ಸಾಗೋ ಪ್ರಗತಿ ರಥಾನ ಹಿಂದೆ ಹಿಂದೆ ಓಡಿಸೋ ಹಾಗಿದೆ...
Related Posts with Thumbnails